BREAKING NEWS

ಅರಮನೆ ನಗರಿಗೆ ಬಂತು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು

160 ಕಿ.ಮೀ ವೇಗದ ಹೈಸ್ಪೀಡ್‌ ರೈಲಿನಿಂದ ಮೈಸೂರು- ಬೆಂಗಳೂರು ಈಗ ಇನ್ನಷ್ಟು ಹತ್ತಿರ

ಮೈಸೂರು: ಒಂದೆಡೆ ದಶಪಥ ರಸ್ತೆ. ಇನ್ನೊಂದೆಡೆ ವಂದೇ ಭಾರತ್ ಎಕ್ಸ್‌ ಪ್ರೆಸ್‌ ರೈಲು. ಮೈಸೂರು ಮತ್ತು ಬೆಂಗಳೂರು ಈಗ ಇನ್ನಷ್ಟು ಹತ್ತಿರವಾಗಿದೆ. ಎಲ್ಲವೂ ಸರಿ ಹೋದರೆ ಮುಂದೊಂದು ದಿನ ಅವಳಿ ನಗರಗಳ ನಡುವಣ ಸಂಚಾರಕ್ಕೆ ಕೇವಲ ಒಂದು ಗಂಟೆ ಸಾಕು. ಈ ಸಂಚಾರ ಕ್ರಾಂತಿ ಉಭಯ ನಗರಗಳ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಭಾವಿಸಲಾಗಿದೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ (Vande Bharat Express train) ರೈಲಿಗೆ ಪ್ರದಾನಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.
ಕೆಲವೇ ವರ್ಷಗಳ ಹಿಂದೆ ಹೈಸ್ಪೀಡ್‌ ರೈಲು ಎಂದರೆ ಜಪಾನ್‌ನಂತಹ ದೇಶಗಳನ್ನು ಉಲ್ಲೇಖಿಸಲಾಗುತ್ತಿತ್ತು. ವಿದೇಶ ಪ್ರಯಾಣಕ್ಕೆ ತೆರಳಿದವರು ಬುಲೆಟ್‌ ಟ್ರೈನ್‌ ಗಳಲ್ಲಿ ಸಂಚರಿಸಿ ಸಂಭ್ರಮಿಸುತ್ತಿದ್ದರು. ಈಗ ಅದು ನಮ್ಮ ನೆಲದಲ್ಲಿಯೇ ಸಾಕಾರಗೊಂಡಿದೆ. 160 ಕಿ.ಮೀ. ವೇಗದಲ್ಲಿ ಸಂಚರಿಸಬಲ್ಲ ರೈಲು ನವೆಂಬರ್‌ 11ರಿಂದ ಮೈಸೂರು – ಬೆಂಗಳೂರು–&ಚೆನ್ನೈ ಮಾರ್ಗದಲ್ಲಿ ಓಡಾಡಲಿದೆ. ತಕ್ಷಣಕ್ಕೆ ಈ ರೈಲು ಇಷ್ಟೊಂದು ವೇಗದಲ್ಲಿ ಸಂಚರಿಸಬಲ್ಲ ಹಳಿ ವ್ಯವಸ್ಥೆ ನಮ್ಮಲ್ಲಿಲ್ಲ. ಆದರೆ ವಂದೇ ಭಾರತ್ ಎಕ್ಸ್‌ ಪ್ರೆಸ್‌ ರೈಲು ಈ ವೇಗದಲ್ಲಿ ಸಂಚರಿಸಬಲ್ಲುದು ಎನ್ನುವುದೇ ನಮಗೆ ಹೆಮ್ಮೆಯ ವಿಷಯವಾಗಿದೆ.
ಸೋಮವಾರ ಮುಂಜಾನೆ ಚೆನ್ನೈನಿಂದ ಹೊರಟು ಮಧ್ಯಾಹ್ನಕ್ಕೆ ಮುನ್ನ ಮೈಸೂರು ನಿಲ್ದಾಣಕ್ಕೆ ಆಗಮಿಸಿರುವ ರೈಲು ಕರ್ನಾಟಕದ ರೈಲ್ವೆ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದೆ. ಪ್ರಾಯೋಗಿಕ ಸಂಚಾರದ ಭಾಗವಾಗಿ ಮುಂಜಾನೆ 5.50ಕ್ಕೆ ಚೆನ್ನೈನ ಎಂ.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಹೊರಟ ರೈಲು ಬೆಳಗ್ಗೆ 10.20 ಕ್ಕೆ ಬೆಂಗಳೂರಿಗೆ ಆಗಮಿಸಿದೆ. ಅಲ್ಲಿಂದ 10.30ಕ್ಕೆ ಹೊರಟು 12.10 ನಿಮಿಷಕ್ಕೆ ಮೈಸೂರು ನಿಲ್ದಾಣ ತಲುಪಿದೆ. ಎರಡು ನಗರಗಳ ನಡುವಿನ 504 ಕಿಲೋ ಮೀಟರ್ ದೂರವನ್ನು ಸುಮಾರು ಆರೂವರೆ ಗಂಟೆಗಳಲ್ಲಿ ಕ್ರಮಿಸಿರುವ ರೈಲು ಮುಂದಿನ ದಿನಗಳಲ್ಲಿ ಇನ್ನಷ್ಟು ಕಡಿಮೆ ಅವಧಿಯಲ್ಲಿ ತಲುಪಲಿದೆ.

