Mysore
33
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಹನೂರು| ಕಾವೇರಿ ನದಿ ದಾಟಿ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಆರಂಭಿಸಿದ ಭಕ್ತರು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಮನಗರ, ಚನ್ನಪಟ್ಟಣ, ಮಾಗಡಿ, ಬೆಂಗಳೂರು ತಾಲ್ಲೂಕಿನಿಂದ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆ ಮೂಲಕ ಕಾವೇರಿ ನದಿ ದಾಟಿ ಶ್ರೀ ಕ್ಷೇತ್ರಕ್ಕೆ ಪಾದಯಾತ್ರೆ ಪ್ರಾರಂಭಿಸಿದ್ದಾರೆ.

ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಪಾದಯಾತ್ರೆಯ ಮೂಲಕ ಬರುವ ಪಾದಯಾತ್ರೆಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದಾರೆ. ವಿಶೇಷವಾಗಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಎಸ್ ಡಿ ಆರ್ ಎಫ್ ತಂಡ, ಕಂದಾಯ ಇಲಾಖೆ, ಅಗ್ನಿಶಾಮಕ ದಳ ಸಿಬ್ಬಂದಿ ವರ್ಗದವರು ಬಸವನಕಡ ಸ್ಥಳದಲ್ಲಿಯೇ ಮೊಕ್ಕಂ ಹೂಡಿ ಪಾದಯಾತ್ರಿಕರಿಗೆ ಕಾವೇರಿ ನದಿ ದಾಟಲು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರೆಗೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇರುವುದರಿಂದ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಕಳೆದ ಶನಿವಾರ ಬಸವನ ಕಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಮುಂಜಾಗ್ರತೆ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಎಸ್ಪಿ ಮುತ್ತುರಾಜ್‌ರವರಿಂದ ವಿಶೇಷ ಕಾಳಜಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾವೇರಿ ನದಿ ದಾಟಿ ನಂತರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ತೆರಳುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್ ರವರು ಮೊಟ್ಟ ಮೊದಲ ಬಾರಿಗೆ ಎಸ್‌ ಡಿ ಆರ್‌ಎಫ್ ಸಿಬ್ಬಂದಿ ವರ್ಗದವರನ್ನು ನಿಯೋಜನೆ ಮಾಡಿ ಮುಂಜಾಗ್ರತ ಕ್ರಮವಾಗಿ ಸುರಕ್ಷತೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಹನೂರು ಇನ್ಸ್‌ಪೆಕ್ಟರ್ ಆನಂದ್ ಮೂರ್ತಿಯಿಂದ ಜಾಗೃತಿ: ಕಾವೇರಿ ನದಿ ದಾಟಿದ ನಂತರ ಬಸವನ ಕಡೆ ಸ್ಥಳಕ್ಕೆ ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ ಹನೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆನಂದಮೂರ್ತಿ ಮಂಗಳವಾರ ಬೆಳಿಗ್ಗೆ ಏಳು ಗಂಟೆಗೆ ಬಸವನ ಕಡ ತಲುಪಿ ಎಲ್ಲಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಸ್ಥಳದಲ್ಲಿಯೇ ಮೊಕ್ಕಂ ಹೂಡಿದ್ದಾರೆ, ಇದಲ್ಲದೆ ಹನೂರು ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಮೈಕ್ ಮುಖಾಂತರ ಪಾದಯಾತ್ರೆಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಅನುಸರಿಸಬೇಕಾದ ಕ್ರಮಗಳು: ಪಾದಯಾತ್ರೆ ಮಾಡುವ ಭಕ್ತಾದಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲನೆ ಮಾಡಬೇಕು ಚಿನ್ನಾಭರಣ ಮಾಂಗಲ್ಯ ಸರ ಹಾಗೂ ಇನ್ನಿತರ ಬೆಲೆಬಾಳುವ ವಸ್ತುಗಳ ಬಗ್ಗೆ ನಿಗಾವಹಿಸಬೇಕು, ಪಾದಾಚಾರಿಗಳು ರಸ್ತೆಯ ಮಧ್ಯಭಾಗದಲ್ಲಿ ಚಲಿಸದೆ ರಸ್ತೆ ಬದಿಯ ಫುಟ್ಬಾತ್ ನಲ್ಲಿ ಸಾಲಾಗಿ ತಿಳಿಸಬೇಕು ಭಕ್ತಾದಿಗಳು ಕಾಲುದಾರಿ ಬಿಟ್ಟು ಅರಣ್ಯದೊಳಗಡೆ ವಿಶ್ರಾಂತಿಗೆ ತೆರಳಬಾರದು, ಪಾದಯಾತ್ರಿಕರು ಬೆಳಕಿನ ವೇಳೆ ಮಾತ್ರ ಪಾದಯಾತ್ರೆ ಮಾಡಬೇಕು, ವನ್ಯಪ್ರಾಣಿಗಳು ಕಂಡರೆ ಫೋಟೋ ತೆಗೆಯಲು ಹೋಗಬಾರದು ಅರಣ್ಯ ಪ್ರದೇಶದಲ್ಲಿ ಮೊಬೈಲ್ ಹಾಗೂ ಏರ್ ಫೋನ್ ಬಳಸಬಾರದು ತುರ್ತು ಸಂದರ್ಭಗಳಲ್ಲಿ 9480500131 ಸಂಖ್ಯೆ ಗೆ ಕರೆ ಮಾಡುವುದು ಅರಣ್ಯ ಪ್ರದೇಶದಲ್ಲಿ ಸಿಗರೇಟ್ ಬಿಡಿ ಸೇದುವುದು ಕಡ್ಡಾಯ ನಿಷೇಧ ಕೊಡಲಾಗಿದೆ ಇದಲ್ಲದೆ ಅರಣ್ಯದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ ಸೇರಿದಂತೆ ಇನ್ನಿತರ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಪಾದಯಾತ್ರಿಕರಿಂದ ಮೆಚ್ಚುಗೆ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ರಾಮನಗರ ಚನ್ನಪಟ್ಟಣ ಮಾಗಡಿ ಬೆಂಗಳೂರು ಗ್ರಾಮಗಳಿಂದ ಆಗಮಿಸುತ್ತಿರುವ ಪಾದಯಾತ್ರಿಕರು ಚಾಮರಾಜನಗರ ಜಿಲ್ಲಾಡಳಿತ ಕೈಗೊಂಡಿರುವ ಅಗತ್ಯ ಸುರಕ್ಷತೆ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ಹಲವಾರು ವರ್ಷಗಳಿಗಿಂತ ಈ ಬಾರಿ ಪೊಲೀಸರು ಹಾಗೂ ಎಸ್ ಡಿ ಆರ್ ಎಫ್ ತಂಡ ಸ್ಥಳದಲ್ಲಿಯೇ ಇದ್ದು ಭಕ್ತಾದಿಗಳಿಗೆ ಅಸಹಾಯ ಮಾಡುತ್ತಿದ್ದಾರೆ. ಇದಲ್ಲದೆ ಸಮರ್ಪಕ ಮಾಹಿತಿ ನೀಡುತ್ತಿರುವುದರಿಂದ ಅನುಕೂಲವಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಕಾವೇರಿ ನದಿಯ ಮೂಲಕ ಮಲೆಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಹನೂರು ಪಟ್ಟಣದ ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಮಹೇಶ್ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಿದ್ದಾರೆ.

