ಕೊರಿಯಾದ ಯುದ್ಧವೂ, ಕಳೆದು ಹೋದ ಪ್ರೀತಿಯೂ!

-ಕಾರ್ತಿಕ್ ಕೃಷ್ಣ ಮೈಸೂರು

ಕೆಲವೊಮ್ಮೆ ನಾವು ಅತಿಯಾಗಿ ಬಯಸುವುದು ಪ್ರೀತಿಯನ್ನೇ .ನಾವದನ್ನು ಸಂಗಾತಿಯ ಬೆಚ್ಚಗಿನ ಅಪ್ಪುಗೆಯಲ್ಲೋ,ಗೆಳೆಯರ ಚೇಷ್ಟೆಯಲ್ಲೋ, ಅಪ್ಪನ ಗದರುವಿಕೆಯಲ್ಲೋ , ಅಮ್ಮನ ಮಡಿಲಿನ ಆಸರೆಯಲ್ಲೋ ಅಥವಾ ಇಷ್ಟದ ತಿನಿಸಿನಲ್ಲೋ ಆಗಾಗ ಹುಡುಕುತ್ತೇವೆ. ಅದಕ್ಕಾಗಿ ಕೆಲವೊಮ್ಮೆ ಹಾತೊರೆಯುತ್ತೇವೆ. ಅದು ಕಾಣದೆ ಇದ್ದಾಗ ಸೊರಗುತ್ತೇವೆ. ಅಷ್ಟಕ್ಕೂ ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ನವರು ಪ್ರೀತಿ ಇಲ್ಲದ ಮೇಲೆ -ಹೂವು ಅರಳೀತು ಹೇಗೆ ?ಮೋಡ ಕಟ್ಟೀತು ಹೇಗೆ? ಹನಿಯೊಡೆದು ಕೆಳಗಿಳಿದು ನೆಲಕ್ಕೆ ಹಸಿರು ಮೂಡೀತು ಹೇಗೆ? ಎಂದು ಸುಮ್ಮನೆ ಹೇಳಿದ್ದಾರೆಯೇ! ಪ್ರಾಚೀನ ಗ್ರೀಕ್ ತತ್ವಜ್ಞಾನಿಗಳು – ಕೌಟುಂಬಿಕ ಪ್ರೀತಿ , ಸ್ನೇಹಪರ ಪ್ರೀತಿ , ಪ್ರಣಯ ಪ್ರೀತಿ (ಇರೋಸ್), ಸ್ವ- ಪ್ರೀತಿ (ಫಿಲೌಟಿಯಾ), ಅತಿಥಿ ಪ್ರೀತಿ (ಕ್ಸೆನಿಯಾ) ಮತ್ತು ದೈವಿಕ ಪ್ರೀತಿ (ಅಗಾಪೆ) ಎಂದು ಪ್ರೀತಿಯ ಆರು ಪ್ರಕಾರಗಳನ್ನು ಗುರುತಿಸಿದ್ದಾರಂತೆ.

ಪ್ರತಿಯೊಬ್ಬರೂ ತಮ್ಮ ಕಾಲ ಘಟ್ಟದಲ್ಲಿ ಈ ಎಲ್ಲಾ ರೀತಿಯ ಪ್ರೀತಿಯ ಬಾಹುವಿನಲ್ಲಿ ಒಮ್ಮೆಯಾದರೂ ಬಂಧಿಯಾಗುತ್ತಾರೆಂಬುದು ಎಷ್ಟು ಸತ್ಯ ಅಲ್ವಾ ?

