ಅಂಕಣಗಳು

ಕೆಂಪುಕೋಟೆ ಬಳಿ ಸ್ಛೋಟ : ನಲುಗಿದ ದೆಹಲಿ, ನಡುಗಿದ ಮನಗಳು

ಸೋಮವಾರ (ನ.೧೦) ಸಂಜೆ ರೈಲ್ವೆ ಸ್ಟೇಷನ್ ತಲುಪುವ ಹೊತ್ತಿಗೆ ಅಲ್ಲಿನ ಜನಸಂದಣಿ ನೋಡಿಯೇಗಾಬರಿಯಾಗಿತ್ತು. ಅಸಹಜವೆನ್ನುವಷ್ಟು ಪೊಲೀಸು ಪಡೆಯ ನಾಯಿಗಳು ಪ್ಲಾಟ್ ಫಾರ್ಮಿನ ಉದ್ದಕ್ಕೂ ಪರಿವೀಕ್ಷಣೆ ನಡೆಸಿದ್ದವು. ಹಿಂದಿನ ದಿನವಷ್ಟೇ ಫರೀದಾಬಾದಿನ ಒಂದು ಮನೆಯಲ್ಲಿ ಸ್ಛೋಟಕ ವಸ್ತು ದೊರೆತ ವರದಿ ಓದಿದ್ದೆ. ಕೆಲವೇ ಕ್ಷಣಗಳಲ್ಲಿ ದಿಲ್ಲಿಯ ಕೆಂಪುಕೋಟೆಯ ಬಳಿ ನಡೆದ ಸ್ಛೋಟದ ಸುದ್ದಿ ಹರಡಿ ರೈಲ್ವೆ ನಿಲ್ದಾಣದಲ್ಲಿನ ಇಡೀ ವಾತಾವರಣದಲ್ಲಿ ಒಂದು ತೆರನಾದ ಭಯ ಆವರಿಸಿದಂತೆ ಶರತ್ಕಾಲದ ಸಂಜೆಗಪ್ಪು ಆವರಿಸಿತ್ತು.

