ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಹಾಗೂ ರೈತ ಮುಖಂಡರು ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಎನ್.ಕೃಷ್ಣಮೂರ್ತಿ ಹಾಗೂ ರಕ್ಷಣಾ ವೇದಿಕೆ ಅಧ್ಯಕ್ಷ ನೇಮತ್ ಪಾಷಾ, ಕನ್ನಡಿಗ ವಿರಾಟ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಅರಣ್ಯ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಮಾತನಾಡಿ, ಬಿ.ಆರ್.ಟಿ ವನ್ಯಜೀವಿ ವಲಯ ಹಾಗೂ ಮಲೆ ಮಹದೇಶ್ವರ ವನ್ಯಜೀವಿ ವಲಯ ಧಾಮದಲ್ಲಿ ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಹೆಚ್ಚಾಗಿರುವುದರಿಂದ ಪ್ರತಿನಿತ್ಯ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನಾಶವಾಗುತ್ತಿದೆ. ಈ ಸಂಬಂಧ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸುವಂತೆ ಹಲವಾರು ಬಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ರೈತ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದು ಆತ್ಮಹತ್ಯೆ ಪರಿಹಾರ ಎಂಬುವಂತಾಗಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಸಬೇಕು, ಎಲ್ಲೆಂದರಲ್ಲಿ ಅಗೆದಿರುವ ಆನೆ ಕಂದಕ ಗಳನ್ನು ಮುಚ್ಚಿ ನಿಯಮಾನುಸಾರ ಕಾಡು ಪ್ರಾಣಿಗಳು ಸಂಚರಿಸುವ ಭಾಗದಲ್ಲಿ ಕಂದಕ ನಿರ್ಮಾಣ ಮಾಡಬೇಕು ಎಂದರು.
ಕನ್ನಡಿಗ ವಿರಾಟ್ ಮಾತನಾಡಿ, ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳಿಂದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊಳ್ಳೇಗಾಲ, ಮೈಸೂರಿನ ವಿವಿಧ ಶಾಲಾ-ಕಾಲೇಜುಗಳಿಗೆ ಪ್ರತಿನಿತ್ಯ ತೆರಳುತ್ತಿದ್ದಾರೆ. ಸಮರ್ಪಕವಾಗಿ ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ, ಪರೀಕ್ಷೆಗಳು ಪ್ರಾರಂಭವಾಗಿದ್ದು ಮಕ್ಕಳು ತಮ್ಮ ಜೀವನದ ಭವಿಷ್ಯ ರೂಪಿಸಿಕೊಳ್ಳುವ ಪ್ರಮುಖ ಘಟ್ಟವಾಗಿದೆ ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ನಿಗದಿತ ಸಮಯಕ್ಕೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನೇಮತ್ ಪಾಷಾ ಮಾತನಾಡಿ, ಲೋಕನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳ ಹಾವಳಿ, ಸಮರ್ಪಕ ಬಸ್ ವ್ಯವಸ್ಥೆ ಹಾಗೂ ಹದಗೆಟ್ಟಿರುವ ರಸ್ತೆ ಅಭಿವೃದ್ಧಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ನಮ್ಮ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಎಇಇ ಸುರೇಂದ್ರ, ಆರ್.ಎಫ್.ಪ್ರಮೋದ್, ಕೆಎಸ್ಆರ್ಟಿಸಿ ಸಿಬ್ಬಂದಿಯವರು ಮನವಿ ಸ್ವೀಕರಿಸಿದರು.
ಬಳಿಕ ಮಾತನಾಡಿದ ಆರ್ಎಫ್ಒ ಪ್ರಮೋದ್, ಕಾಡು ಪ್ರಾಣಿಗಳಿಂದ ಬೆಳೆ ನಾಶವಾಗಿರುವುದು ಗಮನಕ್ಕೆ ಬಂದಿದ್ದು ಈಗಾಗಲೇ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ. ರೈತರ ಮನವಿಯ ಮೇರೆಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ರೈಲ್ವೆ ಬ್ಯಾರಿಕೆಡ್ ಆಳವಡಿಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತವಾಗಿತ್ತು ಇದನ್ನು ಮನಗಂಡ ಇನ್ಸ್ಪೆಕ್ಟರ್ ಆನಂದಮೂರ್ತಿ ಪ್ರತಿಭಟನಾಕಾರರ ಮನವೊಲಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ಕಲ್ಪಿಸಿದರು.
ಈ ಸಂದರ್ಭದಲ್ಲಿ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಸಂತೋಷ ಕುಮಾರ್ ರೈತ ಸಂಘದ ಮುಖಂಡ ಪ್ರಭುಸ್ವಾಮಿ, ಪವನ್ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ವಿರಾಟ್,ಪವನ್,ನಾಗೇಂದ್ರ, ಮಹದೇವಸ್ವಾಮಿ ಗುರುಸ್ವಾಮಿ, ಜಗ್ಗು ಮಹೇಶ್, ರಾಮಣ್ಣ, ತಾಂಡ ಶೆಟ್ಟಿ, ,ಮಲೈ ಮಹದೇಶ್ವರ ಡಿಆರ್ ಎಫ್ಓ ಸೋಮೆಂದ್ರ,ಹಾಗೂ ಇನ್ನಿತರರು ಹಾಜರಿದ್ದರು.





