ಹನೂರು : ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಸಚಿವ ಸಂಪುಟ ಸಭೆಯಲ್ಲಿ ಗಮನಹರಿಸುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹೆಲಿಪ್ಯಾಡ್ನಲ್ಲಿ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಕಬ್ಬಿಗೆ ೫ ಸಾವಿರ ನಿಗಧಿ, ಸಕ್ಕರೆ ಕಾರ್ಖಾನೆಗಳ ಮುಂದೆ ತೂಕದ ಯಂತ್ರ ಅಳವಡಿಕೆ, ಕಬ್ಬಿನ ಬಾಕಿ ಹಣ ಬಿಡುಗಡೆ, ಕೃಷಿಗೆ ಹಗಲು ವೇಳೆ ೧೦ ಗಂಟೆ ವಿದ್ಯುತ್ ಪೂರೈಕೆ, ಅಕ್ರಮ ಸಕ್ರಮ ಯೋಜನೆ ಮರು ಜಾರಿ ಮಾಡುವಂತೆ ಮನವಿಯಲ್ಲಿ ಒತ್ತಾಯಿಸಿದರು.
ಹಾಲು ಉತ್ಪಾದಕರ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೈತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕು. ಜಿಲ್ಲೆಯ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಒಂದು ಸಾವಿರ ಕೋಟಿ ಯೋಜನೆ ರೂಪಿಸ ಬೇಕು ಎಂದರು.
ಕಾಡುಪ್ರಾಣಿಗಳ ಹಾವಳಿಯಿಂದ ಉಂಟಾಗುವ ನಷ್ಟಕ್ಕೆ ವೈಜ್ಞಾನಿಕ ಬೆಳೆ ನಷ್ಟ ಪರಿಹಾರ ನೀಡಬೇಕು. ಜಿಲ್ಲೆಗೆ ವಿಶೇಷ ಎಳನೀರು ಮಾರಾಟ ಕೇಂದ್ರ ಪ್ರಾರಂಭಿಸಬೇಕು. ರೈತರ ಜಮೀನುಗಳಿಗೆ ಸಮರ್ಪಕ ರಸ್ತೆ ಕಲ್ಪಿಸಲು ವಿಶೇಷ ಯೋಜನೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ, ಜಿಲ್ಲಾಧ್ಯಕ್ಷ ಹಾಲಿನ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಮಲೆಯೂರು ಮಹೇಂದ್ರ, ಮುಖಂಡ ಪ್ರಕಾಶ್ ಗಾಂಧಿ ಇದ್ದರು.