ದೆಹಲಿಯ ಬದುಕಿನಲ್ಲಿ ಅದೆಷ್ಟು ಬಾಂಬ್ ಸ್ಛೋಟಗಳನ್ನು ಕಂಡಿಲ್ಲ, ಜೀವ ಅಂಗೈಯಲ್ಲಿಟ್ಟುಕೊಂಡು ಓಡಾಡಿಲ್ಲ, ನಾಲ್ಕು ದಶಕದ ಈ ದೆಹಲಿ ವಾಸದಲ್ಲಿ ! ೨೦೦೫ರಲ್ಲಿ ಬಹುಶಃ ಸೆಪ್ಟೆಂಬರ್ ತಿಂಗಳಿರಬಹುದು. ದೀಪಾವಳಿಯ ಖರೀದಿಗಾಗಿ ಸರೋಜಿನಿ ನಗರಕ್ಕೆ (ಮಾರ್ಕೆಟ್) ಹೋಗಿ ಸಂಜೆ ತಡವಾಗಿ ಬರ್ತೀನಿ ಅಂತ ಮನೆಯಲ್ಲಿ ಹೇಳಿಬಂದಿದ್ದೆ. ಆಫೀಸಿನಲ್ಲಿ ಇದೇ ಕಾರಣ ಹೇಳಿ ಅವತ್ತು ಬೇಗ ಬಿಟ್ಟೆ. ಆಟೋ ತಗೊಳ್ಳಲು ಕಂಜೂಸಿ ಮಾಡಿ ಎರಡು ಬಸ್ಸು ಬದಲಿಸಿಕೊಂಡು ಸರೋಜಿನಿ ಮಾರ್ಕೆಟ್ ತಲುಪಿ ಅತ್ತ ಹೆಜ್ಜೆ ಹಾಕಬೇಕು, ಅಷ್ಟರಲ್ಲಿ ಅತ್ತಲಿಂದ ಜನ ಓಡೋಡಿ ಬರುತ್ತಿದ್ದಾರೆ, ಇತ್ತ ಮೊಬೈಲ್ ಹೊಡೆದುಕೊಳ್ಳತೊಡಗಿದೆ… ಅತ್ತ ಹೋಗಲೋ.. ಬಿಡಲೋ… ಏನಾಗುತ್ತಿದೆ ಎಂದು ಯೋಚಿಸಲೂ ಆಗದಂತಹ ಜನಜಂಗುಳಿಯಿಂದ ‘ಉಧರ್ ಮತ್ ಜಾವ್’ ಅನ್ನುವ ಸಾಮೂಹಿಕ ಕೂಗುಗಳಿಂದ ಅಲ್ಲೆನೋ ಆಗಿದೆ ಎಂದು ಗ್ರಹಿಸಿದ ಕಾಲುಗಳು ಅಲ್ಲೇ ನಿಂತವು. ಫೋನ್ ತಗೊಂಡಾಗ ಮನೆಯವರೆಲ್ಲ ಗಾಬರಿಯಲ್ಲಿ ಬ್ಲಾಸ್ಟ್ ಸುದ್ದಿಯ ಭೀಕರತೆಯನ್ನು ತಿಳಿಸಿದಾಗಲೇ ಮೈ ನಡುಗಿದ್ದು. ಮಾರ್ಕೆಟ್‌ನ ಒಂದು ಕಡೆಯಿಂದ ಏಳುತ್ತಿದ್ದ ದಟ್ಟ ಹೊಗೆ ಅನಂತವನ್ನು ಸೇರುತ್ತಿತ್ತು. ಸ್ವಲ್ಪದರಲ್ಲೇ ಬದುಕಿದೆನೇನೋ ಎಂಬ ಯೋಚನೆಯಿಂದ ಎದೆ ಢವಗುಡುತ್ತಿತ್ತು. ಬಸ್ಸಿಗಾಗಿ ಕಾಯದೇ ಆಟೋ ಹಿಡಿದು ತಲುಪಿದ್ದರೇ… ನಾನೂ..! ಕೈಕಾಲಿನ ಶಕ್ತಿಯೇ ಉಡುಗಿದಂತಾಗಿತ್ತು. ಹೇಗೆ ಮನೆ ಸೇರಿದೆನೋ ನನಗೇ ಗೊತ್ತಿಲ್ಲ.

ಇನ್ನೊಮ್ಮೆ ಆಫೀಸಿನ ಹತ್ತಿರದ ಗ್ರೇಟರ್ ಕೈಲಾಶ್‌ನ MBlock ಮಾರ್ಕೆಟ್ಟಿನಲ್ಲಿನ ಸ್ಛೋಟದ ಮುನ್ನ ಅಲ್ಲಿಯೇ ಇದ್ದೆ. ಡಿ ಪಾಲ್ ಕೋಲ್ಡ್ ಕಾಫೀ ಕುಡಿದು… ಹಾಗೇ ವಿಂಡೋ ಶಾಪಿಂಗ್ ಮಾಡುತ್ತಾ ಗೋಲಾ ಬರ್ಫಿನ ಚುಸ್ಕಿ ಕೈಗಾಡಿಯವನಿದ್ದ ಸ್ಛೋಟಗೊಂಡ ಜಾಗದಲ್ಲೇ ಇದ್ದೆ. ಕಾಯುವ ದೇವರು ದೊಡ್ಡವನು ಅನ್ನೋದು ನಿಜವಿರಬೇಕು. ಈಗ ದಶಕಗಳ ನಂತರ ಮತ್ತೆ ಸ್ಛೋಟ ದೆಹಲಿಯನ್ನು ನಡುಗಿಸಿದೆ.

ಇದನ್ನು ಓದಿ:  75 ರ ಪ್ರಾಯದಲ್ಲಿ ಜೆಸಿಬಿ ಚಲಾಯಿಸುವ ಮಣಿ ಅಮ್ಮ!

