Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

ಬೆಂಕಿಯಿಂದ ಖಾಸಗಿ ಬಸ್ ಸ್ಟೋಟ : 26 ಮಂದಿ ಸಜೀವ ದಹನ

ಮುಂಬೈ : ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ನ ಟಯರ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸ್ಟೋಟಗೊಂಡ ಪರಿಣಾಮ 26 ಮಂದಿ ಸಜೀವವಾಗಿ ದಹನಗೊಂಡು 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಸಮೃದ್ಧಿ ಮಹಾಮಾರ್ಗ್ ಎಕ್ಸ್ ಪ್ರೆಸ್‌ ವೇ ನಲ್ಲಿ ನಡೆದಿದೆ.

ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.ಇನ್ನು ಏಳು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.ಬಸ್ ಚಾಲಕ ಅವಘಡದಿಂದ ಪಾರಾಗಿ ಸುರಕ್ಷಿತವಾಗಿದ್ದಾರೆ. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಪ್ರಯಾಣಿಕರ ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು ಎನ್ನಲಾಗಿದ್ದು, ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ಸುರಕ್ಷಿತವಾಗಿ ಪಾರಾದವರಲ್ಲಿ ಚಾಲಕ ಮತ್ತು ಸಹಾಯಕ ಸೇರಿದ್ದಾರೆ. ಈ ಪ್ರಯಾಣಿಕರಲ್ಲಿ ಹೆಚ್ಚಿನವರು ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್ ನಿವಾಸಿಗಳಾಗಿದ್ದಾರೆ.

ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡು ಟೈರ್ ಸ್ಫೋಟಗೊಂಡು, ನಂತರ ಪಲ್ಟಿಯಾಗಿ ಹೊತ್ತಿ ಉರಿದಿದೆ. ಪರಿಣಾಮ ಬಸ್ ನಲ್ಲಿ ಸಿಹಿ ನಿದ್ರೆಗೆ ಜಾರಿದ್ದ 26 ಮಂದಿ ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಪ್ರಯಾಣಿಕ ಬಳಿಕ ಮೃತಪಟ್ಟಿದ್ದಾರೆ.

ಬಸ್‍ನಿಂದ 25 ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಬಸ್‍ನಲ್ಲಿ ಒಟ್ಟು 33 ಮಂದಿ ಪ್ರಯಾಣಿಕರಿದ್ದರು. 6-8 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಬುಲ್ಧಾನಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬುಲ್ಧಾನ ಎಸ್ಪಿ ಸುನೀಲ್ ಕಡಸಾನೆ ಹೇಳಿದ್ದಾರೆ.

ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್ ಗೆ ಸೇರಿದ್ದಾಗಿದ್ದು, ಬಸ್ ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್ ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.ಬೆಂಕಿ ಕಾಣಿಸಿಕೊಂಡ ನಂತರ ಕೇವಲ ಎಂಟು ಮಂದಿ ಪ್ರಯಾಣಿಕರು ಮಾತ್ರ ಹೊರಬರಲು ಸಾಧ್ಯವಾಗಿದೆ. ಇನ್ನು ಬಸ್ ಗೆ ಬೆಂಕಿ ಬಿದ್ದ ಸುದ್ದಿ ತಿಳಿದ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಬಸ್ಸಿನಿಂದ 25 ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬಸ್ ಮೊದಲು ಅಪಘಾತಕ್ಕೆ ಒಳಗಾಗಿದ್ದು, ಅದರಿಂದಾಗಿ ಬೆಂಕಿ ಹೊತ್ತಿಕೊಂಡಿದೆ.ಎಕ್ಸ್ ಪ್ರೆಸ್‌ ವೇನಲ್ಲಿರುವ ಕಂಬವೊಂದಕ್ಕೆ ಡಿಕ್ಕಿ ಹೊಡೆದ ಬಸ್ ಉರುಳಿ ಬಿದ್ದಿದೆ. ಇದರಿಂದ ಅದಕ್ಕೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಬಸ್ ಚಾಲಕ ಬದುಕುಳಿದಿದ್ದು, ಟೈರ್ ಸ್ಫೋಟದ ಬಳಿಕ ನಿಯಂತ್ರಣ ತಪ್ಪಿ ಬಸ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾಗಿ ಹೇಳಿದ್ದಾನೆ” ಎಂದು ಅವರು ಹೇಳಿದ್ದಾರೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ಈಗ ಮೃತದೇಹಗಳನ್ನು ಗುರುತಿಸುವುದು ಮತ್ತು ಅವುಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡುವುದು ಈ ಸಮಯದಲ್ಲಿ ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ಬುಲ್ಧಾನಾ ಎಸ್‍ಪಿ ಸುನಿಲ್ ಕಡಸಾನೆ ತಿಳಿಸಿದ್ದಾರೆ.

ಬಸ್ ಮೊದಲು ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಳಿಕ ಬದುಕುಳಿದ ಪ್ರಯಾಣಿಕರು ಬಸ್ಸಿನ ಬಾಗಿಲು ಒದ್ದು ಮತ್ತು ಗಾಜುಗಳನ್ನು ಒಡೆದು ಹೊರಬಂದಿದ್ದಾರೆಂದು ತಿಳಿದುಬಂದಿದೆ.

ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್ ನ ಇಂಜಿನ್ ನಲ್ಲಿ ಸ್ಪಾರ್ಕ್ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಬಸ್ ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!