ಹನೂರು : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ರಾಮಾಪುರ ಗ್ರಾಮದ ನಿವಾಸಿಗಳಾದ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂಧಿತರು.
ಅನ್ಯ ಕಾರಣ ನಿಮಿತ್ತ ಅ.19 ರಂದು ತಮಿಳುನಾಡಿಗೆ ಹೋಗಿದ್ದ ವೇಳೆ ಮನೆಯಲ್ಲಿ ಚಿನ್ನಾಭರಣ ಸೇರಿದಂತೆ ನಗದು ಕಳ್ಳತನವಾಗಿರುವ ಬಗ್ಗೆ ಮಲ್ಲಿಗಾ ಎಂಬುವವರು ರಾಮಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತಂಡ ರಚಿಸಿ, ತಮಿಳುನಾಡಿನ ಸೇಲಂ, ಧರ್ಮಪುರಿ, ಬರಗೂರು, ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 100ಗ್ರಾಂ ಚಿನ್ನದ ಆಭರಣ, 6 ಸಾವಿರ ರೂ. ಮೌಲ್ಯದ ಬೆಳ್ಳಿ ಆಭರಣಗಳು ಹಾಗೂ 47000 ರೂ. ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.





