ಅಂಕಣಗಳು

ಪಂಜು ಗಂಗೊಳ್ಳಿ ವಾರದ ಅಂಕಣ: ಗಂಡು ಮಕ್ಕಳನ್ನು ಸಂವೇದನಾಶೀಲರಾಗಿಸುವ ಈಕ್ವಲ್ ಕಮ್ಯುನಿಟಿ

ಹೆಣ್ಣು ಮಕ್ಕಳನ್ನು ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಲು ಪ್ರೇರಣೆ

2012ರ ಒಂದು ದಿನ ಅಂಜನಾ ಗೋಸ್ವಾಮಿ ಎಂಬ ಒಬ್ಬರು ಸಾಮಾಜಿಕ ಕಾರ್ಯಕರ್ತೆ ಮಹಾರಾಷ್ಟ್ರದ ಪೂನಾದಲ್ಲಿ ಕೌಟುಂಬಿಕ ದೌರ್ಜನ್ಯದ ಬಗ್ಗೆ ಒಂದು ಅಧಿವೇಶನ ನಡೆಸುತ್ತಿದ್ದರು. ಅಲ್ಲಿ ನೆರೆದಿದ್ದವರೆಲ್ಲರೂ ಆರ್ಥಿಕವಾಗಿ ಬಡ ಕುಟುಂಬಗಳಿಂದ ಬಂದ ಮಹಿಳೆಯರು. ಅವರಲ್ಲೊಬ್ಬಾಕೆ ಎದ್ದು ನಿಂತು, ‘ನೀವು ಕೌಟುಂಬಿಕ ದೌರ್ಜನ್ಯದ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಅಂತ ನನಗೆ ಹೇಳುವ ಬದಲು ನೀವು ನೇರವಾಗಿ ನನ್ನ ಗಂಡನಿಗೆ ಇಂತಹ ದೌರ್ಜನ್ಯ ನಡೆಸಬಾರದು ಅಂತ ಯಾಕೆ ಹೇಳಬಾರದು?’ ಎಂದು ಕೇಳಿದರು. ಅದನ್ನು ಕೇಳಿದ ಅಂಜನಾ ಗೋಸ್ವಾಮಿಗೆ ಆಕೆಯ ಪ್ರಶ್ನೆಗೆ ಹೇಗೆ ಉತ್ತರಿಸುವುದು ಎಂಬುದೇ ತಿಳಿಯಲಿಲ್ಲ! ಆ ಮಹಿಳೆ ಮತ್ತೂ ಮುಂದುವರಿಸಿ, ‘ಕೌಟುಂಬಿಕ ದೌರ್ಜನ್ಯದ ಬಗ್ಗೆ ನೀವು ಕೊಡುವ ಎಲ್ಲಾ ಮಾಹಿತಿಗಳು ನಮ್ಮ ಮೇಲೆ ದೌರ್ಜನ್ಯ ಎಸಗುವವರಿಂದ ಪಾರಾಗಲು ನಮನ್ನು ಪ್ರಚೋದಿಸುತ್ತವೆ. ಆದರೆ, ಒಂದು ವೇಳೆ ನನ್ನ ಗಂಡ ನಡು ರಾತ್ರಿ ಹೊತ್ತಲ್ಲಿ ನನ್ನ ಮೇಲೆ ದೌರ್ಜನ್ಯ ನಡೆಸಿದರೆ ಆಗ ಏನು ಮಾಡಬೇಕು? ಆ ಹೊತ್ತಲ್ಲಿ ನಾನು ಮನೆಯಿಂದ ಪಾರಾಗಿ ರಸ್ತೆಗೆ ಬಂದರೆ ನಮ್ಮ ರಸ್ತೆಗಳು ಅಷ್ಟು ಸುರಕ್ಷಿತವೇ? ಆ ಹೊತ್ತಲ್ಲಿ ನಾನು ಕರೆ ಮಾಡಿದರೆ ಯಾರಾದರೂ ನನಗೆ ಸಹಾಯ ಮಾಡುವರೇ?’ ಎಂದು ಕೇಳಿದಾಗ ಅಂಜನಾ ಗೋಸ್ವಾಮಿಯರ ಬಾಯಿ ಕಟ್ಟಿ ಹೋಯಿತು!

