BREAKING NEWS

ʼತೆರಿಗೆ ಭಯೋತ್ಪಾದನೆʼಯಿಂದ ಕಾಂಗ್ರೆಸನ್ನು ಎದುರಿಸಲಾಗದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷವನ್ನು ಹಣಿಯಲು ಹೊರಟಿದೆ. ಈ ಹುನ್ನಾರದ ಭಾಗವಾಗಿಯೇ ನಮ್ಮ ಪಕ್ಷದ ವಿರುದ್ದ ‘’ತೆರಿಗೆ ಭಯೋತ್ಪಾದನೆ’’ಯಲ್ಲಿ ತೊಡಗಿದೆ. ಈ ರೀತಿ ನಮ್ಮ ಪಕ್ಷವನ್ನು ದುರ್ಬಲಗೊಳಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಬಹುದೆಂದು ಬಿಜೆಪಿ ತಿಳಿದುಕೊಂಡಿದ್ದರೆ ಅದು ಆ ಪಕ್ಷದ ಭ್ರಮೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಎನ್‌ಡಿಎ ಮಿತ್ರ ಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮೇಲೆ ವರಮಾನ ತೆರಿಗೆ ಪಾವತಿ ಮಾಡದೆ ಇರುವ ಆರೋಪ ಹೊರಿಸಿ ರೂ.1823 ಕೋಟಿ ಪಾವತಿಸುವಂತೆ ಐಟಿ ಇಲಾಖೆ ನೋಟೀಸ್ ನೀಡಿದೆ. 2017-18ರಲ್ಲಿ ಬಿಜೆಪಿ ಹೆಸರೇ ಇಲ್ಲದ 92 ದಾನಿಗಳಿಂದ ರೂ.4.5 ಲಕ್ಷ ಮತ್ತು ವಿಳಾಸವೇ ಇಲ್ಲದ 1297 ದಾನಿಗಳಿಂದ ರೂ.42 ಕೋಟಿ ದೇಣಿಗೆ ಪಡೆದಿರುವುದನ್ನು ನಮ್ಮ ಪಕ್ಷದ ನಾಯಕರು ಬಯಲಿಗೆಳೆದಿದ್ದಾರೆ. ನಮ್ಮ ಪಕ್ಷಕ್ಕೆ ಅನ್ವಯಿಸಿದ ಮಾನದಂಡವನ್ನೇ ಅನ್ವಯಿಸಿದರೆ ಬಿಜೆಪಿ ಕಳೆದ ಏಳು ವರ್ಷಗಳಲ್ಲಿ ನಡೆಸಿರುವ ತೆರಿಗೆ ಉಲ್ಲಂಘನೆಗಾಗಿ ರೂ.4263 ಕೋಟಿ ಪಾವತಿಸಬೇಕಾಗಿದೆ.

