ಜಿಲ್ಲೆಗಳು

ಬಿಜೆಪಿ ಸಚಿವರ ಸ್ಯಾಂಟ್ರೋ ರವಿ ನಂಟು: ತನಿಖೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಮೈಸೂರು ಪೊಲೀಸರು ಎಫ್ಐಆರ್ ದಾಖಲು ಮಾಡಿರುವ ಸಾಂಟ್ರೋ ರವಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಕೆಲ ಪ್ರಭಾವಿ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಮ್ಮು ತಾಕತ್ತು ಬಗ್ಗೆ ಮಾತನಾಡುತ್ತಾರೆ, ಇಲ್ಲಿ ಅವರು ದಮ್ಮು ತಾಕತ್ತು ತೋರಿಸಲಿ ಎಂದು ಟಾಂಗ್ ನೀಡಿದರು. ಈ ರಾಜ್ಯವು ಬಿಜೆಪಿ ನಾಯಕರಿಂದ ಉಳಿಯಲು ಸಾಧ್ಯವಿಲ್ಲ. ಈ ಸರ್ಕಾರದ ಮಂತ್ರಿಗಳ ಹಣೆಬರಹ ಇಲ್ಲಿದೆ ನೋಡಿ ಎಂದು ಸ್ಯಾಂಟ್ರೋ ರವಿ ಜತೆ ಪೋಸು ಕೊಟ್ಟಿರುವ ಮಂತ್ರಿಗಳ ಚಿತ್ರಗಳನ್ನು ಬಹಿರಂಗಪಡಿಸಿದರು.
ಸಾಂಟ್ರೋ ರವಿ ಎಂಬಾತ ಅನೇಕ ಸಚಿವರ ಜತೆ ನಂಟು ಹೊಂದಿದ್ದಾನೆ. ಫೋಟೋಗಳನ್ನು ತೆಗೆಸಿಕೊಂಡಿದ್ದಾನೆ. ಆದರೆ, ಶಿಕ್ಷಣ ಸಚಿವ ನಾಗೇಶ್ ಅವರ ಜತೆ ಅದ್ಹೇಗೆ ಹೋಗಿ ಫೋಟೋ ತೆಗೆಸಿಕೊಂಡನೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಅಚ್ಚರಿ ವ್ಯಕ್ತಪಡಿಸಿದರು.
ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಬೇಕು. ಸದಾ ದಮ್ಮು ತಾಕತ್ತು ಬಗ್ಗೆ ಮಾತನಾಡುವ ಇವರು, ಸಾಂಟ್ರೋ ರವಿ ಮತ್ತು ತಮ್ಮ ಸಂಪುಟದ ಸಚಿವರ ನಡುವೆ ಇರುವ ಸಂಬಂಧದ ಬಗ್ಗೆ ತನಿಖೆಗೆ ಆದೇಶ ನೀಡಲಿ ಎಂದು ಅವರು ಸವಾಲು ಹಾಕಿದರು.
ಸಾಂಟ್ರೋ ರವಿ ಎನ್ನುವ ಈ ವ್ಯಕ್ತಿ ಯಾರು? ಈ ಸರ್ಕಾರದಲ್ಲಿ ಯಾರೊಂದಿಗೆ ಈತನ ಸಂಪರ್ಕ ಇದೆ. ಈತನ ಬಗ್ಗೆ ಮಾಹಿತಿಯನ್ನು ರಹಸ್ಯವಾಗಿಡಿ ಎಂದು ಯಾರಿಗೆ ಸೂಚನೆ ಕೊಟ್ಟಿದ್ದೀರಿ? ಎಂದು ಅವರು ಪ್ರಶ್ನಿಸಿದರು.
ಈ ವ್ಯಕ್ತಿ ಮೇಲೆ ಎಷ್ಟು ಕೇಸ್ ಗಳು ಇವೆ? ಸ್ಯಾಂಟ್ರೋ ರವಿಗೆ ಐದು ಹೆಸರುಗಳಿವೆ. 1995ರಿಂದಲೂ ಈತನ ಮೇಲೆ ಕೇಸುಗಳಿವೆ. ಮೈಸೂರು, ಬೆಂಗಳೂರಿನಲ್ಲಿ ಎಷ್ಟೋ ಕೇಸ್ ಇವೆ? ಕಳೆದ ತಿಂಗಳವರೆಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಇವನಿಗೆ ಕೊಠಡಿ ಕೊಟ್ಟವರು ಯಾರು? ಕೊಠಡಿ ಕೊಡುವಂತೆ ಯಾರು ಶಿಫಾರಸು ಮಾಡಿದ್ದರು? ಇದೆಲ್ಲವನ್ನು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.
