ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಅವಾಂತರಗಳು ಸೃಷ್ಟಿಯಾಗಿವೆ.
ಕಳೆದ ನಾಲ್ಕು ದಿನಗಳಿಂದ ಎಡಬಿಡದೇ ಮಳೆ ಸುರಿಯುತ್ತಿರುವ ಪರಿಣಾಮ ಗುಂಡ್ಲುಪೇಟೆ ಭಾಗದಲ್ಲಿ ಕೆರೆಗಳು ತುಂಬಿ ಹರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಗುಂಡ್ಲುಪೇಟೆ ತಾಲ್ಲೂಕಿನ ಹೊನ್ನಶೆಟ್ಟರಹುಂಡಿ ಗ್ರಾಮದಲ್ಲಿ ಕೆರೆಯೊಂದು ತುಂಬಿ ಏರಿ ಮೇಲೆ ನೀರು ಹರಿಯುತ್ತಿದೆ. ಮಳೆ ಹೀಗೆಯೇ ಮುಂದುವರಿದರೆ ಕೆರೆ ಒಡೆಯುವ ಭೀತಿ ಎದುರಾಗಿದೆ.
ಒಂದು ವೇಳೆ ಕೆರೆ ಒಡೆದು ಹೋದರೆ ರೈತರು ಬೆಳೆದ ನೂರಾರು ಹೆಕ್ಟೇರ್ ಫಸಲು ನಾಶವಾಗುವ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದ್ದು, ಜನತೆ ಎಚ್ಚರಿಕೆ ವಹಿಸಬೇಕಾಗಿ ಸೂಚನೆ ನೀಡಲಾಗಿದೆ.