Mysore
24
overcast clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

ಚುನಾವಣಾ ನೀತಿ ಸಂಹಿತೆಯ ನೀತಿ ನಿಯಮಗಳೇನು ? : ಇಲ್ಲಿದೆ ಮಾಹಿತಿ

ಬೆಂಗಳೂರು : ಚುನಾವಣೆ ಬಂದಾಗಲೆಲ್ಲಾ ಚುನಾವಣಾ ನೀತಿಸಂಹಿತೆಯದ್ದೇ ಸದ್ದು. ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎಂದು ಹೇಳಲಾಗುತ್ತದೆ.
ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು ಜಾರಿಯಲ್ಲಿರುತ್ತದೆ. ಸರ್ಕಾರ, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ.
ಆಡಳಿತಾರೂಢ ಪಕ್ಷ, ಸರ್ಕಾರದ ವಿವಿಧ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ-ಮಂಡಳಿಗಳು, ಸ್ಥಳೀಯ ಪೌರ ಸಂಸ್ಥೆಗಳು ಸೇರಿದಂತೆ ಸರ್ಕಾರದಿಂದ ಹಣಕಾಸಿನ ನೆರವು ಪಡೆಯವ ಪ್ರತಿಯೊಂದು ಸಂಸ್ಥೆ ಅಥವಾ ಕಚೇರಿಗಳು ಸೇರಿದಂತೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ನೀತಿ ಸಂಹಿತೆ ಅನ್ವಯವಾಗುತ್ತದೆ.
ಸರ್ಕಾರ ಹೊಸ ಯೋಜನೆ, ಕಾರ್ಯಕ್ರಮ ಘೋಷಣೆ ಅಥವಾ ಅನುಷ್ಠಾನ ಮಾಡುವಂತಿಲ್ಲ. ಉದ್ಘಾಟನೆ, ಅಡಿಗಲ್ಲು, ಶಂಕುಸ್ಥಾಪನೆ ನೆರವೇರಿಸುವಂತಿಲ್ಲ. ಹೊಸ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ಹಣಕಾಸು ಮಂಜೂರು ಮಾಡುವಂತಿಲ್ಲ. ಹೊಸದಾಗಿ ಕ್ರಿಯಾ ಯೋಜನೆ ರೂಪಿಸುವಂತಿಲ್ಲ, ಟೆಂಡರ್ ಕರೆಯುವಂತಿಲ್ಲ, ಕರೆದಿದ್ದರೆ ಅದನ್ನು ಅಂತಿಮಗೊಳಿಸುವಂತಿಲ್ಲ, ಅಂತಿಮಗೊಂಡಿದ್ದರೆ ಕಾರ್ಯಾದೇಶ ನೀಡುವಂತಿಲ್ಲ.
ಚಾಲ್ತಿ ಯೋಜನೆ ಮತ್ತು ಕಾರ್ಯಕ್ರಮಗಳಿಗೆ ನೀತಿ ಸಂಹಿತೆ ಅನ್ವಯವಾಗುವುದಿಲ್ಲ. ಆದರೆ, ಅಂತಹ ಕಾರ್ಯಕ್ರಮಗಳಿಗೆ ಹೊಸ ಫಲಾನುಭವಿಗಳನ್ನು ಆಯ್ಕೆ ಮಾಡುವಂತಿಲ್ಲ.
ಸಚಿವರು ಮತ್ತು ಶಾಸಕರು ಸರ್ಕಾರಿ ವಾಹನ ಬಳಸುವಂತಿಲ್ಲ, ಅಧಿಕಾರಗಳು ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸುವಂತಿಲ್ಲ, ಸರ್ಕಾರಿ ವಸತಿ ಗೃಹಗಳನ್ನು ಬಳಸುವಂತಿಲ್ಲ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಅಧಿಕಾರಿಗಳ ಸಭೆ ಕರೆಯುವಂತಿಲ್ಲ, ಅಂತಹ ಅಧಿಕಾರಿಗಳು ಸಹ ಸಚಿವರು, ಶಾಸಕರನ್ನು ಭೇಟಿ ಮಾಡುವಂತಿಲ್ಲ. ವಿಶೇಷ ಸಂದರ್ಭಗಳಿದ್ದರೆ ಚುನಾವಣಾ ಆಯೋಗದ ಪೂರ್ವಾನುಮತಿ ಪಡೆದುಕೊಳ್ಳಬೇಕು.
