ಕೊರಿಯಾದ ಯುದ್ಧವೂ, ಕಳೆದು ಹೋದ ಪ್ರೀತಿಯೂ!

-ಕಾರ್ತಿಕ್ ಕೃಷ್ಣ ಮೈಸೂರು

ಕೆಲವೊಮ್ಮೆ ನಾವು ಅತಿಯಾಗಿ ಬಯಸುವುದು ಪ್ರೀತಿಯನ್ನೇ .ನಾವದನ್ನು ಸಂಗಾತಿಯ ಬೆಚ್ಚಗಿನ ಅಪ್ಪುಗೆಯಲ್ಲೋ,ಗೆಳೆಯರ ಚೇಷ್ಟೆಯಲ್ಲೋ, ಅಪ್ಪನ ಗದರುವಿಕೆಯಲ್ಲೋ , ಅಮ್ಮನ ಮಡಿಲಿನ ಆಸರೆಯಲ್ಲೋ ಅಥವಾ ಇಷ್ಟದ ತಿನಿಸಿನಲ್ಲೋ ಆಗಾಗ ಹುಡುಕುತ್ತೇವೆ. ಅದಕ್ಕಾಗಿ ಕೆಲವೊಮ್ಮೆ ಹಾತೊರೆಯುತ್ತೇವೆ. ಅದು ಕಾಣದೆ ಇದ್ದಾಗ ಸೊರಗುತ್ತೇವೆ. ಅಷ್ಟಕ್ಕೂ ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ನವರು ಪ್ರೀತಿ ಇಲ್ಲದ ಮೇಲೆ -ಹೂವು ಅರಳೀತು ಹೇಗೆ ?ಮೋಡ ಕಟ್ಟೀತು ಹೇಗೆ? ಹನಿಯೊಡೆದು ಕೆಳಗಿಳಿದು ನೆಲಕ್ಕೆ ಹಸಿರು ಮೂಡೀತು ಹೇಗೆ? ಎಂದು ಸುಮ್ಮನೆ ಹೇಳಿದ್ದಾರೆಯೇ! ಪ್ರಾಚೀನ ಗ್ರೀಕ್ ತತ್ವಜ್ಞಾನಿಗಳು – ಕೌಟುಂಬಿಕ ಪ್ರೀತಿ , ಸ್ನೇಹಪರ ಪ್ರೀತಿ , ಪ್ರಣಯ ಪ್ರೀತಿ (ಇರೋಸ್), ಸ್ವ- ಪ್ರೀತಿ (ಫಿಲೌಟಿಯಾ), ಅತಿಥಿ ಪ್ರೀತಿ (ಕ್ಸೆನಿಯಾ) ಮತ್ತು ದೈವಿಕ ಪ್ರೀತಿ (ಅಗಾಪೆ) ಎಂದು ಪ್ರೀತಿಯ ಆರು ಪ್ರಕಾರಗಳನ್ನು ಗುರುತಿಸಿದ್ದಾರಂತೆ.

ಪ್ರತಿಯೊಬ್ಬರೂ ತಮ್ಮ ಕಾಲ ಘಟ್ಟದಲ್ಲಿ ಈ ಎಲ್ಲಾ ರೀತಿಯ ಪ್ರೀತಿಯ ಬಾಹುವಿನಲ್ಲಿ ಒಮ್ಮೆಯಾದರೂ ಬಂಧಿಯಾಗುತ್ತಾರೆಂಬುದು ಎಷ್ಟು ಸತ್ಯ ಅಲ್ವಾ ?

ಅಂತರ್ಜಾಲವನ್ನು ತಡಕಾಡುತ್ತಿದ್ದಾಗ ಒಂದು ಸುದ್ದಿ ನನ್ನನ್ನು ಬಹುವಾಗಿ ಸೆಳೆಯಿತು.೧೯೫೩ ರಲ್ಲಿ ನಡೆದ ಒಂದು ಪ್ರೇಮ ಕಥೆಯ ಬಗ್ಗೆ ಇದ್ದ ಸುದ್ದಿ ಅದು. ಇದು ನಡೆದದ್ದು ಜಪಾನಿನಲ್ಲಿ. ೧೯೫೦-೫೩ ರವರೆಗೆ ನಡೆದ ಕೊರಿಯಾದ ಯುದ್ಧದಲ್ಲಿ ಉತ್ತರ ಕೊರಿಯಾಕ್ಕೆ ಚೀನಾ ಮತ್ತು ಸೋವಿಯತ್ ಒಕ್ಕೂಟ ಬೆಂಬಲ ನೀಡಿದರೆ, ಅಮೇರಿಕ ದಕ್ಷಿಣ ಕೊರಿಯಾ ಗೆ ಬೆಂಬಲ ನೀಡಿತ್ತು. ಈ ಸಂದರ್ಭದಲ್ಲಿ ಬೆಂಬಲ ಪಡೆಯೊಂದಿಗೆ ಬಂದವರಲ್ಲಿ ಅಮೆರಿಕಾದ ನೌಕಾ ಪಡೆಯ ಯೋಧ ಡ್ವೆಯ್ನ್ ಮ್ಯಾನ್ ಎಂಬಾತನೂ ಒಬ್ಬ.

