Mysore
24
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.

ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ಅವರು ಪುತ್ತೂರು ನಗರ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಿದ್ದಾರೆ.

ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಅವರು ಸುಳ್ಳು ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಅಲ್ಲದೇ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಈ ಸಂಬಂಧ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದಾರೆ.

ಇದೇ ತಿಂಗಳ 22ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಹರೀಶ್ ಪೂಂಜಾ, 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ಹೇಳಿದ್ದರು.

24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯ ಪರ ನೀವು ವೋಟ್ ಕೇಳಿದ್ದೀರ. ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರ. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಇದೀಗ ಬಿಜೆಪಿ ಶಾಸಕನ ಆರೋಪ ವಿವಾದಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಆಕ್ರೊಶಕ್ಕೆ ಕಾರಣವಾಗಿದ್ದು, ಇದು ಮುಂದೆ ಯಾವ ಹಂತಕ್ಕೆ ಮುಟ್ಟಲಿದೆ ಎಂದು ಕಾದುನೋಡಬೇಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!