ಕಲಬುರಗಿ : ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಬೆಂಬಲಿಗ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ್ ಚೌಹಾಣ್ ಮನೆ, ಹೋಟೆಲ್, ಕ್ರಷರ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ನಲ್ಲಿ ಸಕ್ರಿಯರಾಗಿಬಿಟ್ಟರೆ ತೊಂದರೆ ಕೊಡುತ್ತೇವೆ ಅನ್ನೋ ಸಂದೇಶ ನೀಡಲು ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಇನ್ನು ಅರವಿಂದ್ ಚೌಹಾಣ್ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ಕೀಳು ಮಟ್ಟಕ್ಕೆ ಇಳಿದು, ಐಟಿ ದಾಳಿ ನಡೆಸಿದೆ. ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದಕ್ಕೆ ಐಟಿ ರೇಡ್ ಮಾಡಲಾಗಿದೆ. ಬಿಜೆಪಿ ಸಿದ್ಧಾಂತಗಳನ್ನು ಮಾರಿಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ರು. ಕಲಬುರಗಿ ನಗರದಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಕೂಡ ಘಟನೆ ಸಂಬಂಧ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಚುನಾವಣೆ ಸೋಲ್ತಾರೆ. ಸೋಲುವ ಭಯ ಆರಂಭವಾದಾಗ ಸರ್ಕಾರಿ ಏಜನ್ಸಿಗಳನ್ನು ಬಳಕೆ ಮಾಡ್ತಾರೆ. ಕಲಬುರಗಿ ಜಿಲ್ಲೆಯಲ್ಲಿ ಕೂಡಾ ಐಟಿ ಅಸ್ತ್ರ ಬಳಸಿದ್ದಾರೆ. ಕಾಂಗ್ರೆಸ್ ಬೆಂಬಲಿಗರು, ಕಾರ್ಯಕರ್ತರ ಮನೆ ಮೇಲೆ ಐಟಿ ದಾಳಿ ನಡೆದಿದೆ. ವಾಹೀದ್ ಅಲಿ, ಮಹಮ್ಮದ್ ಜಾಗೀರದಾರ್, ಅರವಿಂದ್ ಚೌಹಾಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂದು ಬಿಜೆಪಿ ವಿರುದ್ಧ ಗರಂ ಆದರು