ಈತ ಟೋಕಿಯೋದಲ್ಲಿ ಇದ್ದಾಗ ಪೆಗ್ಗಿ ಯಮಗುಚಿ ಎಂಬ ಜಪಾನಿ ಯುವತಿಯ ಪರಿಚಯವಾಯಿತಂತೆ. ಆಕೆ ಸೇನೆಯ ಅಧಿಕಾರಿಗಳ ಕ್ಲಬ್ಬಿನಲ್ಲಿ ಅವರ ಟೋಪಿಗಳನ್ನು ಪರಿಶೀಲಿಸುವ ಕೆಲಸವನ್ನು ನಿರ್ವಹಿಸುತ್ತಿದ್ದವಳು. ದಿನವೂ ಆಕೆಯನ್ನು ನೋಡುತ್ತಿದ್ದ ಡ್ವೆಯ್ನ್ ಒಂದು ದಿನ ಆಕೆಯ ಜೊತೆ ನರ್ತಿಸಿದನಂತೆ. ಹೀಗೆ ಅವರ ಮಧ್ಯೆ ಪ್ರೇಮಾಂಕುರವಾಗಿ, ಮದುವೆಯಾಗಲೂ ನಿರ್ಧರಿಸಿದರಂತೆ. ಆದರೆ ವಿಧಿ ಬೇರೆಯೇ ಜಾಲವನ್ನು ಹೆಣೆದಿತ್ತು. ಇವರು ಮದುವೆ ಯಾಗುವ ಮೊದಲೇ ಪೆಗ್ಗಿ ಗರ್ಭವತಿಯಾಗಿದ್ದಳು ಹಾಗೆಯೇ ಕೊರಿಯಾದ ಯುದ್ಧ ಮುಗಿದಿತ್ತು! ಯುದ್ಧ ಮುಗಿದ ಕೂಡಲೇ ಡ್ವೆಯ್ನ್ ತಾಯ್ನಾಡಿಗೆ ಮರಳಬೇಕಾಯ್ತು.

ಆದರೆ ಹೊರಡುವ ಮೊದಲು ಡ್ವೆಯ್ನ್, ಕಣ್ಣೀರು ತುಂಬಿಕೊಂಡಿದ್ದ ಪೆಗ್ಗಿಗೆ ಅಮೆರಿಕಾಗೆ ಮರಳಿದ ಕೂಡಲೇ ತಾನು ಉಳಿಸಿದ ಹಣವನ್ನು ಮಗುವಿನ ಭವಿಷ್ಯಕ್ಕಾಗಿ ಕಳುಹಿಸಿಕೊಡುವ ಮಾತು ಕೊಟ್ಟಿದ್ದನಂತೆ.

