ಚಾಮರಾಜನಗರ: ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡಲು ಹೊರಟಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನ ಗೇಟ್ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಲವಂತವಾಗಿ ಹಿಂದಿ ಹೇರಿಕೆ ಮಾಡಲು ಯತ್ನಿಸುತ್ತಿದೆ. ಕೇಂದ್ರ ಇಬ್ಬಾಗ ನೀತಿ ಅನುಸರಿಸುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ದೇಶದ ಒಕ್ಕೂಟದ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಹಿಂದಿ ರಾಷ್ಟçಭಾಷೆಯಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಾಗೂ ಸರ್ವಸ್ವವಾಗಿದೆ. ಇದೆಲ್ಲ ಗೊತ್ತಿದ್ದರೂ ಕೇಂದ್ರ ಸರ್ಕಾರ ಬಲವಂತವಾಗಿ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಯತ್ನಿಸುವುದು ಸರಿಯಲ್ಲ ಎಂದು ಖಂಡಿಸಿದರು.
ಪ್ರತಿಭಟನೆಯಲ್ಲಿ ಕನ್ನಡ ಚಳವಳಿಗಾರರಾದ ಶಾ.ಮುರಳಿ, ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ಚಾ.ರಾ.ಕುಮಾರ್, ಚಾ.ಸಿ.ಸಿದ್ದರಾಜು, ಕಾರ್ತಿಕ್, ಯರಿಯೂರು ರಾಜಣ್ಣ, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ದೊರೆ ಇತರರಿದ್ದರು.