ನವದೆಹಲಿ : ಎರಡು ವಾರಗಳ ಕಾಲ ಶಾಂತಿಯಿಂದಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ರಾಜ್ಯದ ಉಖ್ರುಲ್ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಿಟಾನ್ ಸಮೀಪದ ಥೋವೈ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಮುಂಜಾನೆಯೇ ಗುಂಡಿನ ಸದ್ದು ಕೇಳಿಬಂದಿದ್ದು, ಭದ್ರತಾ ಪಡೆಗಳು ಆ ಪ್ರದೇಶವನ್ನು ತಲುಪಿದ ನಂತರವೇ ಗುಂಡಿನ ಚಕಮಕಿ ನಿಂತಿದೆ.
ಮೃತದೇಹಗಳನ್ನು ವಶಕ್ಕೆ ಪಡೆಯುವ ಮೊದಲು ಸುತ್ತಮುತ್ತಲಿನ ಗ್ರಾಮಗಳು ಹಾಗೂ ಅರಣ್ಯ ಪ್ರದೇಶಗಳಲ್ಲಿ ನಾಗರಿಕ ಸಮಾಜದ ಗುಂಪುಗಳಿಂದ ಸಂಪೂರ್ಣ ಶೋಧ ಕಾರ್ಯಾಚರಣೆ ನಡೆಸಲಾಯಿತು.
ಕುಕಿ ಹಾಗೂ ಮೈತೇಯಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಹಾಗೂ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಪರಿಶಿಷ್ಟ ಪಂಗಡಗಳ (ಎಸ್ ಟಿ) ಸ್ಥಾನಮಾನಕ್ಕಾಗಿ ಮೈತೇಯಿಗಳು ಬೇಡಿಕೆ ಇಟ್ಟ ಮೇಲೆ ಮೇ 3 ರಂದು ಹಿಂಸಾಚಾರ ಭುಗಿಲೆದ್ದಿತ್ತು.