ಬೆಂಗಳೂರು : ತಮ್ಮ ಸಂಸ್ಥೆಯ ಬಸ್ ಮತ್ತು ಲಾರಿ ನಡುವಿನ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಕೆಎಸ್ಆರ್ ಟಿಸಿ ತಿಳಿಸಿದೆ.
ಚಾಮರಾಜನಗರ ವಿಭಾಗದ ನಂಜನಗೂಡು ಘಟಕದ ಕೆಎಸ್ಆರ್ ಟಿಸಿ ಬಸ್ ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಸಂಚರಿಸುವಾಗ ಜೂ.18ರ ಮಧ್ಯಾಹ್ನ ಸುಮಾರು 1.45 ಗಂಟೆಯಲ್ಲಿ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಲಾರಿಯು ಬಸ್ಸಿನ ಬಲಭಾಗದ ಹಿಂಬದಿಯ ಕಿಟಕಿಯ ಬಳಿ ಢಿಕ್ಕಿ ಹೊಡೆದು ಅಪಘಾತವಾಗಿದೆ. ಈ ಅಪಘಾತದಲ್ಲಿ ಕಿಟಕಿಗಳ ಬಳಿಯ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ ಎಂದು ಪ್ರಕಟಣೆಯಲ್ಲಿ ಕೆಎಸ್ಆರ್ ಟಿಸಿ ಹೇಳಿದೆ.
ಹೆಚ್.ಡಿ.ಕೋಟೆ ತಾಲೂಕು ಮಾಗುಡಿಲು ನಿವಾಸಿ ಶಾಂತ ಕುಮಾರಿ(33) ಎಂಬುವರ ಬಲಗೈ ತುಂಡಾಗಿದೆ. ನಂಜನಗೂಡು ತಾಲೂಕು ಹಾಗೂ ಹುಲ್ಲಹಳ್ಳಿ ನಿವಾಸಿ ರಾಜಮ್ಮ (50) ಅವರ ಬಲಗೈಗೆ ತೀವ್ರ ಪೆಟ್ಟಾಗಿದೆ. ನಿಗಮದ ಅಕಾರಿಗಳು ಸ್ಥಳಪರಿಶೀಲನೆ ನಡಿಸಿದ್ದು, ಗಾಯಾಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆಯ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.
ಲಾರಿ ಚಾಲಕನ ವಿರುದ್ಧ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್ಐ.ಆರ್ ದಾಖಲಾಗಿದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಹಾಗೆ ಕಿಟಿಕಿಯ ಮೂಲಕ ಬಸ್ಸನ್ನು ಹತ್ತುವಾಗ ನಡೆದಿರುವ ಘಟನೆ ಇದಲ್ಲ ಎಂದು ಕೆಎಸ್ಆರ್ ಟಿಸಿ ಸ್ಪಷ್ಟಪಡಿಸಿದೆ.





