ಚಾಮರಾಜನಗರ: ‘ಆಂದೋಲನ 50ರ ಸಾರ್ಥಕ ಪಯಣ ಹಾಗೂ ಚಾಮರಾಜನಗರ-25 ಬೆಳ್ಳಿಹಬ್ಬ ಕಾರ್ಯಕ್ರಮ ಜ.26ರಂದು ನಗರದಲ್ಲಿರುವ ವರನಟ ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ.
ಬೆಳಿಗ್ಗೆ 11ಗಂಟೆಗೆ ವಸತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ವಿ.ಸೋಮಣ್ಣ ಹಾಗೂ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಚಾಮರಾಜನಗರ ನಗರಸಭೆ ಅಧ್ಯಕ್ಷೆ ಆಶಾ ನಟರಾಜು, ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಹಾಗೂ ವಿಶೇಷ ಆಹ್ವಾನಿತರಾಗಿ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್, ಆಂದೋಲನ ದಿನಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ, ಸಂಪಾದಕರಾದ ರವಿ ಕೋಟಿ ಭಾಗವಹಿಸಲಿದ್ದಾರೆ.
ಚಿಂತಕರು, ದೀನಬಂಧು ಟ್ರಸ್ಟ್ ಸಂಸ್ಥಾಪಕ ಕಾರ್ಯದರ್ಶಿ ಜಿ.ಎಸ್.ಜಯದೇವ್ ಅವರು, ಚಾಮರಾಜನಗರ ಜಿಲ್ಲೆ ಮತ್ತು ತಾಲ್ಲೂಕಿನ ಮುನ್ನೋಟ, ಭಾಷಣ ಮಾಡಲಿದ್ದಾರೆ. ಆಂದೋಲನ 50ರ ಸಾರ್ಥಕ ಪಯಣದ ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು.