ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಮುನಿಯಪ್ಪ (35), ಮಹೇಂದ್ರ (35) ಮತ್ತು ಸುರೇಶ್ (24) ಮೃತಪಟ್ಟ ದುರ್ದೈವಿಗಳು.
ಘಟನೆಯ ವಿವರ: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸ್ನೇಹಿತರಿಂದ ಗಣಪತಿ ಪ್ರತಿಷ್ಠಾಪನೆ ಮಾಡಲು ಹಣ ಪಡೆದುಕೊಂಡು ಬರಲು ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ.
ಸಾಲುಂಡಿ ಗ್ರಾಮದ ಕಡೆಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಅತಿವೇಗವಾಗಿ ಬಂದು ಹುಲಸುಗುಡ್ಡೆ ಬೋರೆ ಸಮೀಪ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಡಿಕ್ಕಿ ಹೊಡೆದ ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ನಂತರ ಕಾರ್ಯಪ್ರವೃತ್ತರಾದ ಹನೂರು ಪೊಲೀಸರು ಲೋಕನಹಳ್ಳಿ ರಸ್ತೆಯ ಚಿಕ್ಕಮಲಾಪುರ ಸಮೀಪ ಕಾರು ಮತ್ತು ಕಾರಿನಲ್ಲಿದ್ದ ಮೂವರು ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



