ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಳೆದ ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕ್ಷೇತ್ರದ ಜನರಿಗೆ ಭರವಸೆ ನೀಡಿದಂತೆ ರಾಮಪುರ ಹೋಬಳಿ ವ್ಯಾಪ್ತಿಯ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಸಹಕಾರದಿಂದ ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ಸಿಕ್ಕಿರುವುದು ಸಂತಸ ತಂದಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯಲು ಹಾಗೂ ವ್ಯವಸಾಯಕ್ಕೆ ನೀರಿಲ್ಲದೆ ಕ್ಷೇತ್ರದ ಜನರು ನೆರೆಯ ರಾಜ್ಯ ಹಾಗೂ ಜಿಲ್ಲೆಗಳಿಗೆ ಗುಳೆ ಹೋಗುತ್ತಿದ್ದರು. ಈ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರಕ್ಕೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಕ್ಷೇತ್ರದ ರೈತರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಹಲವಾರು ವರ್ಷಗಳಿಂದ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ. ಇದರ ಫಲವಾಗಿ ಇಂದು 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ದೊರಕಿದೆ. ಇದು ಜೀವನದಲ್ಲಿ ಮರೆಯಲಾರದ ಕ್ಷಣ. ಈ ಯೋಜನೆ ಪೂರ್ಣಗೊಂಡರೆ ಒಟ್ಟಾರೆ ರಾಮಾಪುರ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ. ಗ್ಯಾರಂಟಿ ಯೋಜನೆಗಳ ನಡುವೆಯೂ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿರುವುದರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸಚಿವರಾದ ವೆಂಕಟೇಶ್, ಎಚ್.ಸಿ.ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ರವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಹನೂರು ವಿಧಾನಸಭಾ ಕ್ಷೇತ್ರದ ಪ್ರತಿ ಸಭೆಗಳಲ್ಲಿ ಕ್ಷೇತ್ರದ ಜನರಿಗೆ ಮುಂದಿನ ದಿನಗಳಲ್ಲಿ ಸಿಹಿ ಸುದ್ದಿ ಸಿಗಲಿದೆ ಎಂದು ಹೇಳುತ್ತಿದ್ದೆ, ಅದರಂತೆ ಕ್ಷೇತ್ರಕ್ಕೆ ಎಂದು ಶುಭ ಸೂಚನೆ ದೊರಕಿದೆ. ಈ ಯೋಜನೆ ಅನುಷ್ಠಾನಕ್ಕೆ ಕಾವೇರಿ ನೀರಾವರಿ ನಿಗಮದ ಎಸ್ ಇ ಮಹೇಶ್ ರವರ ಶ್ರಮವು ಇದೆ. ಒಟ್ಟಾರೆ ಕ್ಷೇತ್ರದ ಜನರ ಸಮಸ್ಯೆ ಶಾಶ್ವತವಾಗಿ ಬಗೆಹರಿದಿದೆ.
ಇದಲ್ಲದೆ ಕೆಸಿಫ್ 2ನೆ ಹಂತದ ಕಾಮಗಾರಿಗೂ ಅನುದಾನ ಬಿಡುಗಡೆಯಾಗಿರುವುದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಮುಂದಿನ ದಿನಗಳಲ್ಲಿ ಚಾಲನೆ ನೀಡಲಾಗುವುದು.
ಕ್ಷೇತ್ರ ವ್ಯಾಪ್ತಿಯಲ್ಲಿ ನಗರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಗೂ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಅನುದಾನ ತಂದು ಅಭಿವೃದ್ಧಿಪಡಿಸಲಾಗುವುದು ಎಂದರು.