ದೆಹಲಿಯ ಹೃದಯವೆನಿಸಿರುವ ಕೆಂಪುಕೋಟೆ – ರಾಷ್ಟ್ರದ ಗೌರವದ ಸಂಕೇತ, ಸ್ವಾತಂತ್ರ್ಯದ ನೆನಪಿನ ಪುಣ್ಯಸ್ಥಳ. ಆ ಕೋಟೆಯ ಪಕ್ಕದಲ್ಲೇ, ಸುತ್ತಮುತ್ತಲಿನ ಚಾಂದನೀ ಚೌಕ್, ಜಮಾ ಮಸೀದಿಯಾಚೆಗಿನ ನಿತ್ಯವೂ ಸಾವಿರಾರು ಜನರು ನಡೆಯುವ ಆ ಬೀದಿಯಲ್ಲಿ ಮತ್ತೊಮ್ಮೆ ಅಕಸ್ಮಾತ್ ಉಂಟಾದ ಸ್ಛೋಟದ ಶಬ್ದ ನಗರವನ್ನೇ ನಡುಗಿಸಿದೆ. ಕ್ಷಣದಲ್ಲಿ ದೃಶ್ಯವೇ ಬದಲಾಯಿತು. ಕಾಲ ಕಾಲವೇ ಸ್ತಬ್ಧಗೊಂಡಿತು. ಹಕ್ಕಿಗಳು ನಿಶ್ಶಬ್ದವಾದವು, ಜನರ ಕಿರುಚಾಟದ ಮಧ್ಯೆ ಕಣ್ಮರೆಯಾದವು ನಗುಗಳು, ಕನಸುಗಳು. ಕೆಂಪುಕೋಟೆಯ ಆ ಭಿತ್ತಿಗಳ ಮೇಲೆ ಭಯ ಮತ್ತು ನೋವಿನ ಅಕ್ಷರಗಳಲ್ಲಿ ರಕ್ತದ ಕಲೆಗಳು ಹೊಸ ಇತಿಹಾಸವನ್ನು ಬರೆದಂತಿದ್ದವು.

ಸದಾ ಪ್ರವಾಸಿಗರ ಕಲರವ ಗಡಿಬಿಡಿ ಧಾವಂತದಲ್ಲಿ ಕೊಡಕೊಳ್ಳುವಿಕೆಯಲ್ಲಿ ಹಬ್ಬದಂತೆ ತುಂಬಿಕೊಂಡಿರುತ್ತಿದ್ದ ಆ ಸ್ಥಳ ಸೋಮವಾರ ಭಯದ ಬೂದಿಯೊಳಗೆ ಮುಳುಗಿತ್ತು. ಯಾರೋ ಒಬ್ಬ ತಂದೆ ತನ್ನ ಮಗುವನ್ನು ಹೊತ್ತು ಓಡುತ್ತಿರಬಹುದು, ಯಾರೋ ಒಬ್ಬ ತರುಣಿ ತನ್ನ ಸ್ನೇಹಿತನ ಹೆಸರನ್ನು ಕೂಗಿ ಹುಡುಕುತ್ತಿರಬಹುದು, ಆಂಬುಲೆನ್ಸ್‌ನ ಸೈರನ್‌ಗಳ ಶಬ್ದ ಗಗನಕ್ಕೇರಿದಾಗ ದೆಹಲಿಯ ನಾಡಿ ಬಡಿತವೇ ನಿಂತಂತಾಗುತ್ತದೆ. ಆದರೆ ಇಂತಹ ಹೃದಯವಿದ್ರಾವಕ ದಂಗೆಗಳನ್ನು, ದಾಳಿ – ಹಲ್ಲೆಗಳನ್ನು, ರಕ್ತದ ಹೊಳೆಗಳನ್ನು, ಗಾಯಗಳನ್ನು ಕಾಣುತ್ತಲೇ ಬಂದ ದೆಹಲಿಯೆಂಬ ಮಾಯಾಂಗನೆಯ ಅಂತಃ ಸತ್ವಕ್ಕೆ ಬೆರಗಾಗುತ್ತದೆ.

