ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ.
ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳುವ 44 ವಿಮಾನಗಳು ರದ್ದಾಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸುವ 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ.
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಬಂದ್ ಇಂದು ಬೆಳಗ್ಗೆ 6 ಗಂಟೆಯಿಂದ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಕರ್ನಾಟಕ ಬಂದ್ಗೆ ರಾಜ್ಯದ ವಿವಿಧ ಕಡೆಗಳಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕ ಬಂದ್ ಹಿನ್ನೆಲೆ ಹೆಚ್ಚಿನ ಪ್ರಯಾಣಿಕರು ಕೊನೆ ಕ್ಷಣದಲ್ಲಿ ತಮ್ಮ ವಿಮಾನದ ಟಿಕೆಟ್ಗಳನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕಾರಣಕ್ಕೆ ಹಲವು ವಿಮಾನಯಾನ ಸಂಸ್ಥೆಗಳು ವಿಮಾನ ಹಾರಾಟಗಳನ್ನು ರದ್ದು ಮಾಡಿವೆ ಎಂದು ತಿಳಿದುಬಂದಿದೆ.