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅತಿಕ್ರಿಯಾಶಾಲಿಯಾಗಿರುವ ಐಟಿ ಇಲಾಖೆ ಟಿಎಂಸಿ, ಸಿಪಿಐ ಸೇರಿದಂತೆ ಬೇರೆ ವಿರೋಧ ಪಕ್ಷಗಳ ಮೇಲೆಯೂ ತೆರಿಗೆ ಭಯೋತ್ಪಾದನೆಯ ಅಸ್ತ್ರ ಪ್ರಯೋಗ ಮಾಡಿದೆ. ವಿರೋಧ ಪಕ್ಷಗಳ ಮೇಲೆ ಮುಗಿ ಬಿದ್ದಿರುವ ಐಟಿ ಇಲಾಖೆ ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಮಾತ್ರ ಕುರುಡಾಗಿದೆ. ಐಟಿ ಇಲಾಖೆಯ ಕಣ್ಣಿಗೆ ಬಟ್ಟೆ ಕಟ್ಟಿರುವವರು ಯಾರು ಎನ್ನುವುದನ್ನು ತಿಳಿಯದಷ್ಟು ದೇಶದ ಜನತೆ ದಡ್ಡರಲ್ಲ. ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆಯ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿಯೇ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರಮೋದಿಯವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ‘’ಬಿರ್ಲಾ-ಸಹಾರಾ’’ ಡೈರಿಯಾಗಲಿ ಯಾಕೆ ಕಣ್ಣಿಗೆ ಬಿದ್ದಿಲ್ಲ?. ಐಟಿ, ಇಡಿ ಮತ್ತು ಸಿಬಿಐ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣಾ ಬಾಂಡ್ ಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳನ್ನು ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ. ಬಯಲಾಗಿರುವ ಈ ಹಗರಣದಿಂದ ಜನರ ಗಮನ ಬೇರೆ ಕಡೆ ಸೆಳೆಯುವ ಜೊತೆಯಲ್ಲಿ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದಲೇ ಬಿಜೆಪಿ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ದೂರಿದ್ದಾರೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಮೊದಲಾದ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂಪಾಯಿಯಷ್ಟು ಬ್ಯಾಂಕ್ ಸಾಲವನ್ನು‌ ಮನ್ನಾ ಮಾಡಿರುವ ಬಿಜೆಪಿ ಸರ್ಕಾರ ಅವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕು. ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಹಣದ ಬಲ ಅಲ್ಲ, ಜನ ಬಲ. ಬಿಜೆಪಿಯಲ್ಲಿ ಹಣ ಬಲ ಇದ್ದರೆ ನಮ್ಮಲ್ಲಿ ಜನಬಲ ಇದೆ. ತೆರಿಗೆ ವಂಚಕರು, ಬ್ಯಾಂಕ್ ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಸಿಎಂ ಟೀಕಿಸಿದ್ದಾರೆ.

ಬಿಜೆಪಿ ಅಂದ್ರೆ ಭ್ರಷ್ಟರ ಹಣವನ್ನು ನುಂಗಿ ಅವರಿಗೆ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್‌ ಮೆಶಿನ್‌ ಆಗಿದೆ. ಭ್ರಷ್ಟರು ತಾವು ಮಾಡಿದ ಮಹಾಪಾಪಗಳ ಮೇಲಿನ ತನಿಖೆಯಿಂದ ತಪ್ಪಿಸಿಕೊಳ್ಳಬೇಕಾದರೆ, ಶಿಕ್ಷೆಯಿಂದ ಪಾರಾಗಬೇಕಾದರೆ ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂತಾನೆ ಶುದ್ಧವಾಗುತ್ತದೆ. ಅಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು. ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ. ಯಾವ ತನಿಖಾ ಸಂಸ್ಥೆಯೂ ಹುಡುಕೊಂಡು ಬರುವುದಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರವನ್ನು ಉಳಿಸಿಕೊಂಡಿರುವುದು ಇಂತಹ ಕಳ್ಳ-ಖದೀಮರ ಲೂಟಿಯ ಹಣದಿಂದ. ಇದಕ್ಕೆ ಉತ್ತಮ ಉದಾಹರಣೆ ಕರ್ನಾಟಕದಲ್ಲಿ ನಡೆಸುತ್ತಾ ಬಂದ ಆಪರೇಷನ್ ಕಮಲ.

400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರಮೋದಿ ವಿರೋಧಪಕ್ಷಗಳನ್ನು ಹಣಿಯಲು ಈ ರೀತಿಯ ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರಿಗೆ ಗೋಡೆ ಮೇಲಿನ ಬರಹ ಸ್ಪಷ್ಟವಾಗಿ ಕಾಣತೊಡಗಿದೆ ಎಂದರ್ಥ. ಅರಸನ ಮೈಮೇಲಿನ ಬಟ್ಟೆ ಒಂದೊಂದಾಗಿ ಕಳಚಿ ಬೀಳುತ್ತಿದೆ. ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ತಥಾಕಥಿತ ನಾಯಕರೆಲ್ಲರೂ ಬತ್ತಲೆಯಾಗುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

12 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

12 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

12 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

12 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

12 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

12 hours ago