ಚಾಮರಾಜನಗರ: ಜಿಲ್ಲೆಯಲ್ಲಿ ಜನನ-ಮರಣ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಇನ್ನು 6 ತಿಂಗಳ ಒಳಗಡೆ ಇದರ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನನ- ಮರಣಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜು ಪ್ರವೇಶಕ್ಕಾಗಿ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲಿಕ್ಕಾಗಿ ಜನನ ಪ್ರಮಾಣ ಪ್ರಮಾಣಪತ್ರಗಳು ಅತ್ಯಾವಶ್ಯಕವಾಗಿವೆ ಎಂದರು.
ಸಾಕಷ್ಟು ವರ್ಷಗಳಿಂದ ಲಭ್ಯವಿರುವ ಜನನ-ಮರಣ ಪತ್ರಗಳನ್ನು ಸೂಕ್ತವಾಗಿ ನಿರ್ವಹಿಸಬೇಕು. ಈ ದಾಖಲೆಗಳನ್ನು ಯಾವುದೇ ರೀತಿಯಲ್ಲಿಯೂ ತಡೆ ಮಾಡದೇ ಡಿಜಿಟಲೀಕರಣ ಮಾಡಬೇಕು ಎಂದು ಕಟ್ಟುನಿಟ್ಟಾಗಿ ತಿಳಿಸಿದರು.
ಸಾಮಾನ್ಯವಾಗಿ ಜನನ ಪ್ರಮಾಣಪತ್ರಗಳನ್ನು 21 ದಿನದೊಳಗೆ ನೀಡಬೇಕು. ಜನನ- ಮರಣ ಪ್ರಮಾಣ ಪತ್ರಗಳನ್ನು ಡಿಜಿಟಲೀಕರಣ ಮಾಡುವುದರಿಂದ ಜನರು ಕಚೇರಿಗೆ ಅಲೆದಾಡುವುದು ತಪ್ಪಲಿದೆ. ನಮ್ಮ ಜಿಲ್ಲೆಗೆ ಸಂಬಂಧಿಸಿದ ಜನನ -ಮರಣ ಪತ್ರಗಳು ಬೇರೆ ಜಿಲ್ಲೆಗಳಲ್ಲಿದ್ದರೂ ಅದನ್ನು ತರಿಸಿಕೊಳ್ಳುವ ಕೆಲಸವಾಗಬೇಕು ಎಂದು ಹೇಳಿದರು.
ಸಂಬಂಧಿಸಿದ ತಾಲ್ಲೂಕು ಕಚೇರಿಗಳಲ್ಲಿ ಆಯಾ ತಾಲ್ಲೂಕುವಾರು ಹಾಗೂ ವರ್ಷಾವಾರು ದಾಖಲೆಗಳನ್ನು ಸಂಗ್ರಹಿಸಿಡುವ ಕಾರ್ಯ ಆದ್ಯತೆ ಮೇರೆಗೆ ಆಗಬೇಕು. ಪರಿಶಿಷ್ಟ ಪಂಗಡಗಳ ಆದಿವಾಸಿ ಜನರು ವಾಸಿಸುವ ಹಾಡಿ-ಪೋಡುಗಳಲ್ಲಿನ ಮಕ್ಕಳಿಗೆ ಜನನ ಪ್ರಮಾಣಪತ್ರಗಳನ್ನು ನಿಗದಿತ ಕಾಲಮಿತಿಯಲ್ಲಿ ನೀಡಬೇಕು ಎಂದು ತಾಕೀತು ಮಾಡಿದರು.
ಮರಣ ಪ್ರಮಾಣಪತ್ರದಲ್ಲಿ ಎಲ್ಲಾ ವಿಷಯಗಳನ್ನು ಕ್ರಮಬದ್ಧವಾಗಿ ದಾಖಲಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ನಿಗಾ ವಹಿಸಬೇಕು.ಈ ಪ್ರಮಾಣಪತ್ರಗಳ ವಿತರಣೆಯಲ್ಲಿ ವಿಳಂಬಕ್ಕೆ ಅವಕಾಶವಾಗದಂತೆ ಗ್ರಾಮ ಪಂಚಾಯಿತಿಗಳು, ಸ್ಥಳೀಯ ಸರ್ಕಾರಿ ಆಸ್ಪತ್ರೆಗಳು ಎಚ್ಚರ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಽಕಾರಿಗಳಿಗೆ ಸೂಕ್ತ ತರಬೇತಿ ಸಹ ನೀಡಬೇಕು ಎಂದರು.
ಜನನ ಮರಣ ಪ್ರಮಾಣಪತ್ರ ನೀಡಿಕೆಯಲ್ಲಿ ಆರೋಗ್ಯ ಇಲಾಖೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಸಾಂಖ್ಯಿಕ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ದಾಖಲೆಗಳ ನಿರ್ವಹಣೆ ಸಂಬಂಧ ತಾಲೂಕು ಮಟ್ಟದ ಸಭೆಗಳನ್ನು ನಿಯಮಿತವಾಗಿ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಡಿಸಿ ತಿಳಿಸಿದರು.
ಜಿಪಂ ಸಿಇಒ ಮೋನಾ ರೋತ್, ಎಎಸ್ಪಿ ಎಂ.ಎನ್. ಶಶಿಧರ್, ಜಿಲ್ಲಾ ಸಾಂಖ್ಯಿಕ ಸಂಗ್ರಹಣಾಧಿಕಾರಿ ಪವನ್ಕುಮಾರ್, ಜಿಲ್ಲಾಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ. ಮಹೇಶ್, ಜಿಲ್ಲಾ ಸರ್ಜನ್ ಡಾ.ಮಹೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಎಂ.ವಿ. ಸುಧಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಬೀದ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.





