ಕುಶಾಲನಗರ: ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲೆಯ ಬೇತುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ನಾಗೇಂದ್ರ ಕೆ.ಜಿ. ಅಮಾನತಿಗೆ ಒಳಗಾದ ಶಿಕ್ಷಕ, ನ.29ರಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವಾಹನ ಚಾಲಕ ಯೋಗೇಶ್ ಎಸ್.ಎನ್ ಅವರಿಗೆ ದೈಹಿಕ ಹಲ್ಲೆ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಲ್ಲಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ನಾಗೇಂದ್ರ ವಿರುದ್ದ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.17ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ ನ್ಯಾಯಾಂಗ ಬಂಧನದಲ್ಲಿ 48 ಗಂಟೆ ಕಳೆದಿರುವುದರಿಂದ, ಅವರನ್ನು ಸೇವೆಯಿಂದ ಅಮಾನತ್ತುಗೊಳಿಸಿ ಶಿಸ್ತು ಪ್ರಾಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಇಲಾಖೆಯ ಪೂರ್ವಾನುಮತಿ ಪಡೆಯದೇ ಆರೋಪಿಯು ಕೇಂದ್ರ ಸ್ಥಾನ ಬಿಡದಂತೆ ಸೂಚಿಸಿದ್ದು, ಅಮಾನತ್ತಿನ ಅವಧಿಯಲ್ಲಿ ಯಾವುದೇ ಉದ್ಯೋಗ, ವಾಣಿಜ್ಯ ವ್ಯವಹಾರ, ವೃತ್ತಿ ಅಥವಾ ಕಸುಬಿನಲ್ಲಿ ನಿರತವಾಗಿರುವುದಿಲ್ಲ ಎಂಬುದನ್ನು ಸಮರ್ಥಿಸುವ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.




