ಹನೂರು : ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಲಕ್ಷ ರೂ. ಮೌಲ್ಯದ ವಸ್ತು ನಾಶಗೊಂಡಿದೆ.
ಈ ಸಂಬಂಧ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಮಾಹಿತಿ ನೀಡಿದ್ದು, ಶುಕ್ರವಾರ ಮಧ್ಯಾಹ್ನ ಲಾಡು ಪ್ರಸಾದ ತಯಾರಿಕ ಕೇಂದ್ರದಲ್ಲಿ ನಡೆದ ಅಗ್ನಿ ಅವಘಡದಲ್ಲಿ 36,220 ಲಾಡು, 28 ಟಿನ್ ಎಣ್ಣೆ, 50 ಕೆಜಿಯ 9 ಮೂಟೆ ಸಕ್ಕರೆ, 30 ಕೆಜಿ ದ್ರಾಕ್ಷಿ, 40 ಕೆಜಿ ನಂದಿನಿ ತುಪ್ಪ, 96 ಕೆಜಿ ಕಡ್ಲೆ ಹಿಟ್ಟು ಸಿಲಿಂಡರ್ ಪೈಪ್ ಲೈನ್ ಸಂಪೂರ್ಣ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.
ಈ ಅಗ್ನಿ ಅವಘಡದಲ್ಲಿ ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ 10.2 ಲಕ್ಷ ನಷ್ಟ ಉಂಟಾಗಿದೆ ಎಂದು ಸರಸ್ವತಿ ತಿಳಿಸಿದ್ದಾರೆ.
ನೌಕರ ಅಮಾನತು : ಲಾಡು ಪ್ರಸಾದ ತಯಾರಿಕ ಘಟಕದಲ್ಲಿ ಸಿಲಿಂಡರ್ ನಲ್ಲಿ ಅನಿಲ ಸೋರಿಕೆಯಿಂದ ಬೆಂಕಿ ಬಿದ್ದು ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ದ್ವಿತೀಯ ದರ್ಜೆ ಸಹಾಯಕ ಕೆ.ಪಿ. ಮಹದೇವಸ್ವಾಮಿ ಅವರನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಹಿರಿಯ ಅಧಿಕಾರಿಗಳ ಆದೇಶದನ್ವಯ ಲಾಡು ಪ್ರಸಾದ ಘಟಕದ ದ್ವಿತೀಯ ದರ್ಜೆ ಸಹಾಯಕ ಕೆಪಿ ಮಹದೇವಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ, ಘಟನೆಯ ಬಗ್ಗೆ ಸಮಗ್ರ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ಸರಸ್ವತಿ ತಿಳಿಸಿದ್ದಾರೆ.