ಅಂಕಣಗಳು

ಮದ್ಯವ್ಯಸನಿ ಶಿಕ್ಷಕ ಕೊಟ್ಟ ಬಾಬಾಸಾಹೇಬರ ಪುಸ್ತಕ

ವಿ.ಎಲ್.ನರಸಿಂಹಮೂರ್ತಿ

ನಾನು ಮೊದಲ ಬಾರಿಗೆ ಬಾಬಾಸಾಹೇಬರನ್ನು ಕಂಡದ್ದು ಎಲ್ಲಿ? ನನ್ನ ನೆನಪಿನಲ್ಲಿ ರಿಜಿಸ್ಟರ್ ಆಗಿರುವ ಬಾಬಾಸಾಹೇಬರ ಮೊದಲ ಇಮೇಜ್ ಯಾವುದು? ಯಾವಾಗ? ಎಂದು ನೆನಪು ಮಾಡಿಕೊಂಡಾಗಲೆಲ್ಲ ನನಗೆ ನೆನಪಾಗುವುದು ನನ್ನ ತಾಯಿಯ ಊರು ಮತ್ತು ಆ ಊರಿನಲ್ಲಿದ್ದ ದಸಂಸದ ಬೋರ್ಡು. ಆಂಧ್ರದ ಸೆರಗಿನಲ್ಲಿರುವ ಗೌರಿಬಿದನೂರು ಭಾಗದಲ್ಲಿ ಆಂಧ್ರದಲ್ಲಿದ್ದಷ್ಟೇ ಫ್ಯೂಡಲ್ ದೌರ್ಜನ್ಯ ಇತ್ತು. ಆ ಊರಿನಲ್ಲಿದ್ದ ಫ್ಯೂಡಲ್ ಜಾತಿಯ ವ್ಯಕ್ತಿಯೊಬ್ಬ ಇಡೀ ಊರಿಗೆ ತೊಂದರೆ ಕೊಡುತ್ತಿದ್ದನಂತೆ. ಊರಲ್ಲಿ ಏನೇ ನಡೆದರೂ ಈತನ ಕಣ್ಸನ್ನೆಯಲ್ಲಿ ನಡೆಯಬೇಕಿತ್ತಂತೆ. ಈತನಿಂದ ನನ್ನ ತಾತನ ಕುಟುಂಬಕ್ಕೂ ಒಮ್ಮೆ ತೊಂದರೆಯಾಯಿತಂತೆ. ಕುರಿ ಮೇಯಿಸುತ್ತಿದ್ದ ನನ್ನ ತಾತನ ತಮ್ಮನ ಬಳಿ ಈ ಫ್ಯೂಡಲ್ ವ್ಯಕ್ತಿ ಒಂದೆರಡು ಕುರಿ ಪಾಲಿಗೆ ಮೇಯಿಸಲು ಬಿಟ್ಟಿದ್ದನಂತೆ.

