ಬೆಂಗಳೂರು: ವಾಸ್ತು ಸರಿ ಇಲ್ಲ ಎಂಬ ಕಾರಣಕ್ಕೆ ಮುಚ್ಚಲಾಗಿದ್ದ ಸಿಎಂ ಕಚೇರಿಯ ದ್ವಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತೆರೆಸಿದ್ದಾರೆ.
ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ, ವಾಸ್ತು ಸರಿ ಇಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ತಕ್ಷಣವೇ ತೆರೆಸಿದರು.
ಸಭೆಗೆ ಬರುತ್ತಿದ್ದ ಅವರು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಸಿಎಂ ಆ ದ್ವಾರದಲ್ಲೇ ನಿಂತರು. ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿಗೆ ಪ್ರವೇಶಿಸಿದರು.
ಆರೋಗ್ಯಕರ ಮನಸ್ಸು, ಸ್ವಚ್ಛ ಹೃದಯ, ಜನಪರ ಕಾಳಜಿ, ಒಳ್ಳೆಯ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು. ಸಭೆ ಮುಗಿದ ಬಳಿಕ ದಕ್ಷಿಣ ದ್ವಾರದ ಮೂಲಕವೇ ಸಿಎಂ ಹೊರಗೆ ಬಂದರು.





