Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಧಾರ್ಮಿಕ ಕ್ಷೇತ್ರ ಅಭಿವೃದ್ಧಿಪಡಿಸಿದ್ದು ಕಾಂಗ್ರೆಸ್ ಸರ್ಕಾರವಷ್ಟೇ: ಡಿಸಿಎಂ ಡಿ.ಕೆ. ಶಿವಕುಮಾರ್

ಹನೂರು : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೇವರ ದರ್ಶನದ ಬಳಿಕ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ಹೊಸದಾಗಿ ಸವದತ್ತಿ ಎಲ್ಲಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಈ ಹಿಂದೆ ಮಲೆ‌ಮಹದೇಶ್ವರ, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ್ದೆವು. ಮಲೆ ಮಹದೇಶ್ವರ ಸನ್ನಿಧಾನದ ಇತಿಹಾಸ ತೆಗೆದುಕೊಂಡರೆ ಈ ಹಿಂದೆ ಹೇಗಿತ್ತು ಈಗ ಹೇಗಿದೆ ಎನ್ನುವುದಕ್ಕೆ ಸಾಕ್ಷಿ ಕಣ್ಣ ಮುಂದಿದೆ. ಜನರು ದೇವಸ್ಥಾನಕ್ಕೆ ಬಂದಾಗ ಪ್ರಾರ್ಥನೆ ಮಾಡಲು ಪ್ರಶಾಂತವಾದ, ಉತ್ತಮವಾದ ವಾತಾವರಣ ನಿರ್ಮಾಣ ಮಾಡಿಕೊಡಬೇಕು ಎಂಬುದು ನಮ್ಮ ಆಶಯ ಎಂದರು.

“ಮಹದೇಶ್ವರನ ದರ್ಶನ ಮಾಡಿ ಪೂಜೆ ಸಲ್ಲಿಸಬೇಕು ಎಂದೇ ಬುಧವಾರ ರಾತ್ರಿಯೇ ಬಂದು ಇಲ್ಲಿ ವಾಸ್ತವ್ಯ ಹೂಡಿದ್ದೆ. ಮಲೆ ಮಹದೇಶ್ವರ ಸ್ವಾಮಿ ವಿಶೇಷವಾದ ದೇವರು. ಬಡವರು, ಮಧ್ಯಮ ವರ್ಗ ಹಾಗೂ ಎಲ್ಲಾ ವರ್ಗಗಳ ಜನರು ಆರಾಧಿಸುವ ದೇವರು. ಬುಡಕಟ್ಟು ಜನರು ಸಹ ಆರಾಧಿಸುವ ಪದ್ಧತಿಯಿದೆ” ಎಂದರು.

ಸಂಪುಟ ಸಭೆಯಿಂದ ಚಾಮರಾಜನಗರಕ್ಕೆ ಇರುವ ನಿರೀಕ್ಷೆಗಳೇನು ಎಂದು ಕೇಳಿದಾಗ, “ನಿರೀಕ್ಷೆಗಳನ್ನು ಈಡೇರಿಸಲು ಎಂದೇ ಇಡೀ ಸರ್ಕಾರ ಜಿಲ್ಲೆಗೆ ಬಂದಿದೆ. ನಮ್ಮ ಊರಿನಿಂದ ಈ ಹಿಂದೆ ಬೆಟ್ಟಕ್ಕೆ ಬರಬೇಕು ಎಂದರೆ 4-5 ಗಂಟೆ ಪ್ರಯಾಣವಾಗುತ್ತಿತ್ತು. ಈಗ ರಸ್ತೆ ಅಭಿವೃದ್ಧಿಯಾಗಿದೆ. ಪ್ರತಿವರ್ಷ ಲಕ್ಷಾಂತರ ಜನ ಕಾವೇರಿ ನದಿ ದಾಟಿಕೊಂಡು ಕ್ಷೇತ್ರಕ್ಕೆ ಬರುತ್ತಾರೆ. ಇದಕ್ಕೆ ಅನುಕೂಲವಾಗುವಂತೆ ಮೇಕೆದಾಟು ಆದ ನಂತರ ಮೇಲ್ಸೇತುವೆ ರಸ್ತೆ ನಿರ್ಮಾಣದ ಬಗ್ಗೆ ಯೋಚನೆ ಮಾಡಲಾಗುವುದು. ಕಾವೇರಿ ಜಲಾನಯನ ಪ್ರದೇಶದಲ್ಲಿ ಏನೇನು ಕೆಲಸ ಮಾಡಬೇಕು ಎಂದು ತೀರ್ಮಾನ ಮಾಡಲಾಗುವುದು” ಎಂದರು‌

“ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಬೇಕು ಎನ್ನುವುದು ನಮ್ಮ ಆಲೋಚನೆ” ಎಂದು ತಿಳಿಸಿದರು.

ಸುತ್ತೂರು ಶಾಖಾ ಮಠಕ್ಕೆ ಭೇಟಿ: ಮಲೆ ಮಹದೇಶ್ವರ ದರ್ಶನ ಪಡೆದ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಮಲೆ ಮಹದೇಶ್ವರ ಬೆಟ್ಟದ ಸುತ್ತೂರು ಶಾಖ ಮಠಕ್ಕೆ ಭೇಟಿ ನೀಡಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ ಸ್ವಾಮಿಗಳ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಈ ವೇಳೇ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ಆರ್ ನರೇಂದ್ರ, ಕಾಡಾ ಅಧ್ಯಕ್ಷ ಮರಿಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:
error: Content is protected !!