ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ಕೈಗೆ ಬರಲೇಬೇಕು, ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.
ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು ವಿಶ್ವಾಸದಿಂದ ನುಡಿದರು.
ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು.
ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.
ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ, ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ. ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಲಹೆ ನೀಡಿದರು.
ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…