ಬೆಂಗಳೂರು : ಕೋವಿಡ್ ಕಾಲಮಾನದಲ್ಲಿ ನಡೆದ ಅವ್ಯವಹಾರಗಳು ಹಾಗೂ ಇತರ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನ ಜಯನಗರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿ ಹಾಗೂ ಇತರ ವ್ಯವಹಾರಗಳಲ್ಲಿ ಮಾರುಕಟ್ಟೆ ದರ ಮೀರಿ, ಒಂದಕ್ಕೆ ಹತ್ತು ಪಟ್ಟು ದುಬಾರಿ ಬಿಲ್ ಪಾವತಿ ಮಾಡಲಾಗಿದೆ. ಈ ವಿಚಾರವನ್ನು ತನಿಖೆ ನಡೆಸಬೇಕೆಂದು ಆರಂಭದಿಂದಲೂ ಒತ್ತಡಗಳಿವೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಕೂಡ ವರದಿ ನೀಡಿವೆ ಎಂದರು.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪರಿಶೀಲನೆ ನಡೆಸಿ ನ್ಯಾಯಾಂಗ ತನಿಖೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸ್ಸು ಮಾಡಿದೆ ಎಂದು ಹೇಳಿದರು.
ಅನಾಥ ಶವಗಳು, ರಸ್ತೆಬದಿಗಳಲ್ಲಿ ಮೃತಪಟ್ಟವರ ಪಾರ್ಥೀವ ಶರೀರಗಳನ್ನು ಮಾರಾಟ ಮಾಡಿಕೊಳ್ಳುವಂತಹ ಮೆಡಿಕಲ್ ಮಾಫಿಯಾ ತಲೆ ಎತ್ತುತ್ತಿದೆ ಎಂಬ ಆರೋಪ ಗಂಭೀರವಾದದ್ದು. ಇದನ್ನು ಸರ್ಕಾರ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಮಾಹಿತಿ ಕಲೆ ಹಾಕಲಾಗುವುದು. ಆರೋಪ ಮಾಡಿದವರಿಂದಲೂ ವಿವರಣೆ ಪಡೆದು ನಂತರ ತನಿಖೆಗೆ ಸಮಿತಿ ರಚಿಸಬೇಕೇ ಎಂಬುದರ ಬಗ್ಗೆ ನಿರ್ಧರಿಸುವುದಾಗಿ ಹೇಳಿದರು.
ತುರ್ತು ಸೇವೆಯಾದ ಆರೋಗ್ಯ ಕವಚ ಯೋಜನೆ ಸುಧಾರಣೆಗೆ ರಚಿಸಲಾಗಿರುವ ಸಮಿತಿ ವಾರದೊಳಗಾಗಿ ವರದಿ ನೀಡಲಿದ್ದು, ಮುಂದಿನ 2-3 ತಿಂಗಳೊಳಗಾಗಿ ಹೊಸ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದರು.
ಇತ್ತೀಚೆಗಷ್ಟೇ 170 ಹೊಸ ಆಂಬುಲೆನ್ಸ್ಗಳನ್ನು ಖರೀದಿಸಲಾಗಿದೆ. ಬಹಳ ವರ್ಷಗಳಿಂದಲೂ 108 ಸೇವೆ ಟೆಂಡರ್ ಇಲ್ಲದೆ ಹಳೆಯ ಒಪ್ಪಂದದ ಮೇಲೆಯೇ ಮುಂದುವರೆದುಕೊಂಡು ಬಂದಿವೆ. ಒಂದು ಕಾಲದಲ್ಲಿ ಮುಂಚೂಣಿಯಲ್ಲಿದ್ದ ಸೇವೆ ಈಗ ಹಿಂದುಳಿದಿದೆ. ಆಧುನಿಕ ತಂತ್ರಜ್ಞಾನ ಅಳವಡಿಕೆ, ಕ್ಷಿಪ್ರ ಪ್ರತಿಕ್ರಿಯೆ ಸೇರಿದಂತೆ ಹಲವರು ಲೋಪದೋಷಗಳಿವೆ. ಇವುಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.
ಕಳೆದ ಬಜೆಟ್ನಲ್ಲಿ ಘೊಷಿಸಲಾದ ಆಶಾಕಿರಣ ಯೋಜನೆಯನ್ನು ಇದೇ ತಿಂಗಳಿನಲ್ಲಿ ಉದ್ಘಾಟಿಸಲಾಗುವುದು. ಕಾಂಟ್ರಾಕ್ಟ್ ಲೆನ್ಸ್ ಮತ್ತು ಶಸ್ತ್ರಚಿಕಿತ್ಸೆ ಮೂಲಕ ನೆರವಾಗುವ ಮಹತ್ವದ ಯೋಜನೆ ಶೀಘ್ರವೇ ಜಾರಿಯಾಗಲಿದೆ ಎಂದರು.
ಆರೋಗ್ಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ನೇಮಕಾತಿಯಾಗಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ ಮತ್ತು ಡಿ ದರ್ಜೆ ಸಿಬ್ಬಂದಿಗಳ ಕೊರತೆ ಇದೆ. ಇದನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಖಾಸಗಿ ಕ್ಲಿನಿಕ್ ಸೇರಿದಂತೆ ಇತರೆಡೆ ಕೆಲಸ ಮಾಡಲು ಅವಕಾಶ ಇದೆ. ಆದರೆ ಅದರಿಂದ ಸರ್ಕಾರಿ ಆಸ್ಪತ್ರೆಗಳ ಸೇವೆಗೆ ತೊಂದರೆ ಆಗಬಾರದೆಂಬ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದರು.
ಜಯನಗರ ಆಸ್ಪತ್ರೆಯಲ್ಲಿ ರೇಡಿಯೋಲಾಜಿಸ್ಟ್ ಕೊರತೆ ಇದೆ ಎಂದು ಹೇಳಲಾಗಿದೆ. ಒಂದು ವಾರದೊಳಗಾಗಿ ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲಾಗುತ್ತಿದೆ ಎಂದರು.
ದಕ್ಷಿಣ ಭಾರತದ ರಾಜ್ಯದಲ್ಲಿ ತಮಿಳುನಾಡು, ಕೇರಳಗಿಂತಲೂ ರಾಜ್ಯದ ಆರೋಗ್ಯ ಸೇವೆ ಹಿಂದುಳಿದಿರುವ ಬಗ್ಗೆ ವರದಿಯಿದೆ. ಇದನ್ನು ಸುಧಾರಿಸಲು ಸಾಕಷ್ಟು ಕ್ರಮ ಕೈಗೊಳ್ಳಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ವ್ಯವಸ್ಥೆ ಕಲ್ಪಿಸಿ ಜೀವನಶೈಲಿ ಹಾಗೂ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು. ಏಕ ಬಳಕೆಯ ಡಯಾಲಿಸಿಸ್ ಸೇವೆ, 108 ತುರ್ತು ಸಹಾಯವಾಣಿ ಸುಧಾರಣೆ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.
ಶಾಸಕ ಸಿ.ಕೆ.ರಾಮು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಚಿವರ ಪರಿಶೀಲನೆ ವೇಳೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ವರ್ಗಾವಣೆಗೆ ಪತ್ರ ನೀಡಿದಾಗ ಸಚಿವರು ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…