ಎಲ್ಲೋ ಕಣ್ಣೀರಿನ ನಡುವೆ ಕೈಹಿಡಿದು ಸಂತೈಸುವ ನೂರಾರು ಹೃದಯವಂತರೂ ಇದ್ದಾರೆ. ನೊಂದವರ ಕಣ್ಣೊರೆಸಿ ತುತ್ತು ಕೊಡುವ ಕೈಗಳೂ ಇವೆ. ಇಲ್ಲಿ ಮಾನವೀಯತೆಯ ಅತ್ಯಂತ ಪ್ರಕಾಶಮಾನ ಮುಖಗಳಿವೆ. ಅಪರಿಚಿತರೇ ಪರಸ್ಪರ ಕೈಹಿಡಿದರು, ರಕ್ತದ ಮಧ್ಯೆ ಜೀವ ಉಳಿಸಲು ಹೋರಾಡಿದರು. ಸಂಘಟನೆಯ ಶಬ್ದವನ್ನು ಮೀರಿಸಿಕೊಂಡು – ದಯೆಯ ಶಬ್ದ ಕೇಳಿಬರುತ್ತದೆ.

ಸ್ಛೋಟವು ದೆಹಲಿಯ ಗೋಡೆಗಳನ್ನು ನಡುಗಿಸಬಹುದು. ಆದರೆ ದೆಹಲಿಯ ಆತ್ಮವನ್ನು ಮುರಿಯಲಾರದು. ಕೆಂಪುಕೋಟೆಯ ಆ ಕೆಂಪು ಇಟ್ಟಿಗೆಗಳಂತೆ, ಈ ನಗರವೂ ಮತ್ತೆ ಮತ್ತೆ ಎದ್ದು ನಿಲ್ಲುತ್ತದೆ – ಮತ್ತೆ ಬದುಕು ಮಾಮೂಲಾಗತೊಡಗುತ್ತದೆ. ಆದರೆ ಮನಸ್ಸಿನೊಳಗೆ ಉಳಿಯುವ ಒಂದು ಪ್ರಶ್ನೆ: ಯುದ್ಧ ಮತ್ತು ಹಿಂಸೆಗಳನ್ನು ಯಾವ ದೇಶದ ಜನರೂ ಬಯಸುವುದಿಲ್ಲ… ಹಾಗಾದರೆ ಕ್ಯೂಂ ಹೋತಾ ಹೈ?

” ಎಲ್ಲೋ ಕಣ್ಣೀರಿನ ನಡುವೆ ಕೈಹಿಡಿದು ಸಂತೈಸುವ ನೂರಾರು ಹೃದಯವಂತರೂ ಇದ್ದಾರೆ. ನೊಂದವರ ಕಣ್ಣೊರೆಸಿ ತುತ್ತು ಕೊಡುವ ಕೈಗಳೂ ಇವೆ. ಇಲ್ಲಿ ಮಾನವೀಯತೆಯ ಅತ್ಯಂತ ಪ್ರಕಾಶಮಾನ ಮುಖಗಳಿವೆ. ಅಪರಿಚಿತರೇ ಪರಸ್ಪರ ಕೈಹಿಡಿದರು, ರಕ್ತದ ಮಧ್ಯೆ ಜೀವ ಉಳಿಸಲು ಹೋರಾಡಿದರು. ಸಂಘಟನೆಯ ಶಬ್ದವನ್ನು ಮೀರಿಸಿಕೊಂಡು – ದಯೆಯ ಶಬ್ದ ಕೇಳಿಬರುತ್ತದೆ.”

ರೇಣುಕಾ ನಿಡುಗುಂದಿ, ನವದೆಹಲಿ

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

57 mins ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

1 hour ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

1 hour ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

2 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

2 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

2 hours ago