ಚಾರಿತ್ರಿಕವಾಗಿ ಪುರುಷ ಪ್ರಧಾನ ಭಾರತೀಯ ಸಮಾಜದಲ್ಲಿ ಮಹಿಳೆಯನ್ನು ಯಾವತ್ತೂ ಮುಖ್ಯವಾಹಿನಿಯಿಂದ ಬದಿಯಲ್ಲಿರಿಸಲಾಗಿದೆ. ಅವಳ ಮೇಲೆ ಯಾವುದೇ ರೀತಿಯ ಶೋಷಣೆ, ದೌರ್ಜನ್ಯಗಳು ನಡೆದರೆ ಅವುಗಳನ್ನು ಸಹಿಸಿಕೊಂಡು ಬರುವಂತೆ ಆಕೆಯ ಜೀವನ ಕ್ರಮ ಹಾಗೂ ಆಲೋಚನಾ ಕ್ರಮವನ್ನು ರೂಪಿಸಲಾಗಿದೆ. ಆದರೆ, ಮಹಿಳೆಯ ಮೇಲೆ ಇಂತಹ ಶೋಷಣೆ, ದೌರ್ಜನ್ಯಗಳನ್ನು ಮಾಡದಂತೆ ಪುರುಷನ ನಡವಳಿಕೆ ಮತ್ತು ಆಲೋಚನಾ ಕ್ರಮವನ್ನು ತಿದ್ದುವ ಪ್ರಯತ್ನಗಳು ಏಕೆ ನಡೆಯುತ್ತಿಲ್ಲ? ಅಂಜನಾ ಯುವತಿಯಾಗಿದ್ದಾಗ ಅವರು ಹೊರಗೆಲ್ಲಾದರೂ ಹೋಗುವ ಪ್ರಸಂಗಗಳು ಬಂದಾಗಲೆಲ್ಲಾ, ‘ಎದೆ ಮೇಲೆ ದುಪ್ಪಟ್ಟಾ ಇಲ್ಲದೆ ಹೊರ ಹೋಗಬೇಡ’, ಕಾಲೇಜು ಸೇರುವ ಸಮಯದಲ್ಲಿ, ‘ಹತ್ತಿರದಲ್ಲಿರುವ ಯಾವುದಾದರೂ ಕಾಲೇಜನ್ನು ಆಯ್ಕೆ ಮಾಡಿಕೋ’ ಎಂಬ ಸಲಹೆಗಳನ್ನು ಕೇಳಬೇಕಾಗುತ್ತಿತ್ತು. ಅಂಜನಾ, ‘ಏಕೆ?’ಎಂದು ಪ್ರಶ್ನಿಸಿದಾಗ ‘ಯಾಕೆಂದರೆ, ನೀನು ಹೆಣ್ಣು’ ಎಂಬ ಬಿರುಸಿನ ಉತ್ತರ ಕೇಳಬೇಕಾಗುತ್ತಿತ್ತು. ಹೆಣ್ಣು ಮಕ್ಕಳು ಹೇಗಿರಬಾರದು ಎಂದು ಹೇಳುವ ಬದಲು, ಅಥವಾ ಜೊತೆಯಲ್ಲಿ, ಗಂಡು ಮಕ್ಕಳು ತಮ್ಮ ವರ್ತನೆಯನ್ನು ಹೆಣ್ಣು ಮಕ್ಕಳಲ್ಲಿ ಅಸುರಕ್ಷಿತ ಭಾವನೆ ಹುಟ್ಟದಂತೆ ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ಯಾರೂ ಯಾಕೆ ಏನೂ ಹೇಳುವುದಿಲ್ಲ? ಎಂಬ ಪ್ರಶ್ನೆ ಅಂಜನಾರ ಮನಸ್ಸಲ್ಲಿ ಹುಟ್ಟುತ್ತಿತ್ತಾದರೂ ಅದಕ್ಕೆ ಉತ್ತರ ಎಲ್ಲಿಯೂ ಸಿಗುತ್ತಿರಲಿಲ್ಲ. ಆ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕೆಂಬ ತುಡಿತವೇ ಅಂಜನಾ ಗೋಸ್ವಾಮಿ ‘ಈಕ್ವಲ್ ಕಮ್ಯುನಿಟಿ ಫೌಂಡೇಷನ್’ ಸೇರಲು ಕಾರಣವಾಯಿತು.