ಗ್ರಾಮ ಪಂಚಾಯಿತಿ ವತಿಯಿಂದ ಕುಡಿಯುವ ನೀರು ಬೆಳಕಿನ ವ್ಯವಸ್ಥೆ: ಮಲೆಮಾದೇಶ್ವರ ಬೆಟ್ಟಕ್ಕೆ ತೆರಳುವ ಪಾದಯಾತ್ರಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶಾಗ್ಯ, ಬಂಡಳ್ಳಿ ಎಲೆ ಮಾಳ ಕೌದಳ್ಳಿ ಮಲೆಮಾದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಪಾದಯಾತ್ರಿಕರಿಗೆ ಕುಡಿಯುವ ನೀರಿನ ಸೌಲಭ್ಯ, ಅಗತ್ಯವಿರುವ ಕಡೆ ಬೆಳಕಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಇಒ ಉಮೇಶ್ ಪತ್ರಿಕೆಗೆ ತಿಳಿಸಿದರು.

ಆಹಾರ ಸುರಕ್ಷತಾ ಅಧಿಕಾರಿಗಳ ಭೇಟಿ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ದಾನಿಗಳು ತಯಾರಿಸುವ ಪ್ರಸಾದವನ್ನು ಕಡ್ಡಾಯವಾಗಿ ತಪಾಸಣೆ ಮಾಡಲು ಆಹಾರ ಸುರಕ್ಷತಾ ಅಧಿಕಾರಿಗಳ ತಂಡವನ್ನು ನೇಮಕ ಮಾಡಲಾಗಿದ್ದು ಡಾ. ಲೋಹಿತ್ ನೇತೃತ್ವದ ತಂಡ ಈಗಾಗಲೇ ಹಲವು ಕಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ದರ್ಶನ ಕೊಟ್ಟ ಚಿರತೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಾದಿಗಳು ಟಿಟಿ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮಲೆಮಾದೇಶ್ವರ ಬೆಟ್ಟ ರಸ್ತೆ ಮಾರ್ಗ ಮಧ್ಯದಲ್ಲಿ ಚಿರತೆ ಕುಳಿತಿರುವುದನ್ನು ವಾಹನ ಸವಾರರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.

ದ್ವಿಚಕ್ರ ತ್ರಿಚಕ್ರ ವಾಹನಕ್ಕೆ ನಿಬಂಧ: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಐದು ದಿನಗಳ ಕಾಲ ಸಾವಿರಾರು ವಾಹನ ಹಾಗೂ 350ಕ್ಕೂ ಹೆಚ್ಚು ಕೆಎಸ್ಆರ್ಟಿಸಿ ಬಸ್ ಗಳು ಸಂಚಾರ ಮಾಡುವುದರಿಂದ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಫೆಬ್ರವರಿ 13ರ ಬೆಳಿಗ್ಗೆ 6 ಗಂಟೆಯಿಂದ ಫೆ 18ರ ಸಂಜೆ 6 ಗಂಟೆಯವರೆಗೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

Tags:
error: Content is protected !!