ರಾಜ್ಯದ ಮೊದಲ, ದೇಶದ 5ನೇ ವಂದೇ ಭಾರತ್ ರೈಲು

2019ರಲ್ಲಿ ಮೊದಲ ಬಾರಿಗೆ ಪ್ರಯಾಣ ಆರಂಭಿಸಿದ ವಂದೇ ಭಾರತ್ ಪ್ರಸ್ತುತ ನಾಲ್ಕು ರೈಲುಗಳ ಸೇವೆಯನ್ನು ನೀಡುತ್ತಿದೆ. ಮೈಸೂರು ಮತ್ತು ಚೆನ್ನೈ ನಡುವೆ ಆರಂಭವಾಗುತ್ತಿರುವ ರೈಲು ಐದನೆಯದ್ದಾಗಿದೆ. ಈಗಾಗಲೇ ದೆಹಲಿ- ವಾರಾಣಸಿ, ದೆಹಲಿ- ಶ್ರೀಮಾತಾ ವೈಷ್ಣೋದೇವಿ, ಮುಂಬೈ- ಗಾಂಧಿನಗರ, ದೆಹಲಿ- ಹಿಮಾಚಲ ಪ್ರದೇಶದ ಉನಾ ನಡುವೆ ವಂದೇ ಭಾರತ್ ರೈಲುಗಳು ಚಲಿಸುತ್ತಿವೆ. ಮೈಸೂರು, ಚೆನ್ನೈ ನಡುವಿನ ಪ್ರಯಾಣ ದರ ಎಕಾನಮಿ ಕ್ಲಾಸ್‌ ಗೆ 921 ರೂ. ಎಕ್ಸಿಕ್ಯುಟಿವ್ ಕ್ಲಾಸ್‌ ಗೆ 1880 ರೂ. ಎಂದು ನಿಗದಿಪಡಿಸಲಾಗಿದೆ. ಮೈಸೂರು, ಬೆಂಗಳೂರು ನಡುವಿನ ಪ್ರಯಾಣದರ ಎಕಾನಮಿ ಕ್ಲಾಸ್‌ ಗೆ 368 ರೂ., ಎಕ್ಸಿಕ್ಯುಟಿವ್ ಕ್ಲಾಸ್ ಗೆ 768 ರೂ.ನಿಗದಿ ಮಾಡಲಾಗಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ವಿಶೇಷತೆಗಳೇನು?

