ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ ಸಂಘದ ಹೋರಾಟಗಾರರ ಶ್ರಮ ಹಾಗೂ ಸರ್ಕಾರದ ಸಹಕಾರದಿಂದ ಉಡುತೊರೆ ಹಳ್ಳ ಜಲಾಶಯಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರು ತುಂಬಿಸುವ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ಸಿಗುವ ಆಶಾ ಭಾವನೆ ಇದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಾನು ಶಾಸಕನಾಗಿದ್ದಾಗ ಹನೂರು ವಿಧಾನಸಭಾ ಕ್ಷೇತ್ರದ ಪ್ರಮುಖ ಮೂರು ಜಲಾಶಯಗಳಾದ ಹುಬ್ಬೆ ಹುಣಸೆ, ರಾಮನ ಗುಡ್ಡ, ಗುಂಡಾಲ್ ಜಲಾಶಯಗಳಿಗೆ 132 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿ ಗುಂಡಾಲ್ ಜಲಾಶಯಕ್ಕೆ ನೀರು ತುಂಬಿಸಲಾಗಿತ್ತು.
ಈ ವೇಳೆ ರಾಮಾಪುರ ಹೋಬಳಿ ವ್ಯಾಪ್ತಿಯ ರೈತರು ಉಡುತೊರೆ ಹಳ್ಳ ಜಲಾಶಯ, ಕೀರೆಪಾತಿ, ಹಾಲೇರಿಕೆರೆ ನೀರು ತುಂಬಿಸುವಂತೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಿದ್ದರು. ನಾನು ಸಹ ಬರಪೀಡಿತ ಪ್ರದೇಶಗಳಿಗೆ ನೀರು ತುಂಬಿಸುವುದರಿಂದ ಹೆಚ್ಚಿನ ಅನುಕೂಲವಾಗಲಿದ್ದು, ಅಂತರ್ಜಲ ಮಟ್ಟ ಹೆಚ್ಚಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೆ. ಅದರಂತೆ 110 ಕೋಟಿ ವೆಚ್ಚದಲ್ಲಿ ಡಿಪಿಆರ್ ಮಾಡಲಾಗಿತ್ತು.
ಇನ್ನೇನು ಹೊಸ ಯೋಜನೆಗೆ ಅನುಮೋದನೆಗೊಂಡು ದೊಡ್ಡ ಪೈಪ್ ಅಳವಡಿಕೆ ಮಾಡಿದರೆ ರಾಮನಗುಡ್ಡ ಹಾಗೂ ಜಲಾಶಯಗಳಿಗೆ ಕಡಿಮೆ ದಿನಗಳ ಅವಧಿಯಲ್ಲಿ ನೀರು ತುಂಬಿಸಬಹುದು ಎಂದು ಅಂದುಕೊಂಡಿದ್ದೆವು, ಆದರೆ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರು ಬದಲಾವಣೆಯಾದ ನಂತರ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿರವರು ಅನುದಾನ ನೀಡದೆ ಇರುವುದರಿಂದ ಏತ ನೀರಾವರಿ ಯೋಜನೆ ಸ್ಥಗಿತವಾಗಿತ್ತು. ಒಟ್ಟಾರೆ ಕೆಲವು ಬದಲಾವಣೆಗಳಿಂದ ಎರಡು ಜಲಾಶಯಗಳಿಗೆ ನೀರು ತುಂಬಿಸುವ ಕಾಮಗಾರಿಯು ವಿಳಂಬವಾಯಿತು ಎಂದು ಸ್ಪಷ್ಟಪಡಿಸಿದರು.
ಇದೀಗ ರಾಮಪುರ ಹೋಬಳಿ ವ್ಯಾಪ್ತಿಯ ಪ್ರಮುಖ ಜಲಾಶಯಗಳು ಸೇರಿದಂತೆ ಕೆರೆಕಟ್ಟೆಗಳಿಗೆ ನೀರು ತುಂಬಿಸುವ 490 ಕೋಟಿ ವೆಚ್ಚದಲ್ಲಿ ಏತ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಅನುದಾನ ನೀಡುವಂತೆ ಕಳೆದ ವಾರ ಮುಖ್ಯಮಂತ್ರಿಗಳ ಜೊತೆಯೂ ಚರ್ಚಿಸಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರಾದ ವೆಂಕಟೇಶ್ ರವರು ಸಂಸದರಾದ ಸುನೀಲ್ ಬೋಸ್, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಮಹದೇವಪ್ಪ ರವರು ಸಹ ಮುಖ್ಯಮಂತ್ರಿಗಳ ಬೇರೆ ಒತ್ತಡ ಹಾಕಿ ಈ ನೀರಾವರಿ ಯೋಜನೆ ಅನುಷ್ಠಾನ ಆಗಲೇಬೇಕು ಎಂದಿರುವುದರಿಂದ ಮುಖ್ಯಮಂತ್ರಿಗಳು ಸಹ ಬಜೆಟ್ ನಲ್ಲಿ ಸೇರ್ಪಡೆ ಮಾಡಿ ಸುಮಾರು 70 ಕೋಟಿ ಅನುದಾನ ನೀಡುವ ವಿಶ್ವಾಸವಿದೆ ಎಂದರು.
ಒಟ್ಟಾರೆ ಒಂದು ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆಯಾಗಿ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನಿರ್ಣಯ ಮಾಡಿದ ನಂತರ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸೂಚಿಸಿದರೆ ಯಾವ ಸರ್ಕಾರ ಬಂದರು ಯೋಜನೆ ಅನುಷ್ಠಾನಗೊಳ್ಳಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಮ್ಮ ಭಾಗದ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೇ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈಗಾಗಲೇ ಅಧಿಕಾರಿಗಳು ಸಮಸ್ಯೆ ಇರುವ ಕಡೆ ಭೇಟಿ ನೀಡಿದ್ದಾರೆ. ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಕಡೆ ತುರ್ತು ಕೊಳವೆಬಾವಿ ಕೊರಸಬೇಕಿದೆ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಮುಂದಿನ ದಿನಗಳಲ್ಲಿ ಮತ್ತಷ್ಟು ಬೇಸಿಗೆ ಹೆಚ್ಚಾಗುವುದರಿಂದ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿರುವುದರಿಂದ ಪ್ರತಿನಿತ್ಯ ಒಂದಲ್ಲ ಒಂದು ಪ್ರಕರಣಗಳು ಮರುಕಳಿಸುತ್ತಿವೆ. ಇದರಿಂದ ಸಾವು ನೋವುಗಳು ಉಂಟಾಗುತ್ತಿದೆ ಸರ್ಕಾರ ಪರಿಹಾರ ನೀಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಇದರ ಬದಲು ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು. ಕಾಡು ಪ್ರಾಣಿಗಳಿಂದ ಆಗುವ ಬೆಳೆ ನಾಶಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಪ್ರಸ್ತುತ ನೀಡುತ್ತಿರುವ ಪರಿಹಾರ ಕಡಿಮೆ ಇರುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಮಾಡಿ ರೈತರಿಗೆ ನೆರವಾಗಬೇಕು ಎಂದು ತಿಳಿಸಿದರು.




