ಮದ್ದೂರು: ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಶೋಭೆ ತರುವಂತದ್ದಲ್ಲ ಎಂದು ಉಡುಪಿಯ ಪೇಜಾವರ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಭಾನುವಾರ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿಷೇಧ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರ ಸಮಾಜದಲ್ಲಿ ಶೋಭೆ ತರುವುದಿಲ್ಲ. ಇದರಿಂದ ಸಮಾಜದಲ್ಲಿ ಪರಸ್ಪರ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಆಳುವ ಸರ್ಕಾರಗಳು ಕಾನೂನು ಮಾಡುವಾಗ ಅದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಕೇವಲ ಒಂದು ಸಮಾಜವನ್ನು ಗುರಿಯಾಗಿಟ್ಟುಕೊಂಡು ಕಾನೂನು ರೂಪಿಸುವುದು ಸರಿಯಲ್ಲ ಎಂದು ಕಿಡಿಕಾರಿದರು.
ಆಯೋಧ್ಯೆ ನಿರ್ಮಾಣಕ್ಕೆ ಕಾರ್ಯ ಚಟುವಟಿಕೆ ನಿಲ್ಲಿಸಬೇಡಿ: ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ ನಮ್ಮ ಕಾರ್ಯ ಚಟುವಟಿಕೆ ಇಷ್ಟಕ್ಕೆ ಮುಗಿಯಬಾರದು. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸುವುದು ನಮ್ಮ ಗುರಿಯಾಗಬೇಕು ಎನ್ನುವುದು ನಮ್ಮ ಅಪೇಕ್ಷೆಯಾಗಿದೆ. ಇದಕ್ಕೆ ಆರ್ಥಿಕವಾಗಿ ಸದೃಢರಾದವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.





