ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಬಿಜೆಪಿಗೆ ಸಂಬಂಧಿಸಿದಂತೆ ಹಲವು ಉತ್ತಮ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಮಾಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ನೇಮಕವನ್ನು ನಾನು ನಿರೀಕ್ಷಿಸಿರಲಿಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಎಂದು ಹೈಕಮಾಂಡ್ ಮುಂದೆ ಮನವಿ ಮಾಡಿಲ್ಲ, ಬದಲಾಗಿ ಹೈ ಎಲ್ಲವನ್ನು ಅಳೆದು ತೂಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ವಿಜಯೇಂದ್ರ ನೇಮಕದ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ, ಬೇಕಿದ್ದರೇ ಯಾರನ್ನಾದರೂ ಕೇಳಿ ಎಂದರು.
ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಪಕ್ಷಕ್ಕೆ ಇನ್ನೂ ಹೆಚ್ಚಿನ ಬೆಂಬಲ ಬಂದಿದೆ. ಮುಂದಿನ ಲೊಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ಕೇಂದ್ರಕ್ಕೆ ಕೊಡುಗೆ ನೀಡಲಾಗುವುದು. ವೀರಶೈವ ಲಿಂಗಾಯಿತ ಸಮಾಜ ಸದಾ ನಮ್ಮೊಂದಿಗಿದೆ, ಪಕ್ಷ ಸಂಘಟನೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುವುದಾಗಿ ಬಿಎಸ್ವೈ ನುಡಿದರು.





