ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ 500ಕ್ಕೂ ಹೆಚ್ಚು ರೈತ ಮುಖಂಡರು ಹಾಗೂ ಗ್ರಾಮಸ್ಥರು ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.
ನಂತರ ಶೈಲೇಂದ್ರ ಮಾತನಾಡಿ, ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ಇದನ್ನು ಬಗೆಹರಿಸುವಲ್ಲಿ ಪಿಡಿಒ ವಿಫಲರಾಗಿದ್ದಾರೆ. 7 ಗ್ರಾಮಗಳಲ್ಲಿ ಕೊಳವೆಬಾವಿ ಕೊರೆದು ವರ್ಷಗಟ್ಟಲೆ ಆಗಿದ್ದರು ಇನ್ನು ಮೋಟಾರ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಗಳಿಗೆ ಪಿಡಿಒ ನಿರ್ಲಕ್ಷ್ಯ ದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಈ ಕೂಡಲೇ ಈತನ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು..
ಇದಲ್ಲದೆ ಸಮರ್ಪಕ ದಾಖಲಾತಿ ಕಂದಾಯ ಪಾವತಿ ಮಾಡಿದರು ಇ-ಸ್ವತ್ತು ನೀಡದೆ ಸಾರ್ವಜನಿಕರನ್ನು ಸತಾಯಿಸುತ್ತಿದ್ದಾರೆ. ಇದರಿಂದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದ್ದು ಸರ್ಕಾರದ ನಿಯಮದಂತೆ ಈ ಸ್ವತ್ತು ವಿತರಣೆ ಮಾಡಬೇಕು ಎಂದರು.
ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗಿದೆ ಅಂತರ್ಜಲ ಮಟ್ಟ ಕುಸಿದು ರೈತರು ಸಂಕಷ್ಟಕ್ಕೀಡಾಗಿದ್ದಾರೆ, ಜಾನುವಾರುಗಳಿಗೆ ಗೋಶಾಲೆ ತೆರೆದು ಕುಡಿಯುವ ನೀರು, ಮೇವು ಪೂರೈಕೆ ಮಾಡಬೇಕು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಹೆಚ್ಚು ಅನುದಾನ ನೀಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಇಒ ಉಮೇಶ್ ಮಾತನಾಡಿ, ಹನೂರು ತಾಲೂಕು ವ್ಯಾಪ್ತಿಯಲ್ಲಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಸಮರ್ಪಕ ನೀರು ಪೂರೈಕೆ ಮಾಡಲಾಗುತ್ತಿದೆ ಅದರಂತೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನೀರು ಪೂರೈಕೆ ಮಾಡಲಾಗುವುದು. ಈ ಸ್ವತ್ತು ವಿಳಂಬವಾಗಿರುವುದಕ್ಕೆ ಸ್ಥಳ ಪರಿಶೀಲನೆ ನಡೆಸಿ ದಾಖಲಾತಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದರು.
ರೈತ ಮುಖಂಡರು ಮಾತನಾಡಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಪಹಣಿ ಜಮೀನುಗಳಿಗೆ ಪ್ರತ್ಯೇಕ ಫೋಡು ಆಗದೆ ಇರುವುದರಿಂದ ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ಕೂಡಲೇ ಪೋಡಿನ ವ್ಯವಸ್ಥೆ ಮಾಡಬೇಕು ಎಂದರು.
ಕರೋನಗೂ ಮುನ್ನಾ ತಮಿಳುನಾಡು ಹಾಗೂ ಜಿಲ್ಲಾ ಕೇಂದ್ರಕ್ಕೆ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಈ ಕೂಡಲೇ ಬಸ್ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ ಹಿನ್ನೆಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಕೆಎಸ್ಆರ್ಟಿಸಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರತಿಭಟನೆಯ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಅರ್ಪುದ ರಾಜ್, ಸದಸ್ಯರಾದ ಡೇವಿಡ್ ಪೀಟರ್, ವಸಂತ್ ಕುಮಾರ್ ರವಿ ಬಸವರಾಜು ವಲ್ಲಭದಾಸ್ ಲೂರ್ದು ಸ್ವಾಮಿ ಜೋಸೆಫ್ ಪುಟ್ಟಸ್ವಾಮಿ ಆರೋಗ್ಯಸ್ವಾಮಿ ಅಂತೋಣಿ ಸ್ವಾಮಿ, ಸೂಸೈ ಮಾಣಿಕ್ಯಂ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ರೈತರು ಮಹಿಳೆಯರು ಗ್ರಾಮಸ್ಥರು ಭಾಗವಹಿಸಿದ್ದರು.




