Mysore
25
clear sky

Social Media

ಶನಿವಾರ, 07 ಮಾರ್ಚ್ 2026
Light
Dark

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಜೆಟ್ ನಲ್ಲಿ 490 ಕೋಟಿ ಯೋಜನೆ ಘೋಷಣೆ ಮಾಡಿರುವುದಕ್ಕೆ ರಾಮಪುರ ಸಮೀಪದ ಕೆಂಪಯ್ಯನಹಟ್ಟಿ ಗ್ರಾಮದ ಪುಟಾಣಿಗಳು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವರ್ಷ2025 ರ ಜುಲೈ 8ರಂದು ಕೆಂಪಯ್ಯನ ಹಟ್ಟಿ ಗ್ರಾಮದ ವಿದ್ಯಾರ್ಥಿಗಳಾದ ವರ್ಣಿಕ, ಮೀನಾ, ಋಷಿಕೇಶ್, ಶ್ರೀಕಂಠ ಎಂಬ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಮ್ಮ ಗ್ರಾಮದಲ್ಲಿ ಪುಟ್ಟ ಮಕ್ಕಳು ನಮ್ಮ ತಾಯಿ ತಂದೆಯವರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಲ್ಲದೆ ಇವರು ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವೈರಲ್ ವಿಡಿಯೋನಲ್ಲಿ ಮಕ್ಕಳು ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಗ್ರಾಮದಲ್ಲಿ ನೀರಿನ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಹ ಪರಿತಪ್ಪಿಸುತ್ತಿವೆ. ಈ ಕಾರಣದಿಂದ ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ನಡೆಯದೆ ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ ಈ ಸ್ಥಿತಿಯನ್ನು ನೋಡಿದಾಗ ನಮಗೆ ಬಹಳ ದುಃಖವಾಗುತ್ತದೆ ಎಂದು ಅಳಲನ್ನು ತೋಡಿಕೊಂಡಿದ್ದರು. ರಾಮಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಮಕ್ಕಳು ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಆಂದೋಲನ ದಿನ ಪತ್ರಿಕೆಯಲ್ಲಿ ಜುಲೈ 9 ರಂದು ರಾಮಪುರ ಹೋಬಳಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮಗ್ರವಾಗಿ ವರದಿ ಪ್ರಕಟಿಸಲಾಗಿತ್ತು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಮಪುರ ಹೋಬಳಿ ವ್ಯಾಪ್ತಿಯ 12,ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಶನಿವಾರ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Tags:
error: Content is protected !!