ಯಳಂದೂರು: ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ.
ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು (೪೫) ಮೃತರು ಎಂದು ಗುರುತಿಸಲಾಗಿದೆ. ಮಂಗಳವಾರ ಈತ ತನ್ನ ಪತ್ನಿಯ ಗ್ರಾಮವಾದ ಬೂದಿತಿಟ್ಟುಗೆ ತೆರಳುವಾಗ ರಭಸವಾಗಿ ಹರಿಯುತ್ತಿದ್ದ ಸುವರ್ಣಾವತಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಹೊಳೆಯಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ಬೂದಿತಿಟ್ಟು ರಸ್ತೆಯ ಕಬ್ಬಿನ ಗದ್ದೆಯಲ್ಲಿ ಈತನ ಕಳೇಬರ ಕಂಡು ಬಂದಿದೆ.
ಕೂಡಲೇ ಇದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ತಂಡ ಶವವನ್ನು ಗ್ರಾಮಸ್ಥರ ಸಹಕಾರದೊಂದಿಗೆ ಹೊರ ತೆಗೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.