ಆದರೆ ವಿಧಿಯ ಆತ ಅಷ್ಟಕ್ಕೇ ನಿಲ್ಲಲಿಲ್ಲ. ಅಮೇರಿಕೆಗೆ ಮರಳಿದ ಡ್ವೆಯ್ನ್ ಗೆ ಕಂಡದ್ದು ತನ್ನ ಖಾಲಿ ಬ್ಯಾಂಕ್ ಅಕೌಂಟು. ಯುದ್ಧದಲ್ಲಿ ತಾನು ಮಡಿದರೆ ಹಣ ತನ್ನ ತಂದೆಗೆ ಸೇರಲಿ ಎಂದು ಬ್ಯಾಂಕ್ ಅಕೌಂಟನ್ನು ಆತನ ಹೆಸರಿಗೆ ಬದಲಾಯಿಸಿದ್ದನಂತೆ. ಅದೇ ಅವಕಾಶವನ್ನು ಬಳಸಿಕೊಂಡು ಆತನ ಅಪ್ಪ ಹಣವನ್ನೆಲ್ಲ ಖರ್ಚು ಮಾಡಿದ್ದ. ಕೂಡಲೇ ಪೆಗ್ಗಿ ಗೆ ಒಂದು ಕಾಗದು ಬರೆದು ಪರಿಸ್ಥಿತಿಯನ್ನು ವಿವರಿಸಿದ ಡ್ವೆಯ್ನ್, ಹಣ ಸಂಪಾದಿಸಲು ಒಂದು ಕೆಲಸ ಹಿಡಿದ. ಒಂದೆರಡು ಬಾರಿ ಅವರಿಬ್ಬರ ನಡುವೆ ಪತ್ರ ವ್ಯವಹಾರ ನಿರಾಳವಾಗಿ ನಡೆದು ಒಂದು ದಿನ ಆಕೆಯಿಂದ ಪತ್ರ ಬರುವುದೇ ನಿಂತಿತು. ಕೆಲವು ತಿಂಗಳು ಉರುಳಿದ ಮೇಲೆ ಮತ್ತೆ ಪೆಗ್ಗಿಯಿಂದ ಪತ್ರ ಬಂದಿತ್ತು. ನಿನ್ನ ಮಗು ಉಳಿಯಲಿಲ್ಲ, ನಾನು ಬೇರೆಯವನನ್ನು ಮದುವೆಯಾಗುತ್ತಿದ್ದೇನೆ.. ಎಂದು ಅದರಲ್ಲಿ ಉಲ್ಲೇಖಿಸಿತ್ತು! ಇದಾಗಿ ಸ್ವಲ್ಪ ದಿನಗಳಲ್ಲಿ ಡ್ವೆಯ್ನ್‌ಗೆ ತನ್ನ ತಾಯಿ ಪೆಗ್ಗಿಯಿಂದ ಬಂದ ಪತ್ರಗಳನ್ನೆಲ್ಲ ಬೆಂಕಿಗೆ ಹಾಕಿ ಸುಡುತ್ತಿದ್ದಳು ಎಂಬ ಸತ್ಯದ ಅರಿವಾಯ್ತಂತೆ. ಹಾಗಾಗಿ ಎಷ್ಟೋ ಪತ್ರಗಳು ಡ್ವೆಯ್ನ್‌ಗೆ ಸೇರದೆ ಬೆಂಕಿಪಾಲಾಗಿತ್ತು. ತನ್ನ ಮಗ ಓರ್ವ ಜಪಾನೀ ಯುವತಿಯನ್ನು ಮದುವೆಯಾಗುವುದು ಸುತರಾಂ ಇಷ್ಟವಿರದೆ ಈ ಕೆಲಸವನ್ನು ಆಕೆ ಮಾಡಿದ್ದಳು. ಮುಂದೆ ತನ್ನ ತಾಯಿಯ ಇಷ್ಟದಂತೆಯೇ ತಮ್ಮದೇ ಚರ್ಚಿನ ಹುಡುಗಿಯನ್ನು ಮದುವೆಯಾದ ಡ್ವೆಯ್ನ್ ಮ್ಯಾನ್.

ಇಷ್ಟೂ ಜರುಗಿದ್ದು ೧೯೫೫-೫೬ ರ ಆಸುಪಾಸಿನಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಪೆಗ್ಗಿಗೆ ಮೋಸ ಮಾಡಿದೆ ಎಂಬ ಒಂದು ಕೊರಗಿನಲ್ಲೇ ಬದುಕಿದ ೯೧ ರ ಹರೆಯದ ಡ್ವೆಯ್ನ್, ಈ ತಿಂಗಳ ಶುರುವಿನಲ್ಲಿ ಫೇಸ್ ಬುಕ್ಕಿನಲ್ಲಿ ತನ್ನ ಪ್ರೇಮಕಥೆಯ ಬಗ್ಗೆ ಬರೆದು, ಪೆಗ್ಗಿಯನ್ನು ಅಥವಾ ಆಕೆಯ ಮನೆಯವರನ್ನು ಭೇಟಿ ಮಾಡುವ ಇರಾದೆ ವ್ಯಕ್ತಪಡಿಸಿದರಂತೆ. ಆಗ ಇಂಟರ್ನೆಟ್ ತನ್ನ ಚಮತ್ಕಾರವನ್ನು ತೋರಿಸಿತು ನೋಡಿ! ಡ್ವೆಯ್ನ್ ಪೋಸ್ಟು ವೈರಲ್ ಆಗಿ ಜಪಾನಿನ ಒಮಾಹಾ ನ್ಯೂಸ್‌ನಲ್ಲಿ ಪ್ರಕಟವಾಯ್ತು. ಅವರೊಡನೆ ಮಾತಾಡಿದ ಡ್ವೆಯ್ನ್, ಪೆಗ್ಗಿಯನ್ನು ಆ ಸ್ಥಿತಿಯಲ್ಲಿ ಬಿಟ್ಟು ಬಂದದಕ್ಕೆ ನನಗೆ ವಿಷಾದವಿದೆ, ಇದು ಆಕೆಯನ್ನು ಹುಡುಕುವ ಮತ್ತೊಂದು ಪ್ರಯತ್ನ ಎಂದು ಹಲುಬಿದನಂತೆ. ಆತನ ಮನವಿ ಹಿಸ್ಟರಿ ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಥೆರೆಸಾ ವಾಂಗ್ ಎಂಬ ಸಂಶೋಧಕಿಯ ಗಮನಕ್ಕೆ ಬಂದು, ಆಕೆ ಪೆಗ್ಗಿ ಯಮಗುಚಿ ಯನ್ನು ಹುಡುಕುವ ಕೆಲಸಕ್ಕೆ ಇಳಿದಳಂತೆ. ಆಕೆಯ ಸತತ ಪ್ರಯತ್ನದಿಂದ ಪೆಗ್ಗಿ ಮಿಚಿಗನ್ ನಲ್ಲಿ ವಾಸವಿರುವುದಾಗಿ ತಿಳಿಯಿತು.

