ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿದೆ.
ಬುಧವಾರ ಮಧ್ಯಾಹ್ನ ಹಾವಿನ ಮೂಲೆ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡು ನೋಡ ನೋಡುತ್ತಲೇ ಎಕರೆಗಟ್ಟಲೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ.
ಅರಣ್ಯಕ್ಕೆ ಬೆಂಕಿ ಬಿದ್ದಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ತ್ವರಿತವಾಗಿ ಬೆಂಕಿ ನಂದಿಸುವಲ್ಲಿ ಕಾರ್ಯ ನಿರತರಾಗಿದ್ದಾರೆ.
ಕಳೆದ 15 ದಿನಗಳ ಅವಧಿಯಲ್ಲಿ ಬಿಆರ್ಟಿ ಅರಣ್ಯದಲ್ಲಿ ಎರಡು ಬಾರಿ ಅರಣ್ಯಕ್ಕೆ ಬೆಂಕಿ ಬಿದ್ದಿದೆ, ಇದೀಗ ಅರಣ್ಯ ಮಧ್ಯಭಾಗದಲ್ಲಿರುವ ಜೋಳದ ಕಡ್ಡಿಗೆ ಬೆಂಕಿ ಹಾಕಿರುವ ಪರಿಣಾಮ ಗಾಳಿಗೆ ಅರಣ್ಯದ ಸ್ವಲ್ಪ ಭಾಗ ಸುಟ್ಟು ಹೋಗಿದೆ.
ಬಿಆರ್ಟಿ ವಲಯದಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯಕ್ಕೆ ಬೆಂಕಿ ಬೀಳದಂತೆ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಪರಿಸರ ಪ್ರೇಮಿಗಳು ಆಗ್ರಹಿಸಿದ್ದಾರೆ.