ವರ್ಷಕ್ಕೊಮ್ಮೆ ತುಪ್ಪಟ ಕತ್ತರಿಸುವ ಸಂದರ್ಭದಲ್ಲಿ ತುಪ್ಪಟದ ಬದಲಿಗೆ ಕಂಬಳಿ ಕೊಡಬೇಕೆಂದು ನನ್ನ ತಾತನ ತಮ್ಮನ ಮೇಲೆ ಜಬರ್ದಸ್ತು ಮಾಡಿದ್ದನಂತೆ. ಎರಡು ಕುರಿಗಳ ತುಪ್ಪಟಕ್ಕೆ ಕಂಬಳಿ ಕೊಡುವುದು ಅಸಾಧ್ಯ ಅಂದಿದ್ದಕ್ಕೆ, ತನ್ನ ಆಳುಗಳ ಕೈಯಲ್ಲಿ ನನ್ನ ತಾತನ ತಮ್ಮನಿಗೆ ಹಿಗ್ಗಾಮುಗ್ಗಾ ಥಳಿಸಿದ್ದನಂತೆ. ಅನ್ಯಾಯವಾಗಿ ಹೊಡೆದ ಈತನನ್ನು ಪ್ರಶ್ನಿಸುವ, ಎದುರು ಹಾಕಿಕೊಳ್ಳುವ ಧೈರ್ಯ ಸಾಲದೆ ನನ್ನ ತಾತನ ಕುಟುಂಬ ಸುಮ್ಮನಾಯಿತಂತೆ. ಈ ರೀತಿಯ ದೌರ್ಜನ್ಯಗಳನ್ನು ಆ ಫ್ಯೂಡಲ್ ವ್ಯಕ್ತಿ ಊರಿನ ಹಲವು ಕುಟುಂಬಗಳ ಮೇಲೆ ನಡೆಸುತ್ತಲೇ ಇದ್ದರೂ ಊರಿನ ಜನಕ್ಕೆ ಆತನನ್ನು ಖಂಡಿಸುವ ಧೈರ್ಯವಿರಲಿಲ್ಲ.

ಅದೇ ಸಮಯಕ್ಕೆ ದಸಂಸದ ಕೋಲಾರ ಜಿಲ್ಲಾ ಸಮಿತಿ ನಾಗಸಂದ್ರ ಭೂ ಹೋರಾಟ ನಡೆಸುತ್ತಿದ್ದು, ದಲಿತ ಚಳವಳಿಯ ಚಟುವಟಿಕೆಗಳು ಗೌರಿಬಿದನೂರಿನ ಹಳ್ಳಿಗಳಿಗೆ ಗೊತ್ತಾಗಲು ಶುರುವಾಗುತ್ತದೆ. ಜಾತಿ ಅಸಮಾನತೆಯ ಜೊತೆಗೆ ಫ್ಯೂಡಲ್ ದಬ್ಬಾಳಿಕೆಯಿಂದ ಬೇಸತ್ತಿದ್ದ ನಮ್ಮ ತಾಯಿಯ ಊರಿನ ದಲಿತರು ದಸಂಸದ ಹೋರಾಟಗಾರರನ್ನು ಸಂಪರ್ಕಿಸಿ ತಮ್ಮ ಊರಿನ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ. ಒಂದೆರಡು ವರ್ಷಗಳಲ್ಲೇ ಇಡೀ ಊರಿನ ಜನ ಒಂದಾಗಿ ಆ ಊರಿಗೆ ತೊಂದರೆ ಕೊಡುತ್ತಿದ್ದ ಫ್ಯೂಡಲ್ ಕುಟುಂಬದ ವಿರುದ್ಧ ತಿರುಗಿಬಿದ್ದು ಆ ವ್ಯಕ್ತಿಯನ್ನು ಊರಿನಿಂದಲೇ ಓಡಿಸುತ್ತಾರೆ. ಹೀಗೆ ಸಂಘದವರು ಬಂದು ಆ ಊರಿನಲ್ಲಿ ಮಾಡಿದ ಹೋರಾಟದ ಕತೆ ಮತ್ತು ಅದರಲ್ಲಿ ತನ್ನ ಪಾತ್ರವೂ ಇತ್ತೆಂದು ನನ್ನ ತಾತ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