ಇದನ್ನು ಓದಿ: ಮಾಲ್ದಾರೆ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಸಿದ ಹುಲಿ 

ಪೂನಾ ಮೂಲದ, ೨೦೦೯ರಲ್ಲಿ ಹುಟ್ಟಿದ ‘ಈಕ್ವಲ್ ಕಮ್ಯುನಿಟಿ ಫೌಂಡೇಷನ್’ ಸಮಾಜದಲ್ಲಿ ಇಂತಹ ಬದಲಾವಣೆ ತರುವ ಉದ್ದೇಶದಿಂದ ಹುಟ್ಟಿಕೊಂಡ ಒಂದು ಸರ್ಕಾರೇತರ ಸಂಸ್ಥೆ. ಈ ಸಂಸ್ಥೆಯು ತನ್ನ ವಿನೂತನ ಕಾರ್ಯಕ್ರಮಗಳ ಮೂಲಕ ಗಂಡು ಮಕ್ಕಳು ತಮ್ಮ ಎಳವೆಯಿಂದಲೇ ಹೆಣ್ಣು ಮಕ್ಕಳನ್ನು ತಮ್ಮ ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಿಕೊಳ್ಳಲು ಪ್ರೇರೇಪಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದೆ. ಅದರ ಕಾರ್ಯಕ್ರಮಗಳಲ್ಲಿ ‘ಸೋಲಾರ್ ಸಿನಿಮಾ’ ಎಂಬುದೊಂದು.

ಸೋಲಾರ್ ಸಿನಿಮಾ ಕಾರ್ಯಕ್ರಮದಲ್ಲಿ ಯಾವುದಾದರೂ ಜನಪ್ರಿಯ ಸಿನಿಮಾಗಳಲ್ಲಿರುವ ಪುರುಷ ಪಾತ್ರಗಳು ಮಹಿಳೆಯರನ್ನು ಛೇಡಿಸುವ, ಪೀಡಿಸುವ ದೃಶ್ಯಗಳನ್ನು ತೋರಿಸಿ, ಹಾಗೆ ಮಾಡುವುದು ಸರಿಯೇ ತಪ್ಪೇ ಎಂದು ನೆರೆದ ಜನರ ನಡುವೆ, ಮುಖ್ಯವಾಗಿ ಗಂಡು ಮಕ್ಕಳು, ಪುರುಷರ ನಡುವೆ, ಚರ್ಚೆಯನ್ನು ಹುಟ್ಟು ಹಾಕಿ, ಗಂಡು ಮಕ್ಕಳಲ್ಲಿ ಬಾಲ್ಯದಲ್ಲೇ ಮಹಿಳಾ ಪರ ಸಂವೇದನೆಗಳನ್ನು ಹುಟ್ಟು ಹಾಕಲು ಪ್ರಯತ್ನಿಸಲಾಗುತ್ತದೆ. ಹೆಣ್ಣು ಮಕ್ಕಳಿಗೆ ಲೈಂಗಿಕ ಸೂಚಕ ಹೆಸರುಗಳಿಂದ ಕರೆಯುವುದು, ಲೈಂಗಿಕ ಕಿರುಕುಳ ಕೊಡುವುದು, ಚುಡಾಯಿಸುವಿಕೆ ಹಾಗೂ ಅವರೊಂದಿಗೆ ಅಗೌರವಯುತವಾಗಿ ನಡೆದುಕೊಳ್ಳುವುದು ಮೊದಲಾದವುಗಳ ಬಗ್ಗೆ ಈ ಕಾರ್ಯಕ್ರಮದಲ್ಲಿ ಚರ್ಚಿಸಲಾಗುತ್ತದೆ. ಶಿವರಾಜ್ ಎನ್ನುವ ಒಬ್ಬ ಹುಡುಗ ತನ್ನ ಹದಿಹರೆಯದಲ್ಲಿ ಒಬ್ಬ ಟಪೋರಿ ಹುಡುಗನಾಗಿದ್ದ. ತನ್ನ ಸ್ಲಮ್ಮಿನ ದಾರಿಯಲ್ಲಿ ಕುಳಿತು ಆಚೀಚೆ ಹೋಗಿ ಬರುವ ಹೆಣ್ಣುಗಳನ್ನು ಚುಡಾಯಿಸುವುದು, ಅವರತ್ತ ಶಿಳ್ಳೆ ಹೊಡೆಯುವುದು ಅವನ ದಿನನಿತ್ಯದ ಪುಂಡಾಟಿಕೆಯಾಗಿತ್ತು. ಕೆಲವು ವರ್ಷಗಳಿಂದ ಈಕ್ವಲ್ ಕಮ್ಯುನಿಟಿ ಫೌಂಡೇಷನ್ ನಡೆಸುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಶಿವರಾಜ್ ಇಂದು ಎಷ್ಟು ಬದಲಾಗಿದ್ದಾನೆಂದರೆ, ತನ್ನ ಓರಗೆಯ ಗಂಡುಮಕ್ಕಳಿಗೆ ಹೆಣ್ಣು ಮಕ್ಕಳನ್ನು ಯಾಕೆ ಮತ್ತು ಹೇಗೆ ತಮ್ಮ ಸಮಾನ ಸಹಜೀವಿಗಳಾಗಿ ನೋಡಿಕೊಳ್ಳಬೇಕು ಎಂಬುದನ್ನು ತಿಳಿ ಹೇಳುತ್ತಿದ್ದಾನೆ.