ಸಚಿವರು ತಮಗೆ ಹಂಚಿಕೆಯಾಗಿರುವ ಅಧಿಕೃತ ಸರ್ಕಾರಿ ನಿವಾಸದಿಂದ ಕಚೇರಿಗೆ ಬರಲು ಮಾತ್ರ ಸರ್ಕಾರಿ ವಾಹನ ಬಳಸಬಹುದು. ಸಚಿವರು ಬೆಂಗಳೂರು ಬಿಟ್ಟು ಹೊರಗಡೆ ಅಧಿಕೃತ ಭೇಟಿಗೆ ತೆರಳಬೇಕಾದರೆ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತವಾಗಿ ತಿಳಿಸಿ, ಚುನಾವಣಾ ಆಯೋಗದ ಗಮನಕ್ಕೆ ತರಬೇಕು.
ಬರ, ಪ್ರವಾಹ ಪರಿಸ್ಥಿತಿ ಪರಿಶೀಲನೆ, ಪರಿಹಾರ ಬಿಡುಗಡೆ ಮತ್ತು ಕುಡಿಯುವ ನೀರು ಪೂರೈಕೆ, ಗೋಶಾಲೆಗಳನ್ನು ತೆರೆಯಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ. ಆದರೆ, ಇದಕ್ಕೆ ಚುನಾವಣಾ ಆಯೋಗದ ಪೂರ್ವಾನುಮತಿ ಬೇಕು.
ನಾಗರಿಕ ಸೌಲಭ್ಯಗಳಾದ ರಸ್ತೆ, ಸಮುದಾಯ ಭವನ, ಆಟದ ಮೈದಾನ ಮುಂತಾದವುಗಳು ಈಗಾಗಲೇ ಪೂರ್ಣಗೊಂಡಿದ್ದರೆ, ಅಧಿಕೃತ ಕಾರ್ಯಕ್ರಮಗಳಲ್ಲದೆ ಅಧಿಕಾರಿಗಳ ಮೂಲಕ ಅವುಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಬಹುದು.
ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸಬಹುದು. ಮಂದಿರ, ಮಸೀದಿ, ಚರ್ಚ್ ಇನ್ನಿತರ ಧಾರ್ಮಿಕ ಮತ್ತು ಪ್ರಾರ್ಥನಾ ಸ್ಥಳಗಳನ್ನು ರಾಜಕೀಯ ಚಟುವಟಿಕೆ, ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ಧರ್ಮ-ಜಾತಿ ವಿಷಯಗಳನ್ನು ಮುಂದಿಟ್ಟುಕೊಂಡು ಮತ ಕೇಳುವಂತಿಲ್ಲ.
ಯಾವುದೇ ಪಕ್ಷ ಅಥವಾ ಅಭ್ಯರ್ಥಿ, ಇನ್ನೊಂದು ಪಕ್ಷ ಮತ್ತು ಅಭ್ಯರ್ಥಿಯ ನೀತಿ ನಿರೂಪಕ ವಿಷಯಗಳನ್ನು, ಅವರ ಅವಧಿಯಲ್ಲಿ ನಡೆದ ಕೆಲಸಗಳ ಬಗ್ಗೆ ಟೀಕೆ, ಟಿಪ್ಪಣಿ ಮಾಡಬಹುದು. ವ್ಯಕ್ತಿಗತ ಟೀಕೆ, ಸಮಾಜದ ವಿವಿಧ ಜಾತಿ-ವರ್ಗಗಳ ನಡುವೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಬಾರದು. ವೈಯಕ್ತಿಕ ಹಾಗೂ ಜಾತಿ ನಿಂದನೆ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದೆ.
ಚುನಾವಣಾ ಪ್ರಚಾರ ಸಭೆ-ಸಮಾರಂಭ, ರ್ಯಾಲಿಗಳಿಗೆ ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ಪೆÇಲೀಸ್ ಠಾಣೆಯ ಅನುಮತಿ ಕಡ್ಡಾಯ.
ಚುನಾವಣಾ ಪ್ರಚಾರ ಸಭೆ, ಸಮಾರಂಭ ಅಥವಾ ರ್ಯಾಲಿಗಳು ಜನಸಾಮಾನ್ಯರ ಖಾಸಗಿ ಮತ್ತು ನೆಮ್ಮದಿಗೆ, ವೈಯಕ್ತಿಕ ಬದುಕಿಗೆ ಬಾಧೆ ತರಬಾರದು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!