ಹುಬ್ಬಳ್ಳಿ : ನನ್ನ ಮಾತಿಗೆ ಬೆಲೆ ಕೊಟ್ಟು ಮುನಿಗಳು ದೇಹ ತ್ಯಾಗ ನಿರ್ಧಾರ ಕೈ ಬಿಟ್ಟಿದ್ದಾರೆ. ಜೈನ ಸಮುದಾಯದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸಿದ್ಧ. ನಮ್ಮ ಪೊಲೀಸರೇ ಸಮರ್ಥವಾಗಿದ್ದು, ಯಾವುದೇ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಜೈನಮುನಿ ಗುಣಧರನಂದಿ ಮಹಾರಾಜರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದು ಬಹಳ ವಿಭಿನ್ನ ಸಂದರ್ಭ, ಈ ವೇಳೆ ಮುನಿಗಳನ್ನು ಭೇಟಿ ಮಾಡಿದ್ದೇವೆ. ದೂರು ಬಂದ ತಕ್ಷಣ ಪೊಲೀಸ್ ಇಲಾಖೆ ಕಾರ್ಯ ಪ್ರವೃತ್ತರಾಗಿದ್ದು, ಆರೋಪಿಗಳನ್ನು ಬಂಧಿಸಿ ಓರ್ವ ಡಿವೈಎಸ್ಪಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಮತ್ತಷ್ಟು ವಿಚಾರ ಹೊರಬರಲಿದೆ. ನಾನು ವರೂರಿನ ಮುನಿಗಳ ಹತ್ತಿರ ಕರೆ ಮಾಡಿ ಮಾತನಾಡಿದ್ದೆ, ಸರ್ಕಾರ ಜೈನ ಸಮುದಾಯದ ಜೊತೆಗೆ ಇರುವ ಭರವಸೆ ನೀಡಿದ್ದೆ. ಹೀಗಾಗಿ ನಾನೇ ಮಂದಿರಕ್ಕೆ ಬಂದು ಮುನಿಗಳ ಭೇಟಿ ಮಾಡಿರುವೆ ಎಂದು ಹೇಳಿದರು.
ನನ್ನ ಮಾತಿಗೆ ಬೆಲೆ ಕೊಟ್ಟು ಮುನಿಗಳು ದೇಹ ತ್ಯಾಗ ನಿರ್ಧಾರ ಕೈ ಬಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿ ಭೇಟಿಯ ಬಗ್ಗೆ ಮಾಹಿತಿ ಪಡೆದರು. ಸರ್ಕಾರ ಜೈನ ಸಮುದಾಯದ ಪರವಾಗಿದೆ ಎಂಬ ಭರವಸೆಯನ್ನು ಸಿಎಂ ನೀಡಿದ್ದಾರೆ.
ಜೈನ ಮುನಿಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜೈನ ಮುನಿಗಳು ತಂಗಲು ವ್ಯವಸ್ಥೆ ಮಾಡಲಾಗುತ್ತದೆ. ಜೈನ ಅಭಿವೃದ್ಧಿ ಮಂಡಳಿ ಕ್ರಮ ಸ್ಥಾಪಿಸುವ ಬಗ್ಗೆ ಸಿಎಂ ಅವರಿಗೆ ತಿಳಿಸುವೆ. ಆದಷ್ಟು ಬೇಗ ಈ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತದೆ. ಜೈನ ಮಂದಿರಗಳಿಗೆ ಮತ್ತಷ್ಟು ಭದ್ರತಾ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಇಂತಹ ಘಟನೆಗಳು ಮತ್ತೆ ನಡೆಯಬಾರದು, ಹೀಗಾಗಿ ಕಠಿಣವಾದ ಕ್ರಮಗಳನ್ನು ತೆಗೆದುಕೊಳ್ಳುತ್ತವೆ. ಕರ್ನಾಟಕ ಸರ್ವ ಜನಾಂಗದ ಶಾಂತಿತೋಟವನ್ನಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಶ್ರಮಿಸುತ್ತದೆ. ಇದು ಘೋರವಾದ ಹತ್ಯೆಯಾಗಿದ್ದು, ಇದನ್ನು ಖಂಡಿಸಿ ಅಮೆರಿಕ, ಯೂರೋಪ್ ಸೇರಿದಂತೆ ಎಲ್ಲ ಕಡೆ ಉಪವಾಸ ನಡೆಯುತ್ತಿದೆ. ನಾನು ಜೈನ ಸಮುದಾಯದ ಕ್ಷಮೆಯನ್ನು ಕೇಳುವೆ. ದಯವಿಟ್ಟು ವಿಶ್ವದ ಎಲ್ಲಾ ಮುನಿಗಳು ಉಪವಾಸವನ್ನು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದರು.
ನಮ್ಮ ಸರ್ಕಾರ ಜೈನ ಸಮುದಾಯದ ಪರವಾಗಿದೆ. ಇದಕ್ಕೆ ಯಾರು ರಾಜಕೀಯ ಬಣ್ಣವನ್ನು ಕೊಡಬಾರದು, ನಿಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳೋದು ಬೇಡ. ಚುನಾವಣೆ ಸಮಯದಲ್ಲಿ ರಾಜಕೀಯ ಮಾಡಿ. ಆದರೆ, ಇಂತಹ ಸಂದರ್ಭಗಳಲ್ಲಿ ಸರ್ಕಾರದ ಮೇಲೆ ಭರವಸೆಯಿಟ್ಟು ವಿವೇಚನೆಗೆ ಬಿಡಬೇಕು ಎಂದು ಹೇಳಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಿಬಿಐ ತನಿಖೆಗೆ ಆಗ್ರಹಿಸಿರುವ ಬಗ್ಗೆ ಮಾತನಾಡಿ, ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ರೀತಿ ಮಾತನಾಡುತ್ತಿರುವುದು ವಿಪರ್ಯಾಸ. ಯಾರೋ ದಾರಿಯಲ್ಲಿ ಹೋಗುವವರ ರೀತಿ ಮಾತನಾಡುತ್ತಿದ್ದಾರೆ. ನಾನು ಅವರಿಗೆ ಈ ರೀತಿ ಮಾತನಾಡಬೇಡಿ ಎಂದು ಮನವಿ ಮಾಡುವೆ. ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿದ್ದು, ಅವರೇ ತನಿಖೆ ಮಾಡುತ್ತಾರೆ. ಯಾವುದೇ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಹೇಳಿದರು.
ಅದರ ಜೊತೆ ಮೈಸೂರಿನಲ್ಲಿ ಯುವ ಬ್ರಿಗೇಡ್ ಸದಸ್ಯ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೊಲೆ ಮಾಡಿದವರು ಯಾರೇ ಇರಲಿ ಅವರನ್ನು ಶೀಘ್ರ ಬಂಧನ ಮಾಡುತ್ತವೆ ಎಂದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…