ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 33 ದಿನಗಳ ಅವಧಿಯಲ್ಲಿ 2.90 ಕೋಟಿ ರೂ. ಸಂಗ್ರಹವಾಗಿದೆ.
ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 10.15ರವರೆಗೂ ನಡೆಯಿತು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಕ್ರಿಸ್ ಮಸ್ ರಜೆ, ಹೊಸ ವರ್ಷದ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,90,00,732 ರೂ. ಸಂಗ್ರಹವಾಗಿದೆ. 102 ಗ್ರಾಂ ಚಿನ್ನ ಮತ್ತು 3 ಕೆಜಿ 355 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.
ಇದಲ್ಲದೆ ಯು ಎಸ್ ಎ ದೇಶದ 22 ಡಾಲರ್, ಕೆನಡಾದ 100, ಥಾಯ್ಲ್ಯಾಂಡ್ 2 ಡಾಲರ್ ನೋಟುಗಳು ಮತ್ತು ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 12 ನೋಟುಗಳು ಹುಂಡಿಯಲ್ಲಿ ದೊರಕಿವೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕ ಅಧೀಕ್ಷಕ ನಾಗೇಶ್, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.





