ಹನೂರು :ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ಬೈಲೂರು ಗ್ರಾಮ ಪಂಚಾಯಿತಿಗೆ ಸೇರಿದ ಅರೆಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮದಲ್ಲಿ 300 ಕುಟುಂಬಗಳಿದ್ದು 500ಕ್ಕೂ ಹೆಚ್ಚು ಮತದಾರರಿದ್ದಾರೆ.
ತಾಲೂಕಿನ ಗಡಿಯಂಚಿನ ಗ್ರಾಮವಾದ ಅರೆಕಾಡಿನ ದೊಡ್ಡಿ ಹಾಗೂ ಕಂಬಿಗುಡ್ಡ ಗ್ರಾಮಕ್ಕೆ ಕೆ ಎಸ್ ಆರ್ ಟಿ ಸಿ ವ್ಯವಸ್ಥೆ ಕಲ್ಪಿಸುವಂತೆ ಡಿಪೋ ವ್ಯವಸ್ಥಾಪಕರು, ತಹಸಿಲ್ದಾರರು ಹಾಗೂ ಶಾಸಕರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರು ಇದುವರೆಗೂ ಯಾವುದೇ ಪ್ರಯೋಜನವಿಲ್ಲವೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ವೇಳೆ ಗ್ರಾಮದ ಕುಳ್ಳ ಮಾದೇವ ಮಾತನಾಡಿ ನಮ್ಮ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹತ್ತಾರು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಪ್ರತಿನಿತ್ಯ ನಮ್ಮ ಎಂಟು ಕಿಲೋಮೀಟರ್ ನಡೆದು ಶಾಲೆಗೆ ಹೋಗಬೇಕಿದೆ. ಇದರಿಂದ ತರಗತಿಗಳಿಗೆ ಸರಿಯಾದ ಸಂದರ್ಭಕ್ಕೆ ಹೋಗಲು ಸಾಧ್ಯವಾಗದೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸದಿದ್ದರೆ ನಮ್ಮ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವುದಿಲ್ಲ, ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿದ್ಯಾರ್ಥಿನಿ ಅಶ್ವಿನಿ ಮಾತನಾಡಿ ನಮ್ಮ ಗ್ರಾಮಕ್ಕೆ ಸಮರ್ಪಕವಾದ ರಸ್ತೆ ಇದೆ. ಆದರೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಪ್ರತಿನಿತ್ಯ ಬೈಲೂರು ಪ್ರೌಢಶಾಲೆಗೆ ನಡೆದುಕೊಂಡು ಹೋಗಬೇಕಿದೆ, ಮಳೆ ಬಂದಂತಹ ಸಂದರ್ಭದಲ್ಲಿ ನೆನೆದುಕೊಂಡು ಹೋಗುತ್ತಿದ್ದೇವೆ, ಚುನಾವಣೆ ಸಂದರ್ಭದಲ್ಲಿ ಮತದಾನ ಕೇಳಲು ಬರುವ ಜನಪ್ರತಿನಿಧಿಗಳಿಗೆ ನಮ್ಮ ಕಷ್ಟ ಪರಿಹರಿಸುವ ಸೌಜನ್ಯವಿಲ್ಲ ಎಂದು ವಿದ್ಯಾರ್ಥಿನಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಅರೆ ಕಾಡುವಿನ ದೊಡ್ಡಿ ಹಾಗೂ ಕಂಬಿಗುಡ್ಡೆ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್ ರವರಿಗೆ ದೂರವಾಣಿ ಮುಖಾಂತರ ತಿಳಿಸಿದ್ದೇನೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಸಲಾಗುವುದು.
ಆರ್ ನರೇಂದ್ರ ಶಾಸಕರು ಹನೂರು ವಿಧಾನಸಭಾ ಕ್ಷೇತ್ರ.





