ಚಾಮರಾಜನಗರ: ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ದಸರಾ ಮಹೋತ್ಸವವನ್ನು ನಡೆಸಲು ಸಕಲ ಸಿದ್ಧತೆ ನಡೆಸಲಾಗಿದೆ.
ಅಕ್ಟೋಬರ್7, 8 ಹಾಗೂ 9 ರಂದು ಒಟ್ಟು ಮೂರು ದಿನಗಳ ಕಾಲ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಚಾಮರಾಜನಗರದಲ್ಲಿ ದಸರಾ ಆಚರಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಜಿಲ್ಲಾಧಿಕಾರಿ ಶಿಲ್ಪಾನಾಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಲಾವಿದರು, ಅಧಿಕಾರಿಗಳು ಭಾಗಿಯಾಗಿ ದಸರಾ ಆಚರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.
ಮೈಸೂರು ದಸರಾ ಭಾಗವಾಗಿ ಈ ಹಿಂದಿನಂತೆ ಚಾಮರಾಜನಗರ ದಸರಾ ಮಹೋತ್ಸವವನ್ನು ಮೂರು ದಿನಗಳ ಕಾಲ ಹೆಚ್ಚು ಆಕರ್ಷಕವಾಗಿ ಹಾಗೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ನಡೆಸಲು ನಿರ್ಧಾರ ಮಾಡಲಾಗಿದೆ.
ಇನ್ನು ಈ ಬಾರಿಯ ಚಾಮರಾಜನಗರ ದಸರಾದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಜೊತೆ ಜೊತೆಗೆ ಜಿಲ್ಲೆಯ ಕ್ರೀಡಾ ಸಾಧಕರನ್ನು ಸನ್ಮಾನಿಸಬೇಕು. ಬೊಂಬೆ ಕೂರಿಸುವುದು, ಸಂವಿಧಾನ ಜಾಗೃತಿಯಂತಹ ಕಾರ್ಯಕ್ರಮಗಳು, ಜನಪದ, ರಂಗಗೀತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುವಂತೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಹಾಗೂ ಸಾಂಪ್ರದಾಯಿಕವಾದ ಗಜ ಪೂಜೆ ಮೆರವಣಿಗೆಗೆ ಚಿಂತನೆ ನಡೆಸಲಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಇನ್ನಿತರ ಸಂಬಂಧಪಟ್ಟ ಇಲಾಖೆಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ.