ಇದರ ಜೊತೆಗೆ ನೆನಪಾಗುವ ಇನ್ನೊಂದು ಘಟನೆ, ನಾನು ಹೈಸ್ಕೂಲು ಓದುತ್ತಿದ್ದ ಸಮಯದಲ್ಲಿ ನನ್ನ ತಮ್ಮನ ಶಾಲೆಯಲ್ಲಿ ನಡೆದ ಪ್ರಸಂಗ. ನನ್ನ ತಮ್ಮನ ಶಾಲೆಗೆ ಹೆಡ್ ಮಾಸ್ಟರ್ ಆಗಿ ವರ್ಗಾವಣೆ ಆಗಿ ಬಂದ ಶಿಕ್ಷಕರೊಬ್ಬರು ಮದ್ಯ ವ್ಯಸನಿಯಾಗಿದ್ದರು. ಶಾಲೆಯಲ್ಲಿದ್ದ ಹತ್ತಕ್ಕೂ ಹೆಚ್ಚು ಶಿಕ್ಷಕರಿಗೆ ಇವರನ್ನು ಕಂಡರೆ ಆಗುತ್ತಿರಲಿಲ್ಲ. ಇವರ ಕುಡಿತದ ಚಟವನ್ನೇ ದೊಡ್ಡದು ಮಾಡಿ ಅವರನ್ನು ಅಲ್ಲಿಂದ ಓಡಿಸಲು ಪ್ರಯತ್ನಿಸುತ್ತಲೇ ಇದ್ದರು. ತಂಟೆಕೋರನಂತಿದ್ದ ಒಬ್ಬ ಶಿಕ್ಷಕ ಈ ಹೆಡ್ ಮಾಸ್ಟರ್ ವಿರುದ್ಧ ನನ್ನ ತಮ್ಮ ಮತ್ತು ಅವನ ಸಹಪಾಠಿಯ ಹೆಸರಲ್ಲಿ ಒಂದು ದೂರು ಬರೆಸಿಬಿಟ್ಟಿದ್ದರು. ದೂರಿನ ವಿಚಾರಣೆ ನಡೆಸಲು ಬಂದ ಬಿಇಒ ಮುಂದೆ, ತಮ್ಮ ಮೇಷ್ಟ್ರು ಹೇಳಿದ ಕಾರಣಕ್ಕೆ ಖಾಲಿ ಪೇಪರ್ ಮೇಲೆ ಸಹಿ ಹಾಕಿ ಕೊಟ್ಟಿದ್ದ ನನ್ನ ತಮ್ಮ ಮತ್ತು ಅವನ ಸಹಪಾಠಿ ಕಕ್ಕಾಬಿಕ್ಕಿಯಾಗಿದ್ದರು. ಕುಡಿತ ಮತ್ತು ನನ್ನ ತಮ್ಮ ಮತ್ತವನ ಸಹಪಾಠಿಯ ಕೈಯಲ್ಲಿ ಬರೆಸಿದ್ದ ದೂರಿನ ಕಾರಣಕ್ಕೆ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿ ಹಿಂಬಡ್ತಿ ನೀಡಲಾಯಿತು. ಆದರೆ ವರ್ಗಾವಣೆಯಾದ ಹೆಡ್ ಮಾಸ್ಟರ್ ಹೋಗುವ ಮುಂಚೆ ದೂರುಕೊಟ್ಟಿದ್ದ ನನ್ನ ತಮ್ಮ ಮತ್ತು ಆತನ ಸಹಪಾಠಿಯನ್ನು ಕರೆದು ನಿಮ್ಮಬ್ಬರ ಮೇಲೆ ನನಗೆ ಕೋಪ ಇಲ್ಲ ಯಾಕೆಂದರೆ ತಪ್ಪು ನಿಮ್ಮದಲ್ಲ ಎಂದು ಹೇಳಿ ಈ ಇಬ್ಬರಿಗೂ ಬಾಬಾಸಾಹೇಬರ ಬರಹಗಳ ಒಂದೊಂದು ಸಂಪುಟ ಕೊಟ್ಟು ಇದನ್ನು ಓದಿ ಮುಂದೆ ನಿಮಗೆ ಅರ್ಥವಾಗುತ್ತದೆ ಎಂದು ಹೇಳಿ ಹೋಗಿದ್ದರು. ಮದ್ಯ ವ್ಯಸನಿಯಾಗಿದ್ದ ಆತ ತನ್ನ ಮೇಲೆ ಸುಳ್ಳು ಅರ್ಜಿ ಬರೆದ ಹುಡುಗರಿಗೆ ಬಾಬಾಸಾಹೇಬರ ಪುಸ್ತಕ ಕೊಟ್ಟು ಹೋದಾಗಲೇ ಆತ ದಲಿತ ಎನ್ನುವುದು ಈ ಹುಡುಗರಿಗೆ ಗೊತ್ತಾಗಿದ್ದು ಮತ್ತು ದೂರು ಕೊಟ್ಟ ಈ ಹುಡುಗರಿಬ್ಬರೂ ದಲಿತರಾಗಿದ್ದರು.