ಅಂತರ್ಜಾಲವನ್ನು ತಡಕಾಡುತ್ತಿದ್ದಾಗ ಒಂದು ಸುದ್ದಿ ನನ್ನನ್ನು ಬಹುವಾಗಿ ಸೆಳೆಯಿತು.೧೯೫೩ ರಲ್ಲಿ ನಡೆದ ಒಂದು ಪ್ರೇಮ ಕಥೆಯ ಬಗ್ಗೆ ಇದ್ದ ಸುದ್ದಿ ಅದು. ಇದು ನಡೆದದ್ದು ಜಪಾನಿನಲ್ಲಿ. ೧೯೫೦-೫೩ ರವರೆಗೆ ನಡೆದ ಕೊರಿಯಾದ ಯುದ್ಧದಲ್ಲಿ ಉತ್ತರ ಕೊರಿಯಾಕ್ಕೆ ಚೀನಾ ಮತ್ತು ಸೋವಿಯತ್ ಒಕ್ಕೂಟ ಬೆಂಬಲ ನೀಡಿದರೆ, ಅಮೇರಿಕ ದಕ್ಷಿಣ ಕೊರಿಯಾ ಗೆ ಬೆಂಬಲ ನೀಡಿತ್ತು. ಈ ಸಂದರ್ಭದಲ್ಲಿ ಬೆಂಬಲ ಪಡೆಯೊಂದಿಗೆ ಬಂದವರಲ್ಲಿ ಅಮೆರಿಕಾದ ನೌಕಾ ಪಡೆಯ ಯೋಧ ಡ್ವೆಯ್ನ್ ಮ್ಯಾನ್ ಎಂಬಾತನೂ ಒಬ್ಬ.

ಈತ ಟೋಕಿಯೋದಲ್ಲಿ ಇದ್ದಾಗ ಪೆಗ್ಗಿ ಯಮಗುಚಿ ಎಂಬ ಜಪಾನಿ ಯುವತಿಯ ಪರಿಚಯವಾಯಿತಂತೆ. ಆಕೆ ಸೇನೆಯ ಅಧಿಕಾರಿಗಳ ಕ್ಲಬ್ಬಿನಲ್ಲಿ ಅವರ ಟೋಪಿಗಳನ್ನು ಪರಿಶೀಲಿಸುವ ಕೆಲಸವನ್ನು ನಿರ್ವಹಿಸುತ್ತಿದ್ದವಳು. ದಿನವೂ ಆಕೆಯನ್ನು ನೋಡುತ್ತಿದ್ದ ಡ್ವೆಯ್ನ್ ಒಂದು ದಿನ ಆಕೆಯ ಜೊತೆ ನರ್ತಿಸಿದನಂತೆ. ಹೀಗೆ ಅವರ ಮಧ್ಯೆ ಪ್ರೇಮಾಂಕುರವಾಗಿ, ಮದುವೆಯಾಗಲೂ ನಿರ್ಧರಿಸಿದರಂತೆ. ಆದರೆ ವಿಧಿ ಬೇರೆಯೇ ಜಾಲವನ್ನು ಹೆಣೆದಿತ್ತು. ಇವರು ಮದುವೆ ಯಾಗುವ ಮೊದಲೇ ಪೆಗ್ಗಿ ಗರ್ಭವತಿಯಾಗಿದ್ದಳು ಹಾಗೆಯೇ ಕೊರಿಯಾದ ಯುದ್ಧ ಮುಗಿದಿತ್ತು! ಯುದ್ಧ ಮುಗಿದ ಕೂಡಲೇ ಡ್ವೆಯ್ನ್ ತಾಯ್ನಾಡಿಗೆ ಮರಳಬೇಕಾಯ್ತು.

ಆದರೆ ಹೊರಡುವ ಮೊದಲು ಡ್ವೆಯ್ನ್, ಕಣ್ಣೀರು ತುಂಬಿಕೊಂಡಿದ್ದ ಪೆಗ್ಗಿಗೆ ಅಮೆರಿಕಾಗೆ ಮರಳಿದ ಕೂಡಲೇ ತಾನು ಉಳಿಸಿದ ಹಣವನ್ನು ಮಗುವಿನ ಭವಿಷ್ಯಕ್ಕಾಗಿ ಕಳುಹಿಸಿಕೊಡುವ ಮಾತು ಕೊಟ್ಟಿದ್ದನಂತೆ.

