Mysore
25
overcast clouds
Light
Dark

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ, ಬಿ.ಟಿ.ಲಲಿತಾನಾಯಕ್, ವಸುಂಧರಾ ಭೂಪತಿ ಸೇರಿದಂತೆ 7 ಕ್ಕೂ ಹೆಚ್ಚು ಸಾಹಿತಿಗಳಿಗೆ ಪದೇಪದೇ ಜೀವಬೆದರಿಕೆಯ ಪತ್ರಗಳು ಬರುತ್ತಿದ್ದವು. ಈ ಬಗ್ಗೆ ಚಿತ್ರದುರ್ಗ, ಕೊಟ್ಟೂರು, ಸಂಜಯನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಹಾರೋಹಳ್ಳಿ, ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣಗಳು ಸೇರಿ ಒಟ್ಟು 7 ಪ್ರಕರಗಣಗಳು ದಾಖಲಾಗಿದ್ದವು.

ಈ ಹಿಂದೆ ರಾಜ್ಯದಲ್ಲಿ ಸಾಹಿತಿ ಎಂ.ಎಂ.ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಹಿನ್ನೆಲೆಯಲ್ಲಿ ಸಾಹಿತಿಗಳಿಗೆ ಬರುತ್ತಿರುವ ಬೆದರಿಕೆ ಪತ್ರ ಆತಂಕ ಮೂಡಿಸಿತ್ತು. ಖುದ್ದು ಮುಖ್ಯಮಂತ್ರಿ, ಗೃಹಸಚಿವರುಗಳೇ ಸಾಹಿತಿಗಳೊಂದಿಗೆ ಸಭೆ ನಡೆಸಿ ಸಮಾಲೋಚಿಸಿದ್ದರು. ಪ್ರಕರಣವನ್ನು ಕಳೆದ ತಿಂಗಳು ಸಿಸಿಬಿ ತನಿಖೆಗೆ ವಹಿಸಲಾಗಿತ್ತು.

ಪತ್ರದ ಹಸ್ತಾಕ್ಷರ ಹಾಗೂ ಪೊಸ್ಟ್ ಮಾಡಲಾಗಿದ್ದ ಸ್ಥಳಗಳ ಜಾಡು ಹಿಡಿದ ಸಿಸಿಬಿ ಪೊಲೀಸರು ಸೆ.28 ರಂದು ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 7 ಪ್ರಕರಣಗಳಲ್ಲಷ್ಟೇ ಅಲ್ಲದೆ, ಆರೋಪಿ ವಿರುದ್ಧ ಈ ಮೊದಲು ಎರಡು ಪ್ರಕರಣಗಳು ದಾಖಲಾಗಿದ್ದ ಮಾಹಿತಿ ಇದೆ.

7 ಮಂದಿಯ ಜೊತೆಗೆ ಇನ್ನೂ ಹಲವು ಸಾಹಿತಿಗಳಿಗೆ ಆರೋಪಿ ಬೆದರಿಕೆ ಪತ್ರ ಬರೆದಿರುವ ಬಗ್ಗೆ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈತ ಹಿಂದೂ ಸಂಘಟನೆಯೊಂದರ ಕಾರ್ಯಕರ್ತ ಎಂದು ಹೇಳಲಾಗಿದೆ.

ಬೆದರಿಕೆ ಪತ್ರ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ-ಸಿಎಂ ಸಿದ್ದರಾಮಯ್ಯ

ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿ ಬಂಧಿಸಲಾಗಿದ್ದು, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್​ಬುಕ್ ಪೋಸ್ಟ್ ಮಾಡಿದ್ದಾರೆ.

ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ರಾಜಕೀಯ ನಾಯಕರು, ಧರ್ಮ ಗುರುಗಳಿಗೆ ಪತ್ರಗಳ ಮೂಲಕ ಜೀವ ಬೆದರಿಕೆ ಒಡ್ಡುತ್ತಿದ್ದ ದಾವಣಗೆರೆ ಮೂಲದ ಶಿವಾಜಿ ರಾವ್ ಜಾಧವ್ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ.

ಆರೋಪಿಯ ಜೊತೆ ಯಾವುದೇ ಸಂಘಟನೆ ಅಥವಾ ವ್ಯಕ್ತಿಗಳು ಶಾಮೀಲಾಗಿದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನ ಕೈಗಳಿಗೆ ಒಪ್ಪಿಸುವ ಮೂಲಕ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದಿದ್ದಾರೆ.

ನಾಡಿನ ಪ್ರತಿ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಿದೆ. ಸಮಾಜಮುಖಿ ಧ್ವನಿ ಅಡಗಿಸಲು ಯತ್ನಿಸುವ ದುಷ್ಟ ಶಕ್ತಿಗಳೆಡೆಗೆ ನಮ್ಮದು ‘ಜೀರೊ ಟಾಲರೆನ್ಸ್’ ಎಂದು ತಿಳಿಸಿದ್ದಾರೆ

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