BREAKING NEWS

ಮೈಸೂರು, ಚಾ.ನಗರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವು ಖಚಿತ: ಸಿ.ಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ಕೈಗೆ ಬರಲೇಬೇಕು, ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.

ನಾವು ನಡೆಸಿರುವ ಹಲವು‌ ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ‌ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು‌ ವಿಶ್ವಾಸದಿಂದ ನುಡಿದರು.

ನಮ್ಮ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸಿಗುತ್ತಿದೆ. ನಾವು ನುಡಿದಂತೆ ನಡೆದಿದ್ದೇವೆ. ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು‌. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇವೆ. ನನ್ನ ಹೆಸರಿನಲ್ಲೇ ರಾಮ ಇದೆ ಎಂದರು. ‌

ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.

ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ನನ್ನ ಬಗ್ಗೆ, ನಮ್ಮ ನಾಯಕರ ಬಗ್ಗೆ, ನಮ್ಮ ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಾ, ಸುಳ್ಳುಗಳ ಆಧಾರದಲ್ಲೇ ಚುನಾವಣೆ ಮಾಡುತ್ತಿದೆ ಎಂದು ಟೀಕಿಸಿದರು.

ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ದ ದೇವೇಗೌಡರು, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು ಈಗ ಬಿಜೆಪಿ ಜತೆ ಸೇರಿದ್ದಾರೆ. ತಮ್ಮ ಅಳಿಯ ಮಂಜುನಾಥ್ ಅವರನ್ನು ಬಿಜೆಪಿಗೆ ಕಳಿಸಿದ್ದಾರೆ. ಮೊದಲು ನೀನು ಹೋಗಿರು, ಆಮೇಲೆ ನಾವೂ ಬರ್ತೀವಿ ಎನ್ನುವ ರೀತಿ ಅಳಿಯನನ್ನು ಬಿಜೆಪಿಗೆ ಕಳಿಸಿದ್ದಾರೆ. ಅದಕ್ಕೇ ತಮ್ಮ ಪಕ್ಷದ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ತೆಗೆದುಹಾಕುವುದು ಉತ್ತಮ ಎಂದು ಸಲಹೆ ನೀಡಿದರು.

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ. ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

8 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

12 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

13 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

13 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

13 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

14 hours ago