ಆದರೆ ವಿಧಿಯ ಆತ ಅಷ್ಟಕ್ಕೇ ನಿಲ್ಲಲಿಲ್ಲ. ಅಮೇರಿಕೆಗೆ ಮರಳಿದ ಡ್ವೆಯ್ನ್ ಗೆ ಕಂಡದ್ದು ತನ್ನ ಖಾಲಿ ಬ್ಯಾಂಕ್ ಅಕೌಂಟು. ಯುದ್ಧದಲ್ಲಿ ತಾನು ಮಡಿದರೆ ಹಣ ತನ್ನ ತಂದೆಗೆ ಸೇರಲಿ ಎಂದು ಬ್ಯಾಂಕ್ ಅಕೌಂಟನ್ನು ಆತನ ಹೆಸರಿಗೆ ಬದಲಾಯಿಸಿದ್ದನಂತೆ. ಅದೇ ಅವಕಾಶವನ್ನು ಬಳಸಿಕೊಂಡು ಆತನ ಅಪ್ಪ ಹಣವನ್ನೆಲ್ಲ ಖರ್ಚು ಮಾಡಿದ್ದ. ಕೂಡಲೇ ಪೆಗ್ಗಿ ಗೆ ಒಂದು ಕಾಗದು ಬರೆದು ಪರಿಸ್ಥಿತಿಯನ್ನು ವಿವರಿಸಿದ ಡ್ವೆಯ್ನ್, ಹಣ ಸಂಪಾದಿಸಲು ಒಂದು ಕೆಲಸ ಹಿಡಿದ. ಒಂದೆರಡು ಬಾರಿ ಅವರಿಬ್ಬರ ನಡುವೆ ಪತ್ರ ವ್ಯವಹಾರ ನಿರಾಳವಾಗಿ ನಡೆದು ಒಂದು ದಿನ ಆಕೆಯಿಂದ ಪತ್ರ ಬರುವುದೇ ನಿಂತಿತು. ಕೆಲವು ತಿಂಗಳು ಉರುಳಿದ ಮೇಲೆ ಮತ್ತೆ ಪೆಗ್ಗಿಯಿಂದ ಪತ್ರ ಬಂದಿತ್ತು. ನಿನ್ನ ಮಗು ಉಳಿಯಲಿಲ್ಲ, ನಾನು ಬೇರೆಯವನನ್ನು ಮದುವೆಯಾಗುತ್ತಿದ್ದೇನೆ.. ಎಂದು ಅದರಲ್ಲಿ ಉಲ್ಲೇಖಿಸಿತ್ತು! ಇದಾಗಿ ಸ್ವಲ್ಪ ದಿನಗಳಲ್ಲಿ ಡ್ವೆಯ್ನ್‌ಗೆ ತನ್ನ ತಾಯಿ ಪೆಗ್ಗಿಯಿಂದ ಬಂದ ಪತ್ರಗಳನ್ನೆಲ್ಲ ಬೆಂಕಿಗೆ ಹಾಕಿ ಸುಡುತ್ತಿದ್ದಳು ಎಂಬ ಸತ್ಯದ ಅರಿವಾಯ್ತಂತೆ. ಹಾಗಾಗಿ ಎಷ್ಟೋ ಪತ್ರಗಳು ಡ್ವೆಯ್ನ್‌ಗೆ ಸೇರದೆ ಬೆಂಕಿಪಾಲಾಗಿತ್ತು. ತನ್ನ ಮಗ ಓರ್ವ ಜಪಾನೀ ಯುವತಿಯನ್ನು ಮದುವೆಯಾಗುವುದು ಸುತರಾಂ ಇಷ್ಟವಿರದೆ ಈ ಕೆಲಸವನ್ನು ಆಕೆ ಮಾಡಿದ್ದಳು. ಮುಂದೆ ತನ್ನ ತಾಯಿಯ ಇಷ್ಟದಂತೆಯೇ ತಮ್ಮದೇ ಚರ್ಚಿನ ಹುಡುಗಿಯನ್ನು ಮದುವೆಯಾದ ಡ್ವೆಯ್ನ್ ಮ್ಯಾನ್.