ಇದನ್ನು ಓದಿ: ಶೈಕ್ಷಣಿಕ ಪ್ರವಾಸ; ಶಾಲಾ ಮುಖ್ಯಸ್ಥರು, ಪೋಷಕರಿಗೆ ಪೀಕಲಾಟ  

ಈಕ್ವಲ್ ಕಮ್ಯುನಿಟಿ ಫೌಂಡೇಷನ್ ದೇಶದಾದ್ಯಂತ ಗಂಡು ಮಕ್ಕಳ ನಡವಳಿಕೆಯ ಬಗ್ಗೆ ಒಂದು ಸಮೀಕ್ಷೆ ನಡೆಸಿ ಕೆಲವು ಅಂಕಿಅಂಶಗಳನ್ನು ಪತ್ತೆ ಹಚ್ಚಿತು. ಅದರ ಪ್ರಕಾರ, ದೇಶದಲ್ಲಿರುವ ೧೮ ವರ್ಷಕ್ಕಿಂತ ಕಡಿಮೆ ಪ್ರಾಯದ ಗಂಡು ಮಕ್ಕಳ ಅಂದಾಜು ಸಂಖ್ಯೆ ೨೩೦ ಮಿಲಿಯನ್. ಅದರಲ್ಲಿ ಶೇ.೫೭ ಗಂಡು ಮಕ್ಕಳು ಮಹಿಳೆಯರ ಮೇಲೆ ನಡೆಸುವ ಕ್ರೌರ್ಯವನ್ನು ಸಮರ್ಥಿಸುತ್ತಾರೆ. ಶೇ.೫೦ ಗಂಡು ಮಕ್ಕಳು ಮುಂದೆ ತಾವೇ ಸ್ವತಃ ಮಹಿಳೆಯರ ಮೇಲೆ ಕ್ರೌರ್ಯ ಎಸಗಬಹುದು ಎಂಬ ಸೂಚನೆ ನೀಡಿದರೆ, ಶೇ.೨೫ ಗಂಡು ಮಕ್ಕಳು ಅತ್ಯಾಚಾರ ಎಸಗಬಹುದು ಎಂಬ ಸೂಚನೆ ಕೊಟ್ಟರು! ಈಕ್ವಲ್ ಕಮ್ಯುನಿಟಿ ಫೌಂಡೇಷನ್ ಈವರೆಗೆ ನೂರಾರು ಶಿವರಾಜ್‌ರನ್ನು ಸೃಷ್ಟಿಸಿದೆ. ಅಂಜನಾ ಗೋಸ್ವಾಮಿಯರು ‘ಎಲ್ಲಾ ಹುಡುಗರು ಈ ಸಮಸ್ಯೆಯ ಪಾಲುದಾರರಲ್ಲ. ಆದರೆ, ಎಲ್ಲ ಹುಡುಗರೂ ಈ ಸಮಸ್ಯೆಯ ಪರಿಹಾರದಲ್ಲಿ ಪಾಲುದಾರರಾಗಬಹುದು’ ಎಂದು ಹೇಳುತ್ತಾರೆ. ಹಾಗಾಗಿ, ನಿಧಾನವಾದರೂ ಮುಂದೊಂದು ದಿನ ಲಿಂಗ ಸಮಾನತೆಯ ತನ್ನ ಹೋರಾಟದಲ್ಲಿ ಜಯ ನಿಶ್ಚಿತ ಎಂದು ಅವರು ಅಚಲವಾಗಿ ನಂಬಿದ್ದಾರೆ.

” ಈಕ್ವಲ್ ಕಮ್ಯುನಿಟಿ ಫೌಂಡೇಷನ್ ತನ್ನ ವಿನೂತನ ಕಾರ್ಯಕ್ರಮಗಳ ಮೂಲಕ ಗಂಡು ಮಕ್ಕಳು ತಮ್ಮ ಎಳವೆಯಿಂದಲೇ ಹೆಣ್ಣು ಮಕ್ಕಳನ್ನು ತಮ್ಮ ಸಮಾನಜೀವಿಯಾಗಿ ನೋಡುವ ದೃಷ್ಟಿಕೋನವನ್ನು ಬೆಳೆಸಿಕೊಳ್ಳಲು ಪ್ರೇರೇಪಿಸುವ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.”

ಪಂಜು ಗಂಗೊಳ್ಳಿ 

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

6 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

6 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

6 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

6 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

6 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

6 hours ago