Mysore
28
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗೋದಾದ್ರೆ ನನ್ನ ಸಂಪೂರ್ಣ ಬೆಂಬಲವಿದೆ : ಡಿಕೆಶಿ

ಬೆಂಗಳೂರು : ”ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ನನ್ನ ಸಂಪೂರ್ಣ ಬೆಂಬಲವಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಖರ್ಗೆ ಅವರು ಏನು ಇಚ್ಛೆ ಪಡುತ್ತಾರೋ, ಅದನ್ನು ಈಡೇರಿಸುವ ಕೆಲಸ ನನ್ನದು. ಅವರು ಸಿಎಂ ಆಗಲು ಬಯಸಿದರೆ ಅವರೊಟ್ಟಿಗೆ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅವರ ಹಿರಿತನ, ತ್ಯಾಗವನ್ನು ಗೌರವಿಸುತ್ತೇನೆ, ಎಂದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್‌ ಈ ಸ್ಪಷ್ಟ ಉತ್ತರ ನೀಡಿದರು. ”ಖರ್ಗೆ ಅವರು ನನ್ನ ನಾಯಕರು, ಅವರೇ ನನ್ನ ಅಧ್ಯಕ್ಷರು ಮತ್ತು ನನಗಿಂತ 20 ವರ್ಷಗಳ ಹಿರಿಯರು. ಅವರು ರಾಜ್ಯ ಮತ್ತು ದೇಶದ ಆಸ್ತಿ. ಪಕ್ಷ ಯಾವ ತೀರ್ಮಾನ ಮಾಡುತ್ತೋ, ಅದಕ್ಕೆ ನಾನು ಬದ್ಧವಾಗಿರುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಖರ್ಗೆ ಪಕ್ಷಕ್ಕಾಗಿ ಹಲವು ತ್ಯಾಗ : ”ಖರ್ಗೆ ಅವರು ಪಕ್ಷಕ್ಕಾಗಿ ಹಲವು ಸಂದರ್ಭಗಳಲ್ಲಿ ತ್ಯಾಗ ಮಾಡಿದ್ದಾರೆ. ಪಕ್ಷದ ಒತ್ತಾಸೆಯಂತೆ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಮಧ್ಯರಾತ್ರಿ ರಾಜೀನಾಮೆ ಕೊಟ್ಟರು. ತಮ್ಮ ಬದ್ಧತೆ ಮತ್ತು ಪರಿಶ್ರಮದಿಂದ ಬ್ಲಾಕ್‌ ಮಟ್ಟದಿಂದ ಎಐಸಿಸಿ ಅಧ್ಯಕ್ಷ ಸ್ಥಾನದವರೆಗೆ ಬೆಳೆದವರು. ಅವರು ರಾಜ್ಯದ ಮುಖ್ಯಮಂತ್ರಿಯಾಗಲು ಬಯಸಿದರೆ, ಅವರ ಜತೆ ಕೆಲಸ ಮಾಡಲು ಸಂತೋಷ ಪಡುತ್ತೇನೆ,” ಎಂದು ಹೇಳಿದರು.

ಕೈಗೆ ಅಧಿಕಾರ ಬಿಜೆಪಿಗೂ ಗೊತ್ತು : ”ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬರುತ್ತದೆ ಎಂಬುದು ಬಿಜೆಪಿ ಸರಕಾರಕ್ಕೂ ಗೊತ್ತಾಗಿದೆ. ಕಾಂಗ್ರೆಸ್‌ ಪಕ್ಷದ ಗೆಲುವನ್ನು ತಡೆಯಲು ಸಾಧ್ಯವಿಲ್ಲ. ಬಿಜೆಪಿ ಸರಕಾರ ತೊಲಗಬೇಕು ಎಂದು ರಾಜ್ಯದ ಎಲ್ಲವರ್ಗದ ಜನ ಬಯಸಿದ್ದಾರೆ,” ಎಂದು ಶಿವಕುಮಾರ್‌ ಹೇಳಿದರು.

ಖಾಸಗಿ ಉದ್ಯೋಗ ವಿನಿಮಯ ಕೇಂದ್ರ : ”ಯುವಜನರಿಗೆ ಉದ್ಯೋಗ ನೀಡುವುದು ಕಾಂಗ್ರೆಸ್‌ ಬದ್ಧತೆ. ರಾಜ್ಯದಲ್ಲಿಅಧಿಕಾರಕ್ಕೆ ಬಂದ ತಕ್ಷಣ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕಾಳಜಿ ವಹಿಸುತ್ತದೆ. ಸರಕಾರದ ನಾನಾ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿ ಜತೆಗೆ, ಖಾಸಗಿ ಉದ್ಯೋಗದ ವಿನಿಮಯ ಕೇಂದ್ರವನ್ನೂ ಸ್ಥಾಪಿಸಲಾಗುವುದು,” ಎಂದು ಕೆಪಿಸಿಸಿ ಅಧ್ಯಕ್ಷರು ಈ ಸಂದರ್ಭದಲ್ಲಿ ಪ್ರಕಟಿಸಿದರು. ”ನಿರುದ್ಯೋಗಿಗಳು ಈ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹೆಸರು ನೋಂದಾಯಿಸಿ, ಉದ್ಯೋಗದ ಮಾಹಿತಿ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಪಕ್ಷವು ಈಗಾಗಲೇ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷದ ಅವಧಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ವ್ಯಾಸಂಗ ಮಾಡಿದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ ನಿರ್ಧಾರ ಪ್ರಕಟಿಸಿದೆ. ರಾಜ್ಯದ ಎಲ್ಲ ನಿರುದ್ಯೋಗಿಗಳು ಆನ್‌ಲೈನ್‌ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬೇಕು,” ಎಂದು ಸಲಹೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!