ಇಲ್ಲಿ ನನ್ನನ್ನು ಕಾಡುವುದು ತನ್ನ ಮೇಲೆ ದೂರು ಕೊಟ್ಟ ಹುಡುಗರಿಗೆ ಬಾಬಾಸಾಹೇಬರ ಬರಹಗಳ ಸಂಪುಟ ಕೊಟ್ಟು ಹೋಗಬೇಕು ಎಂದು ಆ ಶಿಕ್ಷಕನಿಗೆ ಅನಿಸಿದ್ದು. ಅಕ್ಷರದ ಕಾರಣಕ್ಕೆ ತಾನೊಂದುರೀತಿಯಲ್ಲಿ ಜಾತಿಯ ವಿಷ ವರ್ತುಲದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಕ್ಷರವೇ ಈ ಹುಡುಗರನ್ನುಬಿಡುಗಡೆ ಮಾಡುತ್ತದೆ ಎಂದು ಅವರಿಗೆ ಅನಿಸಿದ್ದು ನೆನಪಾದಾಗ ಲೆಲ್ಲಾ ಕೃತಜ್ಞತೆ ಹುಟ್ಟುತ್ತದೆ.

ಹೀಗೆ ಆ ಶಿಕ್ಷಕ ಕೊಟ್ಟ ಬಾಬಾಸಾಹೇಬರ ಬರಹಗಳಮೂರನೆಯ ಸಂಪುಟ ನನ್ನ ತಮ್ಮನ ಮೂಲಕ ನಮ್ಮ ಮನೆಗೆ ಬಂದಿತು. ಅದು ನಾನು ಮುಟ್ಟಿದ ಮೊದಲ ಬಾಬಾಸಾಹೇಬರ ಪುಸ್ತಕ.

” ಅಕ್ಷರದ ಕಾರಣಕ್ಕೆ ತಾನೊಂದು ರೀತಿಯಲ್ಲಿ ಜಾತಿಯ ವಿಷ ವರ್ತುಲದಲ್ಲಿ ಸಿಕ್ಕಿ ಹಾಕಿಕೊಂಡಿದ್ದರೂ ಅಕ್ಷರವೇ ಈ ಹುಡುಗರನ್ನು ಬಿಡುಗಡೆ ಮಾಡುತ್ತದೆ ಎಂದು ಅವರಿಗೆ ಅನಿಸಿದ್ದು ನೆನಪಾದಗಲೆಲ್ಲಾ ಕೃತಜ್ಞತೆ ಹುಟ್ಟುತ್ತದೆ” 

ಆಂದೋಲನ ಡೆಸ್ಕ್

Recent Posts

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

2 mins ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

26 mins ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

36 mins ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

47 mins ago

ನಂಜುಂಡೇಶ್ವರ ದೇವಾಲಯದ ಹುಂಡಿ ಎಣಿಕೆ: 82 ಲಕ್ಷ ರೂ. ಕಾಣಿಕೆ ಸಂಗ್ರಹ

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ…

1 hour ago

ಇರಾನ್-ಅಮೆರಿಕಾ ಯುದ್ಧ: ಮಂಡ್ಯದಲ್ಲಿ ಕಂಟ್ರೋಲ್ ರೂಂ

ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ…

1 hour ago