ಸ್ವಾರಸ್ಯವೇನೆಂದರೆ ಆ ಜಾಗ ಡ್ವೆಯ್ನ್ ನ ಮನೆಯಿಂದ ಕೇವಲ ೧೪ ಘಂಟೆಯ ಪಯಣದ ಅಂತರದಲ್ಲಿತ್ತಂತೆ ! ಕಣ್ಣೇರಿನೊಂದಿಗೆ ಡ್ವೆಯ್ನ್ ಮ್ಯಾನ್ ನನ್ನು ಎದುರುಗೊಂಡ ಪೆಗ್ಗಿ ಆತನನ್ನು ಮರೆತಿರಲಿಲ್ಲ. ಈಗ ಇಬ್ಬರಿಗೂ ೯೧ ವರುಷ.೧೯೫೫ ರಲ್ಲಿ ಬೇರೆ ಮದುವೆಯಾದ ಪೆಗ್ಗಿ ತನ್ನ ಹಿರಿಯ ಮಗನ ಮಧ್ಯದ ಹೆಸರನ್ನಾಗಿ ಡ್ವೆಯ್ನ್ ಎಂದು ಇಟ್ಟಿದ್ದಳಂತೆ. ಪ್ರೀತಿಯಿಂದ ಮತ್ತೊಮ್ಮೆ ಅಪ್ಪಿಕೊಂಡ ಇಬ್ಬರು, ತಮ್ಮ ಯೌವನದ ದಿನಗಳಂತೆ ನರ್ತಿಸಿದರಂತೆ. ತಮ್ಮ ಎರಡೂ ಕುಟುಂಬದವರೊಂದಿಗೆ ಸೇರಿ ಹಾಡಿ ಕುಣಿದರಂತೆ.

ಇಲ್ಲಿಗೆ ಪೆಗ್ಗಿ ಯಮಗುಚಿ ಹಾಗು ಡ್ವೆಯ್ನ್ ಮ್ಯಾನ್ ಅವರ ಪ್ರೇಮ ಕಥೆ ಸುಖಾಂತ್ಯ ಕಂಡಿತು. ಅವರಿಬ್ಬರ ನಡುವೆ ಇದ್ದದ್ದು ಪರಿಶುದ್ಧ ಪ್ರೀತಿ. ವಿಧಿಯ ಆಟಕ್ಕೆ ಅವರಿಬ್ಬರೂ ಸಿಲುಕಿ ಬೇರೆ ಬೇರೆಯಾದರೂ, ಆ ಪ್ರೀತಿ ಯಾವುದೋ ರೂಪದಲ್ಲಿ ಅವರೊಳಗೆ ಜೀವಂತವಾಗಿತ್ತು. ಕೊನೆಗೆ ವಿಧಿಯೂ ಆ ಪ್ರೀತಿಗೆ ಸೋತಿತೇನೋ! ಸುಮಾರು ೭೦ ವರ್ಷ ಆದಮೇಲೆ ಅವರನ್ನು ಮತ್ತೆ ಸೇರುವಂತೆ ಮಾಡಿದ್ದಾನೆ. ಎಸ್ ಎಲ್ ಭೈರಪ್ಪ ನವರು ನಿರಾಕರಣದಲ್ಲಿ ಒಂದು ಮಾತೆನ್ನುತ್ತಾರೆ – ಜೀವನವೆಂದರೆ ಒಂದು ಪ್ರವಾಹ. ಯಾರನ್ನು ಎಲ್ಲಿ ಕೊಚ್ಚಿ ಎಸೆಯುತ್ತದೆಯೋ ! ಅದರ ವಿರುದ್ಧ ಈಜಿ ತಡೆದು ಗಟ್ಟಿಯಾಗಿ ನಿಲ್ಲುವವನೇ ಧೀರ. ಪ್ರೀತಿಯ ಪ್ರವಾಹದಲ್ಲಿ ಸಿಲುಕಿ,೭೦ ವರುಷ ಕಳೆದ ಮೇಲೆ ದಡ ಸೇರಿದ ಡ್ವೆಯ್ನ್ ಒಬ್ಬ ಧೀರನೇ ಸರಿ!

andolana

Recent Posts

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

33 mins ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

1 hour ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

1 hour ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

2 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

2 hours ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

4 hours ago