ಚಾಮರಾಜನಗರ

ಮಹಾಲಯ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಎಣ್ಣೆಮಜ್ಜನ ಸೇವೆ

ಹನೂರು: ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಇಂದು ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಹಾಲಯ ಜಾತ್ರೆ ಅಮಾವಾಸ್ಯೆ ಅಂಗವಾಗಿ ದೇಗುಲವನ್ನು ವಿವಿಧ ಬಗೆಯ ಪುಷ್ಪಗಳು ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಸ್ಥಾನದ ಹೊರ ಆವರಣ, ಒಳ ಆವರಣ ರಾಜಗೋಪುರ, ಬಸ್ ನಿಲ್ದಾಣ ಸೇರಿದಂತೆ ಇನ್ನಿತರ ಕಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಇಂದು ಸಂಜೆ ಬೇಡಕಂಪಣ ಸರದಿ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕ ನೆರವೇರಿಸಿದರು. ಬಳಿಕ ಎಣ್ಣೆ ಮಜ್ಜನ ಸೇವೆ ನೆರವೇರಿಸಿ ಮಾದಪ್ಪನ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಯಿತು. ದೀಪ ದೀಪದಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು. ಈ ಮೂಲಕ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆಯು ಸಾಂಪ್ರದಾಯಿಕವಾಗಿ ನೆರವೇರಿತು.

ಇಂದು ಬೆಳಿಗ್ಗೆ 8 ಗಂಟೆಯ ಸಮಯದಲ್ಲಿ ನಡೆದ ಬೆಳ್ಳಿ ರಥೋತ್ಸವ, ಹುಲಿವಾಹನ, ರುದ್ರಾಕ್ಷಿ ಮಂಟಪ ಬಸವ ವಾಹನ, ರಾತ್ರಿ ಚಿನ್ನದ ರಥೋತ್ಸವದಲ್ಲಿ ಸಾವಿರಾರು ಸಾರ್ವಜನಿಕರು ಪಾಲ್ಗೊಂಡಿದ್ದರು. ಹರಕೆ ಹೊತ್ತು ಸಾರ್ವಜನಿಕರು ದೇಗುಲದ ಸುತ್ತ ದಂಡಿನ ಕೋಲು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು. ಅಲ್ಲಿ ನೆರೆದಿದ್ದ ಎಲ್ಲರೂ ಮಹದೇಶ್ವರನಿಗೆ ಘೋಷಣೆ ಕೂಗಿ ಭಕ್ತಿ ಭಾವ ಮೆರೆದರು.

ಮಹಾಲಯ ಅಮಾವಾಸ್ಯೆ ಜಾತ್ರೆಗೆ ಆಗಮಿಸಿದ್ದ ಸಾವಿರಾರು ಜನರು ಮುಡಿ ಸೇವೆ, ಉರುಳು ಸೇವೆ, ಪಂಜಿನ ಸೇವೆ ಹಾಗೂ ರಜಾ ಹೊಡೆಯುವ ಸೇವೆಗಳಲ್ಲಿ ಭಾಗವಹಿಸಿ ಸರತಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು.

ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದ ಹಿನ್ನೆಲೆ ಉರುಳು ಸೇವೆಗೆ ತೊಂದರೆಯಾಗಿತ್ತು. ಈ ನಿಟ್ಟಿನಲ್ಲಿ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಹೊರ ಆವರಣದಲ್ಲಿ ಬಿಸಿಲಿನ ವೇಳೆ ನಿರಂತರವಾಗಿ ನೀರು ಸಿಂಪಡಣೆ ಮಾಡುವ ಮೂಲಕ ಸಾರ್ವಜನಿಕರ ಉರುಳು ಸೇವೆಗೆ ಅವಕಾಶ ಮಾಡಿಕೊಟ್ಟರು.

ಸಾರ್ವಜನಿಕರಿಗೆ ಸಂತಸ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದಲ್ಲಿ ಇತ್ತೀಚೆಗೆ ಕೆಲವೊಂದು ಬದಲಾವಣೆ ತಂದು ಬೆಳಗಿನ ಸಮಯದಲ್ಲಿ ಉಪ್ಪಿಟ್ಟು, ಕೇಸರಿಬಾತು, ಪಲಾವ್, ಚಿತ್ರಾನ್ನ ಪುಳಿಯೋಗರೆ ಮಾಡಲಾಗುತ್ತಿದೆ. ಅದೇ ರೀತಿ ಮಧ್ಯಾಹ್ನದ ಊಟಕ್ಕೆ ಪಾಯಸ, ಸಿಹಿ ಬೂಂದಿ, ಅನ್ನ, ಸಾಂಬಾರ್, ಪಲ್ಯ, ಮಜ್ಜಿಗೆ ಹುಳಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಪ್ರಸಾದ ಬದಲಾವಣೆ ಮಾಡಿರುವುದಕ್ಕೆ ಬೆಂಗಳೂರಿನ ಶಾಂತಿ ಸಾಗರ್ ಹೋಟೆಲ್ ಮಾಲೀಕರು ಪ್ರಸಾದ ಸ್ವೀಕರಿಸಿ ಪ್ರಾಧಿಕಾರದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಸಾದ ಬಡಿಸಿದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನದ ಪರಿಶೀಲನೆಗೆ ತೆರಳಿದ ಕಾರ್ಯದರ್ಶಿಗಳು ಸ್ವತಃ ಸಾರ್ವಜನಿಕರಿಗೆ ಪ್ರಸಾದ ಬಡಿಸಿದ್ದಾರೆ. ಬಳಿಕ ಅಲ್ಲಿ ಜನರ ಜೊತೆಯಲ್ಲಿ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಅವರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ.

ಮಹಾಲಯ ಜಾತ್ರಾ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ದಾಸೋಹದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿ, ಗುಣಮಟ್ಟದ ತರಕಾರಿ ಹಾಗೂ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಪ್ರಸಾದ ತಯಾರು ಮಾಡಿ ವಿತರಿಸಲಾಗುತ್ತಿದೆ. ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆಯುವ ಜನರಿಗೆ ಶುದ್ಧ ಕುಡಿಯುವ ನೀರು, ಜರ್ಮನ್ ಟೆಂಟ್ ಗಳನ್ನು ಹಾಕುವ ಮೂಲಕ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

6 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

7 hours ago