ಕುಮಾರಕೃಪದಲ್ಲಿ ಕೂತು ಈತ ಭಾರೀ ವ್ಯವಹಾರ ನಡೆಸಿದ್ದಾನೆ. ಇವನ ಹಿಂದೆ ಅಡಗಿ ಕೂತಿರುವ ಅಸಲಿ ವ್ಯಕ್ತಿ ಯಾರು? ಪೊಲೀಸ್ ಅಧಿಕಾರಿಗೆ ಇವನು ಮೊಬೈಲ್ ಕರೆ ಮಾಡಿ, ನಾಳೆ ಬಂದು ನೋಡು ಅಂತ ಹೇಳುತ್ತಾನೆ. ತನ್ನ ಸರ್ ಎಂದು ಕರೆಯುವಂತೆ ಆ ಪೊಲೀಸ್ ಅಧಿಕಾರಿಗೆ ತಾಕೀತು ಮಾಡುತ್ತಾನೆ. ಇದೆಲ್ಲಾ ದಾಖಲೆ ಇದೆ ಎಂದು ಕುಮಾರಸ್ವಾಮಿ ಅವರು ದಾಖಲೆ ಬಹಿರಂಗ ಮಾಡಿದರು.
ʼʼ ರೀ ಏನು ತಿಳಿದುಕೊಂಡಿದ್ದೀರಾ? ಸ್ವತಃ ಮುಖ್ಯಮಂತ್ರಿಯೇ ನನ್ನನ್ನು ಸರ್ ಅಂತ ಕರೀತಾರೆ. ನೀನು ಸರ್ ಅಂತಿಲ್ಲ ಅಂತ ಆ ಪೊಲೀಸ್ ಅಧಿಕಾರಿಗೆ ಸ್ಯಾಂಟ್ರೋ ರವಿ ಅನ್ನೋನು ಧಮ್ಕಿ ಹಾಕುತ್ತಾನೆ ಎಂದರೆ ಈ ಸರ್ಕಾರದ ಮಾನ ಮರ್ಯಾದೆ ಎಲ್ಲಿಗೆ ಬಂದು ನಿಂತಿದೆ ಎನ್ನುವುದನ್ನು ಜನರು ಊಹೆ ಮಾಡಬಹುದು. ಇದು ಸರ್ಕಾರವಾ? ಇವರ ಕರ್ನಾಟಕವನ್ನ ರಕ್ಷಣೆ ಮಾಡುವವರು ಎಂದು ಅವರು ಕಿಡಿ ಕಾರಿದರು.
ಕಳೆದ ಒಂದು ತಿಂಗಳಿಂದ ಮಾತ್ರ ಅವನು ಎಲ್ಲ ಚಟುವಟಿಕೆ ನಿಲ್ಲಿಸಿದ್ದಾನೆ. ದಲಿತ ಕುಟುಂಬದ ಹೆಣ್ಣು ಮಗಳು ಇವನ ಮೇಲೆ ದೂರು ಕೊಟ್ಟಿದ್ದಾರೆ. ಇಂಥವನ ಹೆಗಲ ಮೇಲೆ ಕೇಸರಿ ಟವೆಲ್ ಹಾಕಿ ಪಕ್ಷಕ್ಕೆ ಸೇರಿಸಿಕೊಂಡ ಬಿಜೆಪಿ ನಾಯಕರಿಗೆ ನಾಚಿಕೆ ಆಗಬೇಕು. ನಮ್ಮ ಮೇಲೆ ಟ್ರೋಲ್ ಮಾಡ್ತಾರಲ್ಲ. ಬಿಜೆಪಿ ಸೋಷಿಯಲ್ ಮೀಡಿಯಾವರು, ದಮ್ಮು, ತಾಕತ್ತು ಇದ್ದರೆ ಈ ವಿಷಯವನ್ನು ಟ್ರೋಲ್ ಮಾಡಲಿ ಎಂದು ಸವಾಲು ಹಾಕಿದರು.