ಇಷ್ಟೂ ಜರುಗಿದ್ದು ೧೯೫೫-೫೬ ರ ಆಸುಪಾಸಿನಲ್ಲಿ. ಅಲ್ಲಿಂದ ಇಲ್ಲಿಯವರೆಗೆ ಪೆಗ್ಗಿಗೆ ಮೋಸ ಮಾಡಿದೆ ಎಂಬ ಒಂದು ಕೊರಗಿನಲ್ಲೇ ಬದುಕಿದ ೯೧ ರ ಹರೆಯದ ಡ್ವೆಯ್ನ್, ಈ ತಿಂಗಳ ಶುರುವಿನಲ್ಲಿ ಫೇಸ್ ಬುಕ್ಕಿನಲ್ಲಿ ತನ್ನ ಪ್ರೇಮಕಥೆಯ ಬಗ್ಗೆ ಬರೆದು, ಪೆಗ್ಗಿಯನ್ನು ಅಥವಾ ಆಕೆಯ ಮನೆಯವರನ್ನು ಭೇಟಿ ಮಾಡುವ ಇರಾದೆ ವ್ಯಕ್ತಪಡಿಸಿದರಂತೆ. ಆಗ ಇಂಟರ್ನೆಟ್ ತನ್ನ ಚಮತ್ಕಾರವನ್ನು ತೋರಿಸಿತು ನೋಡಿ! ಡ್ವೆಯ್ನ್ ಪೋಸ್ಟು ವೈರಲ್ ಆಗಿ ಜಪಾನಿನ ಒಮಾಹಾ ನ್ಯೂಸ್‌ನಲ್ಲಿ ಪ್ರಕಟವಾಯ್ತು. ಅವರೊಡನೆ ಮಾತಾಡಿದ ಡ್ವೆಯ್ನ್, ಪೆಗ್ಗಿಯನ್ನು ಆ ಸ್ಥಿತಿಯಲ್ಲಿ ಬಿಟ್ಟು ಬಂದದಕ್ಕೆ ನನಗೆ ವಿಷಾದವಿದೆ, ಇದು ಆಕೆಯನ್ನು ಹುಡುಕುವ ಮತ್ತೊಂದು ಪ್ರಯತ್ನ ಎಂದು ಹಲುಬಿದನಂತೆ. ಆತನ ಮನವಿ ಹಿಸ್ಟರಿ ಚಾನೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಥೆರೆಸಾ ವಾಂಗ್ ಎಂಬ ಸಂಶೋಧಕಿಯ ಗಮನಕ್ಕೆ ಬಂದು, ಆಕೆ ಪೆಗ್ಗಿ ಯಮಗುಚಿ ಯನ್ನು ಹುಡುಕುವ ಕೆಲಸಕ್ಕೆ ಇಳಿದಳಂತೆ. ಆಕೆಯ ಸತತ ಪ್ರಯತ್ನದಿಂದ ಪೆಗ್ಗಿ ಮಿಚಿಗನ್ ನಲ್ಲಿ ವಾಸವಿರುವುದಾಗಿ ತಿಳಿಯಿತು.

