ಚಾಮರಾಜನಗರ: ಜಿಲ್ಲೆಯ ಧಾರ್ಮಿಕ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದೆ. ಈ ಹಿನ್ನಲೆಯಲ್ಲಿ ಸ್ಥಳಿಯ ಶಾಸಕ ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲೆ ಮಹದೇಶ್ವರ ಪ್ರತಿಮೆ ಇರುವ ಸ್ಥಳದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಜಿಲ್ಲಾಡಳಿತ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ ಸಕಲ ಸಿದ್ದತೆಗಳನ್ನು ಆರಂಭಿಸಿದೆ.
ಇಂದು (ಜ.3) ದೇವಾಲಯಕ್ಕೆ ಭೇಟಿ ನೀಡಿದ ಹನೂರು ಶಾಸಕ ಆರ್. ಮಂಜುನಾಥ್ ದೇವಾಲಯದ ಪ್ರಾಧಿಕಾರದ ಕಾರ್ಯದರ್ಶಿ ಇ. ರಘು ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಸಕಲ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದಾರೆ.
27 ವರ್ಷಗಳ ಹಿಂದೆ ಮೈಸೂರು ಜಿಲ್ಲೆಯಿಂದ ಬೇರ್ಪಟ್ಟ ಚಾಮರಾಜನಗರ ಜಿಲ್ಲೆಗೆ ಇನ್ನೂ ಪೂರ್ಣ ಪ್ರಮಾಣದ ಮೂಲ ಸೌಲಭ್ಯಗಳು ದೊರಕಿಲ್ಲ.
ಮೊದಲ ಬಾರಿಗೆ ಸಚಿವ ಸಂಪುಟ ಸಭೆಯು ಇಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ಸರ್ಕಾರದ ಸಚಿವರು, ಶಾಸಕರು ಎಲ್ಲರೂ ಆಗಮಿಸುತ್ತಿದ್ದಾರೆ. ಈ ಸಭೆಯು ಜಿಲ್ಲೆಯ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಜನತೆಗೆ ನಿರೀಕ್ಷೆಯಾಗಿದೆ.