ಅಧಿಕಾರಿಗಳಿಗೆ ಇವನು ಧಮ್ಕಿ ಹಾಕಿದ್ದಾನೆ. ಆ ಅಧಿಕಾರಿಗಳಿಗೆ ಹೇಳ್ತಾನಂತೆ, ಕುಂಬಳಗೋಡಿಗೆ ಯಾರದ್ದೋ ಕೆಲಸ ಆಗೋಯ್ತು ,50 ಲಕ್ಷಕ್ಕೆ. ನೆಲಮಂಗಲ ಎರಡು ತಿಂಗಳಲ್ಲಿ ಖಾಲಿ ಆಗುತ್ತೆ, ವೈಯ್ಟ್ ಮಾಡಿ ಎಂದು ಹೇಳುತ್ತಾನಂತೆ. ನನಗೆ ಇರುವ ಮಾಹಿತಿ ಪ್ರಕಾರ ಕೋಟ್ಯಂತರ ರೂಪಾಯಿ ವ್ಯವಹಾರ ನಡೆದಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

17 ಸಚಿವರತ್ತ ಬೊಟ್ಟು ಮಾಡಿದ ಮಾಜಿ ಸಿಎಂ:
ಸ್ಯಾಂಟ್ರೋ ರವಿ ಜತೆ ಬಿಜೆಪಿ ಸರ್ಕಾರದ ಯಾವ ಮಂತ್ರಿ ಸಂಪರ್ಕದಲ್ಲಿ ಇಲ್ಲ ಕೇಳಿ ಎಂದು ಕಿಡಿಕಾರಿದ ಎಚ್ಡಿಕೆ, 17 ಮಂತ್ರಿಗಳು ತಮ್ಮ ವಿರುದ್ಧ ಸುದ್ದಿವಾಹಿನಿಗಳಲ್ಲಿ ಕೆಲ ವಿಷಯಗಳನ್ನು ಪ್ರಸಾರ ಮಾಡಬಾರದು ಎಂದು ಕೋರ್ಟ್ ನಿಂದ ತಡೆಯಾಜ್ಞೆ ತಂದರಲ್ಲ, ಬಾಂಬೆಗೆ ಇಲ್ಲಿಂದ ಶಾಸಕರನ್ನು ಮೋಜು ಮಾಡಲು ಕರೆದುಕೊಂಡು ಹೋದರಲ್ಲ, ಈ ಢೋಂಗಿ ಬಿಜೆಪಿ ಎಲ್ಲರಿಗೂ, ಗೌರವ ಕೊಡುವ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರಲ್ಲ, ಹಾಗಾದರೆ, ನನ್ನ ನೇತೃತ್ವದ ಮೈತ್ರಿ ಸರ್ಕಾರ ತೆಗೆಯಲು ಕೆಲವರನ್ನು ಕರೆದುಕೊಂಡು ಹೋದರಲ್ಲ ಆ ವ್ಯಕ್ತಿ ಯಾರು? ಎಂದು ಪ್ರಶ್ನಿಸಿದರು.
2018ರ ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಯಾರನ್ನೆಲ್ಲ ಬಳಕೆ ಮಾಡಿಕೊಳ್ಳಲಾಯಿತು? ಬಾಂಬೆಗೆ ಹೋದವರ ಮೋಜು ಮಸ್ತಿಗೆ ಸಕಲ ವ್ಯವಸ್ಥೆ ಮಾಡಿದವರು ಯಾರು ಎಂಬ ಬಗ್ಗೆಯೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಎಚ್‌ ಡಿಕೆ ಆಗ್ರಹಿಸಿದರು.

ನನ್ನ ಸರ್ಕಾರವನ್ನು ತೆಗೆಯಲು ಎಲ್ಲಾ ರೀತಿಯ ವಾಮಮಾರ್ಗಗಳನ್ನು ಅನುಸರಿಸಲಾಯಿತು. ಈಗ ಮಾತನಾಡಲ್ಲ, ಬೀದರ್ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಪಂಚರತ್ನ ರಥಯಾತ್ರೆ ಮುಗಿಸಿಕೊಂಡು ಬಂದ ಮೇಲೆ ವಿವರವಾಗಿ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಅರವಿಂದ ಲಿಂಬಾವಳಿ ಆಪ್ತ ಯಾರು?
ಪ್ರದೀಪ್ ಎಂಬ ವ್ಯಕ್ತಿ ಶೂಟ್ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಬಗ್ಗೆ ಪ್ರಸ್ತಾಪ ಮಾಡಿದ ಕುಮಾರಸ್ವಾಮಿ ಅವರು, ಅರವಿಂದ ಲಿಂಬಾವಳಿ ಹಾಗೂ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲ್ಪಟ್ಟಿರುವ ಗೋಪಿ ಸಂಬಂಧ ಏನು? ಎಂದು ಪ್ರಶ್ನಿಸಿದರು.
ನನಗಿರುವ ಮಾಹಿತಿ ಪ್ರಕಾರ ಗೋಪಿ ಮುಖಾಂತರ 50-60 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಮುಖ್ಯವಾಗಿ ಬಿಲ್ಡರುಗಳಿಂದ ಹಣ ಕೀಳಲಾಗಿದೆ. ಈ ಕಾರಣಕ್ಕೆ ಲಿಂಬಾವಳಿ ಸಚಿವ ಸ್ಥಾನ ಕಳೆದುಕೊಂಡರಾ? ಈ ಬಗ್ಗೆ ಜನರಿಗೆ ಗೊತ್ತಾಗಬೇಕು. ಬಿಲ್ದರುಗಳನ್ನು ದರ್ಜೇವಾರು ವಿಭಜಿಸಿ ಹಣ ವಸೂಲಿ ಮಾಡುತ್ತಿದ್ದರಲ್ಲ, ಆ ಹಣವನ್ನು ಸಂಗ್ರಹ ಮಾಡಿದವರು ಯಾರು? ಯಾವ ಅಪಾರ್ಟ್ ಮೆಂಟ್ ನಲ್ಲಿ ಈ ವ್ಯವಹಾರ ನಡೆಯಿತು ಎನ್ನುವುದು ಜನಕ್ಕೆ ಗೊತ್ತಾಗಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇದ್ದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago