Mysore
23
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ಪಾದಯಾತ್ರೆಗೆ ಸಿಕ್ಕಿದ ಪ್ರತಿಫಲ: 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಬಜೆಟ್‌ನಲ್ಲಿ ಅನುಮೋದನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಜ್ಜೀಪುರದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ,ಜಿಲ್ಲಾಧಿಕಾರಿ ಕಚೇರಿಗಳ ವರೆಗಿನ ಬೈಕ್ ರ್ಯಾಲಿ, ತಹಶೀಲ್ದಾರ್ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ಫಲವಾಗಿ ಇಂದು 490 ಕೋಟಿ ವೆಚ್ಚದ ನೀರಾವರಿ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ಸಿಕ್ಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗೌಡೇಗೌಡ ತಿಳಿಸಿದರು.

ಹನೂರು ಪಟ್ಟಣದ ನಾಗಪ್ಪ ವೃತ್ತದಲ್ಲಿ ಉಡುತೊರೆ ಹಳ್ಳ ಜಲಾಶಯದ ಏತ ನೀರಾವರಿ ಹಾಗೂ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸುವ 490 ಕೋಟಿ ವೆಚ್ಚದ ಯೋಜನೆಗೆ ಬಜೆಟ್ ನಲ್ಲಿ ಅನುಮೋದನೆ ದೊರೆತ ಹಿನ್ನೆಲೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ ನಂತರ ಅವರು ಮಾತನಾಡಿದರು.

ಹನೂರು ವಿಧಾನಸಭಾ ಕ್ಷೇತ್ರಗಳ ಪ್ರಮುಖ ಜಲಾಶಯ ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ ಹಲವಾರು ವರ್ಷಗಳಿಂದ ನಿರಂತರವಾಗಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2020- 21ರಲ್ಲಿ ನಮ್ಮ ಪ್ರತಿಭಟನೆಗೆ ಮಣಿದ ಸರ್ಕಾರ 180 ಕೋಟಿ ವೆಚ್ಚದಲ್ಲಿ ನೀರು ತುಂಬಿಸುವ ಯೋಜನೆಗೆ ಡಿಪಿಆರ್ ಮಾಡಿಸಿತ್ತು. ಆದರೆ ಬಜೆಟ್ ನಲ್ಲಿ ಇದುವರೆಗೂ ಅನುದಾನ ಬಿಡುಗಡೆಯಾಗದ ಹಿನ್ನೆಲೆ ಯೋಜನೆ ಹಳ್ಳ ಹಿಡಿದಿತ್ತು. ಮತ್ತೆ ಕರ್ನಾಟಕ ರಾಜ್ಯವು ರೈತ ಸಂಘದ ವತಿಯಿಂದ ನಿರಂತರ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಪಾದಯಾತ್ರೆಯ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಅವರಿಗೆ ಹನೂರು ವಿಧಾನಸಭಾ ಕ್ಷೇತ್ರದ ಸಮಸ್ತ ರೈತ ಬಾಂಧವರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಈ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ವೆಂಕಟೇಶ್ ರವರು ಶಾಸಕರಾದ ಎಂ ಆರ್ ಮಂಜುನಾಥ್ ರವರು ಮಾಜಿ ಶಾಸಕರಾದ ಆರ್ ನರೇಂದ್ರ ಅವರು ಸರ್ಕಾರದ ಗಮನ ಸೆಳೆದಿದ್ದಾರೆ ಇವರಿಗೂ ಸಹ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಹನೂರು ಭಾಗದಲ್ಲಿ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಕುಸಿದು ನೀರಿನ ವ್ಯವಸ್ಥೆ ಇಲ್ಲದೆ ಇರುವುದರಿಂದ ರೈತರು ಗೂಳೆ ಹೋಗುತ್ತಿದ್ದಾರೆ. ಈ ಸಂಬಂಧ ಕಾವೇರಿ ನದಿ ಮೂಲದಿಂದ ಜಲಾಶಯಗಳು ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ ನಿರಂತರವಾಗಿ ಪ್ರತಿಭಟನೆ ಮಾಡುತ್ತಾ ಬಂದಿದ್ದೇವೆ ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿರಲಿಲ್ಲ ಕಳೆದ ಫೆಬ್ರವರಿ 25ರಂದು ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಟ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನಮ್ಮನ್ನು ಕರೆಸಿ ರೈತರ ಸಮಸ್ಯೆ ಏನೆಂಬುದು ನಮಗೂ ತಿಳಿದಿದೆ.ನಿಮ್ಮ ಮನವಿಯಂತೆ 490 ಕೋಟಿ ವೆಚ್ಚದ ಕಾಮಗಾರಿಗೆ ಬಜೆಟ್ ನಲ್ಲಿ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ನಮ್ಮ ಮನವಿಗೆ ಸ್ಪಂದಿಸಿ ಬಜೆಟ್ ನಲ್ಲಿ ಘೋಷಣೆ ಮಾಡಿರುವುದು ಸಂತಸ ತಂದಿದೆ, ಈ ಕೂಡಲೇ ಹಣ ಬಿಡುಗಡೆ ಮಾಡಿ ಯೋಜನೆ ಪ್ರಾರಂಭಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಪಳನಿ ಸ್ವಾಮಿ ಹಿರಿಯ ಮುಖಂಡರಾದ ರವಿ ನಾಯ್ಡು, ನಾಗರಾಜು ಸೇರಿದಂತೆ ನೂರಾರು ರೈತ ಮುಖಂಡರು ಪಾಲ್ಗೊಂಡಿದ್ದರು.

Tags:
error: Content is protected !!