Mysore
21
broken clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ಕೆ.ಆರ್.ಆಸ್ಪತ್ರೆಯಲ್ಲಿ ಪ್ರತ್ಯೇಕ ‘ಜ್ವರ ತಪಾಸಣಾ ಕೇಂದ್ರ’

ಮೈಸೂರು: ಕೊರೊನಾ ಸೋಂಕಿನ ನಾಲ್ಕನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ಕೆ.ಆರ್.ಆಸ್ಪತ್ರೆಯ ಹಳೇ ಜಯದೇವ ಆಸ್ಪತ್ರೆ ಕಟ್ಟಡದಲ್ಲಿ ಜ್ವರ ತಪಾಸಣಾ ಕೇಂದ್ರವನ್ನು ತೆರೆಯಲಾಗಿದೆ.
ಸಾಧಾರಣ ಜ್ವರ, ನೆಗಡಿ, ಕೆಮ್ಮು ಖಾತರಿಯಾದಲ್ಲಿ ಔಷಧಿ-ಮಾತ್ರೆಗಳನ್ನು ಸೇವಿಸುವುದರ ಜತೆಗೆ ಮನೆಯಲ್ಲೇ ಕ್ವಾರಂಟೈನ್‌ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಕೊರೊನಾ ಸೋಂಕಿನ ಲಕ್ಷಣಗಳಿರುವವರಿಗೆ ಪ್ರತ್ಯೇಕವಾಗಿ ಹೊರರೋಗಿ ಚೀಟಿ ನೀಡಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೇಂದ್ರದಲ್ಲಿ ಈಗಾಗಲೇ ೨೦ ಬೆಡ್‌ಗಳ ವ್ಯವಸ್ಥೆ ಕಲ್ಪಿಸಿ, ದಾಖಲಾದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪರಿಶೀಲನೆ: ಕೆ.ಆರ್.ಆಸ್ಪತ್ರೆಯ ಹಳೇ ಜುಂದೇವ ಕಟ್ಟಡದಲ್ಲಿ ತೆರೆದಿರುವ ‘ಜ್ವರದ ಕ್ಲಿನಿಕ್‌ಗೆ ಭೇಟಿ ನೀಡಿದ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ.ಕೆ.ಆರ್.ದಾಕ್ಷಾಯಣಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನೀಡಿರುವ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕರಲ್ಲಿ ಭಯ ಉಂಟು ಮಾಡದಂತೆ ಚಿಕಿತ್ಸೆ ನೀಡುವ ದೃಷ್ಟಿಯಿಂದ ಪ್ರತ್ಯೇಕವಾಗಿ ‘ಜ್ವರದ ಕ್ಲಿನಿಕ್’ ತೆರೆಯಲಾಗಿದೆ. ಇಲ್ಲಿ ಜ್ವರ, ನೆಗಡಿ, ಕೆಮ್ಮು, ಮೈ ಕೈ ನೋವು ಎಂದು ಬರುವ ರೋಗಿಗಳು ಬೇರೆ ರೋಗಿಗಳ ಜೊತೆ ಸೇರದಂತೆ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ವಾಡಿಕೊಳ್ಳಲಾಗಿದೆ. ಇಲ್ಲಿಯೇ ಒಪಿಡಿ ( ಹೊರರೋಗಿ ರಶೀದಿ ) ಚೀಟಿ ನೀಡಿ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಗುವುದು. ಅಗತ್ಯವಿದ್ದರೆ ಮಾತ್ರ ದಾಖಲು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸೋಂಕು ದೃಢಪಟ್ಟಿಲ್ಲ : ಕೆ.ಆರ್.ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಪ್ರತಿದಿನ ಸರಾಸರಿ ೫೦-೬೦ ಮಂದಿಗೆ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಇಲ್ಲಿಯವರೆಗೆ ಯಾರಿಗೂ ಕೋವಿಡ್ ಸೋಂಕು ದೃಢಪಟ್ಟಿಲ್ಲ. ಸೋಂಕಿನ ಲಕ್ಷಣಗಳಿದ್ದು, ದಾಖಲಾಗುವವರಿಗೆ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಕೆ.ಆರ್.ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ನಂಜುಂಡ ಸ್ವಾಮಿ, ಆರ್‌ಎಂಒ ರಾಜೇಶ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಿಇ ರಕ್ಷಿತ್ ಮತ್ತಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!