Mysore
28
clear sky

Social Media

ಗುರುವಾರ, 12 ಫೆಬ್ರವರಿ 2026
Light
Dark

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕದಿಂದ- ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು 50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ವಿಧಾನಸಭಾ ಕ್ಷೇತ್ರದ ಪೆದ್ದನಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೂಂದಿಗೆ ಮಾತನಾಡಿದ, ಅವರು ಕಳೆದ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆಗಮಿಸಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿರವರನ್ನು ಭೇಟಿಯಾಗಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿರುವ ಸೇತುವೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದೆವು. ಅವರು ಸಹ ಹೊಗೇನಕಲ್ ಫಾಲ್ಸ್, ಆಲಂಬಾಡಿ ಹಾಗೂ ಪಾಲಾರ್ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರು.

ಅದರಂತೆ ಕರ್ನಾಟಕ ಭಾಗದಿಂದ ತಮಿಳುನಾಡು ಭಾಗಕ್ಕೆ ಸಂಪರ್ಕ ಕಲ್ಪಿಸುವ ಹೊಗೇನಕಲ್ ಫಾಲ್ಸ್ ಗೆ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಧರ್ಮಪುರಿ, ಕೃಷ್ಣಗಿರಿ, ಹೊಸೂರು ಬೆಂಗಳೂರು ಸೇರಿದಂತೆ ಇನ್ನಿತರ ಜಿಲ್ಲೆಗಳಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳು, ಮಲೆ ಮಹದೇಶ್ವರ ಬೆಟ್ಟ, ಹೊಗನೇಕಲ್ ಫಾಲ್ಸ್ ಹಾಗೂ ಇನ್ನಿತರ ಕಡೆಗಳಿಂದ ಸ್ಥಳೀಯ ನಿವಾಸಿಗಳು ಬೆಂಗಳೂರು ತಲುಪಲು ಸಹ ಅನುಕೂಲವಾಗಲಿದೆ ಎಂದರು.

7 ಸೇತುವೆ ನಿರ್ಮಾಣ: 67 ಕೋಟಿ ವೆಚ್ಚದಲ್ಲಿ ಪ್ರಮುಖ 7 ಸೇತುವೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಪೈಕಿ ಹೂಗ್ಯಂ ಗ್ರಾಮದ ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪ 6.5 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ, ಬಂಡಳ್ಳಿ ಮುಖ್ಯ ರಸ್ತೆಯ ಬರಹಳ್ಳಕ್ಕೆ ಸೇತುವೆ ನಿರ್ಮಾಣ, ಚಿಕ್ಕಲೂರು ರಸ್ತೆಯಲ್ಲಿ ಎರಡು ಸೇರಿದಂತೆ 7 ಸೇತುವೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.

50 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಪಿ.ಜಿ.ಪಾಳ್ಯ, ಹುತ್ತೂರು, ವಿ.ಎಸ್.ದೊಡ್ಡಿ ಮಾರ್ಗವಾಗಿ ಒಡೆಯರಪಾಳ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸೇರಿದಂತೆ ಹಲವು ಗ್ರಾಮಗಳ ಪ್ರಮುಖ ಮುಖ್ಯರಸ್ತೆಗಳನ್ನು 50 ಕೋಟಿ ವೆಚ್ಚದಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮುಖ್ಯ ರಸ್ತೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸಮಸ್ಯೆಯನ್ನು ಬಗೆಹರಿಸಲಾಗುವುದು ನೀವು ಕೊಟ್ಟಿರುವ ಮತದ ಋಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ನಾನು ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಂತೆ ಎಲ್ಲಾ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಈ ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ರಾದ ಮುರುಗೇಶ್, ಮುಖಂಡರಾದ ಪಳನಿಸ್ವಾಮಿ, ಬಸವಣ್ಣ, ಹುಚ್ಚಯ್ಯ, ಮುನಿಯಪ್ಪ, ಶಿವು, ತಂಗವೇಲು, ಅರುಳ್ ಸ್ವಾಮಿ, ಗುರುಮಲ್ಲಪ್ಪ, ಗುಂಡೂರಾವ್, ರಾಜೇಂದ್ರ, ಸೆಂದಿಲ್, ಶಿವರಾಮು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ, ವಸತಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀಕಾಂತಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.

 

Tags:
error: Content is protected !!