ಚೆನ್ನೈನ ಪೆರಂಬೂರಿನಲ್ಲಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ ಸಿದ್ಧಗೊಂಡಿರುವ ಈ ರೈಲಿನ ವಿಶೇಷಗಳು ಹತ್ತಾರು. ಸದ್ಯದ ಮಟ್ಟಿಗೆ ಇದು ದೇಶದ ಅತ್ಯಂತ ವೇಗದ ರೈಲು. ಗರಿಷ್ಠ 160 ಕಿ.ಮೀ. ವೇಗದಲ್ಲಿ ಓಡುವ ರೈಲು ಸೊನ್ನೆಯಿಂದ 100 ಕಿ.ಮೀ ಸ್ಪೀಡ್‌ ಗೆ ವೇಗ ಪಡೆದುಕೊಳ್ಳಲು ಕೇವಲ 52 ಸೆಕೆಂಡ್ ಸಾಕು. ವಿಶ್ವದ ಅತ್ಯಂತ ವೇಗದ ರೈಲುಗಳ ಪೈಕಿ ಒಂದಾದ ಜಪಾನಿನ ಬುಲೆಟ್ ರೈಲು ಈ ವೇಗವನ್ನು ತಲುಪಲು 54.6 ಸೆಕೆಂಡ್‌ ಗಳನ್ನು ತೆಗೆದುಕೊಳ್ಳುತ್ತದೆ. ಇಡೀ ರೈಲನ್ನು ಏರೋಡೈನಾಮಿಕ್ಸ್ ಮಾದರಿಯಲ್ಲಿ ನಿರ್ಮಾಣ ಮಾಡಲಾಗಿದೆ. ಇದು ಗಾಳಿಯ ತಡೆಯನ್ನು ಭೇದಿಸಿ ರೈಲು ವೇಗವಾಗಿ ಚಲಿಸಲು ಸಹಾಯ ಮಾಡುತ್ತದೆ.
ವಿಮಾನದಲ್ಲಿರುವ ಮಾದರಿಯಲ್ಲಿ ಸೀಟುಗಳನ್ನು ನಿರ್ಮಿಸಲಾಗಿದೆ. ಹವಾನಿಯಂತ್ರಿತ, ಎಕಾನಮಿ ಮತ್ತು ಪ್ರೀಮಿಯಂ ಕ್ಲಾಸ್‌ ಗಳನ್ನು ಹೊಂದಿದೆ. ಆನ್‌ ಬೋರ್ಡ್ ಉಪಾಹಾರದ ವ್ಯವಸ್ಥೆ ಇದೆ, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್ ಪಾಯಿಂಟ್, ರೀಡಿಂಗ್ ಲೈಟ್ ವ್ಯವಸ್ಥೆ, ಸ್ವಯಂ ಚಾಲಿತ ಬಾಗಿಲು, ಸಿಸಿಟಿವಿ, ಬಯೋ ಶೌಚಾಲಯಗಳನ್ನು ಹೊಂದಿದೆ. 16 ಬೋಗಿಗಳನ್ನು ಹೊಂದಿದ್ದು, 384 ಮೀಟರ್ ಉದ್ದವಿದೆ.ರೈಲಿನ ವೇಗ ಅಧಿಕವಾಗಿರುವುದರಿಂದ ಪ್ರಯಾಣದ ಸಮಯ ಶೇಕಡಾ 25ರಿಂದ 45ರವರೆಗೆ ಕಡಿಮೆಯಾಗಲಿದೆ. ಪ್ರತಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅವಳಿ ಇಂಜಿನ್‌ ಬೋಗಿ ಸೇರಿ 1,180 ಪ್ರಯಾಣಿಕರ ಸೀಟಿನ ಸಾಮರ್ಥ್ಯವನ್ನು ಹೊಂದಿದೆ.

ಮೂರು ವರ್ಷಗಳಲ್ಲಿ ಐದು ವಂದೇ ಭಾರತ್ ರೈಲು

ದೇಶದಲ್ಲಿರುವ ರೈಲು ಸೇವೆಯ ವೇಗವನ್ನು ವೃದ್ಧಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ವಂದೇ ಭಾರತ್ ರೈಲುಗಳ ಉತ್ಪಾದನೆಗೆ ಅನುಮತಿಯನ್ನು ನೀಡಿತ್ತು. 2019ರ ಫೆ.15ರಂದು ಮೊದಲ ರೈಲಿಗೆ ಚಾಲನೆ ನೀಡಲಾಯಿತು. ಈ ರೈಲು ಶೇ.85ರಷ್ಟು ದೇಶೀಯವಾಗಿ ನಿರ್ಮಾಣ ಮಾಡಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಹೊಸ ತಲೆಮಾರಿನ 400 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ಯೋಜನೆ ರೂಪಿಸಲಾಗಿದೆ. ಆಗ ವಿಶ್ವದ ಅತಿ ದೊಡ್ಡ ರೈಲ್ವೆ ಸಂಪರ್ಕ ಜಾಲ ಹೊಂದಿರುವ ಭಾರತದ ರೈಲ್ವೆಯ ಚಹರೆ ಬದಲಾಗಲಿದೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

3 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

4 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

5 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

11 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

11 hours ago