ಸ್ವಾರಸ್ಯವೇನೆಂದರೆ ಆ ಜಾಗ ಡ್ವೆಯ್ನ್ ನ ಮನೆಯಿಂದ ಕೇವಲ ೧೪ ಘಂಟೆಯ ಪಯಣದ ಅಂತರದಲ್ಲಿತ್ತಂತೆ ! ಕಣ್ಣೇರಿನೊಂದಿಗೆ ಡ್ವೆಯ್ನ್ ಮ್ಯಾನ್ ನನ್ನು ಎದುರುಗೊಂಡ ಪೆಗ್ಗಿ ಆತನನ್ನು ಮರೆತಿರಲಿಲ್ಲ. ಈಗ ಇಬ್ಬರಿಗೂ ೯೧ ವರುಷ.೧೯೫೫ ರಲ್ಲಿ ಬೇರೆ ಮದುವೆಯಾದ ಪೆಗ್ಗಿ ತನ್ನ ಹಿರಿಯ ಮಗನ ಮಧ್ಯದ ಹೆಸರನ್ನಾಗಿ ಡ್ವೆಯ್ನ್ ಎಂದು ಇಟ್ಟಿದ್ದಳಂತೆ. ಪ್ರೀತಿಯಿಂದ ಮತ್ತೊಮ್ಮೆ ಅಪ್ಪಿಕೊಂಡ ಇಬ್ಬರು, ತಮ್ಮ ಯೌವನದ ದಿನಗಳಂತೆ ನರ್ತಿಸಿದರಂತೆ. ತಮ್ಮ ಎರಡೂ ಕುಟುಂಬದವರೊಂದಿಗೆ ಸೇರಿ ಹಾಡಿ ಕುಣಿದರಂತೆ.

ಇಲ್ಲಿಗೆ ಪೆಗ್ಗಿ ಯಮಗುಚಿ ಹಾಗು ಡ್ವೆಯ್ನ್ ಮ್ಯಾನ್ ಅವರ ಪ್ರೇಮ ಕಥೆ ಸುಖಾಂತ್ಯ ಕಂಡಿತು. ಅವರಿಬ್ಬರ ನಡುವೆ ಇದ್ದದ್ದು ಪರಿಶುದ್ಧ ಪ್ರೀತಿ. ವಿಧಿಯ ಆಟಕ್ಕೆ ಅವರಿಬ್ಬರೂ ಸಿಲುಕಿ ಬೇರೆ ಬೇರೆಯಾದರೂ, ಆ ಪ್ರೀತಿ ಯಾವುದೋ ರೂಪದಲ್ಲಿ ಅವರೊಳಗೆ ಜೀವಂತವಾಗಿತ್ತು. ಕೊನೆಗೆ ವಿಧಿಯೂ ಆ ಪ್ರೀತಿಗೆ ಸೋತಿತೇನೋ! ಸುಮಾರು ೭೦ ವರ್ಷ ಆದಮೇಲೆ ಅವರನ್ನು ಮತ್ತೆ ಸೇರುವಂತೆ ಮಾಡಿದ್ದಾನೆ. ಎಸ್ ಎಲ್ ಭೈರಪ್ಪ ನವರು ನಿರಾಕರಣದಲ್ಲಿ ಒಂದು ಮಾತೆನ್ನುತ್ತಾರೆ – ಜೀವನವೆಂದರೆ ಒಂದು ಪ್ರವಾಹ. ಯಾರನ್ನು ಎಲ್ಲಿ ಕೊಚ್ಚಿ ಎಸೆಯುತ್ತದೆಯೋ ! ಅದರ ವಿರುದ್ಧ ಈಜಿ ತಡೆದು ಗಟ್ಟಿಯಾಗಿ ನಿಲ್ಲುವವನೇ ಧೀರ. ಪ್ರೀತಿಯ ಪ್ರವಾಹದಲ್ಲಿ ಸಿಲುಕಿ,೭೦ ವರುಷ ಕಳೆದ ಮೇಲೆ ದಡ ಸೇರಿದ ಡ್ವೆಯ್ನ್ ಒಬ್ಬ ಧೀರನೇ ಸರಿ!

andolana

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

21 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

21 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

21 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

21 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

21 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

21 hours ago